Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಹುಲಿಕಲ್ ಘಾಟ್ ರಸ್ತೆ ನಿರ್ಮಾಣದ ವೇಳೆ ಮರಣ ಹೊಂದಿದ ಕಾರ್ಮಿಕರ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರದ ಚೆಕ್ಗಳನ್ನು ವಿತರಿಸಲಾಯಿತು.
ಬಳಿಕ ಶಿವಮೊಗ್ಗ ಜಿಲ್ಲೆಯ ಹಿತದೃಷ್ಟಿಯಿಂದ ಸಭೆಯಲ್ಲಿ ಪಕ್ಷಾತೀತವಾಗಿ ಎರಡು ಅತ್ಯಂತ ಪ್ರಮುಖ ಸರ್ವಾನುಮತದ ನಿರ್ಣಯಗಳನ್ನು ಕೈಗೊಳ್ಳಲಾಯಿತು.
1️⃣ ಬೇಸೂರು ಅಣುಸ್ಥಾವರಕ್ಕೆ ಸ್ಪಷ್ಟ ವಿರೋಧ: ಮಲೆನಾಡು ಭಾಗದ ಸೂಕ್ಷ್ಮ ಪರಿಸರ ಮತ್ತು ಈಗಾಗಲೇ ಮುಳುಗಡೆಯಿಂದ ಸಂಕಷ್ಟ ಎದುರಿಸಿರುವ ಸಾಗರ ತಾಲ್ಲೂಕಿನ ಬೇಸೂರು ಗ್ರಾಮದ ರೈತರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಇಲ್ಲಿ ಅಣುಸ್ಥಾವರ ಸ್ಥಾಪಿಸಲು ನಾವು ಬಿಡುವುದಿಲ್ಲ ಎಂದು ಸಭೆಯಲ್ಲಿ ಸರ್ವಾನುಮತದ ದೃಢ ನಿರ್ಣಯ ಕೈಗೊಳ್ಳಲಾಯಿತು.
2️⃣ ಹೈಕೋರ್ಟ್ ಸಂಚಾರಿ ಪೀಠಕ್ಕೆ ಒತ್ತಾಯ: ಮಧ್ಯ ಕರ್ನಾಟಕ ಭಾಗದ ಜನರಿಗೆ ಹಾಗೂ ವಕೀಲರ ಸಂಘದ ದಶಕಗಳ ಹೋರಾಟಕ್ಕೆ ನ್ಯಾಯ ಒದಗಿಸಲು ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಈ ಕುರಿತು ಸಹಿ ಹೊಂದಿದ ಪ್ರತಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಶೀಘ್ರದಲ್ಲೇ ಒತ್ತಡ ತರಲಾಗುವುದು.
Madhu Bangarappa “ಸಭೆಯಲ್ಲಿ ಬಹು ಮುಖ್ಯವಾಗಿ ಚರ್ಚಿಸಲಾದ ವಿಷಯಗಳು”
♦️ಆರೋಗ್ಯ ವಲಯದ ಸುಧಾರಣೆ: ಮೆಗ್ಗಾನ್ ಆಸ್ಪತ್ರೆಯ ಸಮಸ್ಯೆಗಳು ಹಾಗೂ ಜಿಲ್ಲೆಯಲ್ಲಿರುವ ವೈದ್ಯರ ಕೊರತೆಯನ್ನು ನೀಗಿಸಲು ಮುಂದಿನ 10 ರಿಂದ 15 ದಿನಗಳ ಒಳಗಾಗಿ ವಿಶೇಷ ಉಸ್ತುವಾರಿ ಸಮಿತಿಯನ್ನು ರಚಿಸಿ, ಸೂಕ್ತ ಕ್ರಮ ಕೈಗೊಳ್ಳಲು ಭರವಸೆ ನೀಡಲಾಗಿದೆ.
♦️ಅಕ್ರಮ ಮರಳು ಸಾಗಣೆಗೆ ಬ್ರೇಕ್: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆಯಿಂದ ಸರ್ಕಾರಕ್ಕೆ ಆಗುತ್ತಿರುವ ನಷ್ಟವನ್ನು ತಡೆಯಲು ಮತ್ತು ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳಿಗೆ ಕಠಿಣ ನಿರ್ದೇಶನ ನೀಡಲಾಗಿದೆ. ಅಧಿಕಾರಿಗಳ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ.
♦️ಮಳೆಗಾಲದ ಮುನ್ನೆಚ್ಚರಿಕೆ: ಶಾಲಾ ಆವರಣಗಳಲ್ಲಿ ಬಿದ್ದಿರುವ ಹಾಗೂ ಅಪಾಯಕಾರಿಯಾಗಿರುವ ಮರಗಳು ಮತ್ತು ಮೆಸ್ಕಾನ್ ವಿದ್ಯುತ್ ತಂತಿಗಳನ್ನು ತ್ವರಿತವಾಗಿ ತೆರವುಗೊಳಿಸಿ ಸಾರ್ವಜನಿಕರು ಹಾಗೂ ಮಕ್ಕಳ ಸುರಕ್ಷತೆ ಕಾಯಲು ಜಿಲ್ಲಾಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆಗೆ ತಾಕೀತು ಮಾಡಲಾಗಿದೆ.
♦️ರೈತರನ್ನು ಅರಣ್ಯ ಇಲಾಖೆಯವರು ವಿಶ್ವಾಸಕ್ಕೆ ತೆಗೆದುಕೊಳ್ಳಿ: ಅರಣ್ಯ ಕಾಯ್ದೆಯ ಚೌಕಟ್ಟಿನಲ್ಲಿ ಕೆಲಸ ಮಾಡುವಾಗ ಸ್ಥಳೀಯ ರೈತರನ್ನು ಮತ್ತು ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಾರ್ವಜನಿಕರಲ್ಲಿ ಆತಂಕ ಮೂಡಿಸುವ ಧೋರಣೆಯನ್ನು ಒಪ್ಪಲು ಸಾಧ್ಯವಿಲ್ಲ. ಯಾವುದೇ ಕ್ರಮ ಕೈಗೊಳ್ಳುವ ಮುನ್ನ ಕಡ್ಡಾಯವಾಗಿ ಪೂರ್ವಭಾವಿ ಸಭೆ ಕರೆಯಬೇಕು ಎಂದು ನಿರ್ದೇಶನ ನೀಡಿದೆ.
ಸಭೆಯಲ್ಲಿ ಜಿಲ್ಲೆಯ ಎಲ್ಲಾ ಗೌರವಾನ್ವಿತ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಹಾಗೂ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
