Monday, June 1, 2026
Monday, June 1, 2026

ಅಕ್ರಮ ಮರಳು ದಂಧೆ: ಜಿಲ್ಲೆಯಲ್ಲಿ 17.000 ಮೆ.ಟನ್ ಮರಳು ಮತ್ತು 52 ವಾಹನ ವಶಕ್ಕೆ

Date:

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಾಣಿಕೆ ದಂಧೆಯ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆಯು ಶನಿವಾರ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಮರಳು ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದೆ.
ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲ್ಲೂಕುಗಳಲ್ಲಿ ಹರಿಯುವ ತುಂಗಭದ್ರಾ ಮತ್ತು ಶರಾವತಿ ನದಿ ಪಾತ್ರದ ಸ್ಥಳಗಳಲ್ಲಿ ವ್ಯಾಪಕವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿರುವ ಕುರಿತು ಗೌರವಾನ್ವಿತ ಕರ್ನಾಟಕ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಲು ಹಾಗೂ ಶಿವಮೊಗ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಗಳ ಕಛೇರಿಯ ದಾಖಲಾತಿಗಳನ್ನು ಪರಿಶೀಲಿಸುವಂತೆ ಲೋಕಾಯುಕ್ತರು ಆದೇಶಿಸಿದ್ದರು.
15 ತಂಡಗಳಿಂದ 25 ಕಡೆ ಏಕಕಾಲದಲ್ಲಿ ದಾಳಿ:
ಲೋಕಾಯುಕ್ತ ಆದೇಶದ ಹಿನ್ನೆಲೆಯಲ್ಲಿ, ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್. ಕೌಲಾಪುರೆ ಹಾಗೂ ಪೊಲೀಸ್ ಉಪಾಧೀಕ್ಷಕರಾದ ಬಿ.ಪಿ. ಚಂದ್ರಶೇಖರ್ ಅವರ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆಯಲ್ಲಿ ಬೃಹತ್ ತಂಡವನ್ನು ರಚಿಸಲಾಗಿತ್ತು. ಕರ್ನಾಟಕ ಲೋಕಾಯುಕ್ತದ ವಿವಿಧ ಘಟಕಗಳನ್ನೊಳಗೊಂಡ 15 ಪ್ರತ್ಯೇಕ ತಂಡಗಳು ಜಿಲ್ಲೆಯ 25ಕ್ಕೂ ಹೆಚ್ಚು ಅಕ್ರಮ ಮರಳು ತಾಣಗಳ ಮೇಲೆ ಶನಿವಾರ ಏಕಕಾಲದಲ್ಲಿ ದಾಳಿ ನಡೆಸಿವೆ.
ಮರಳು, ವಾಹನಗಳು ವಶಕ್ಕೆ:
ಈ ಕಾರ್ಯಾಚರಣೆಯಲ್ಲಿ 17,000 ಮೆಟ್ರಿಕ್ ಟನ್ ಅಕ್ರಮ ಮರಳು ಸಂಗ್ರಹಣೆಯನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಇದರೊಂದಿಗೆ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಗೆ ಬಳಸಲಾಗುತ್ತಿದ್ದ ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಟ್ರ್ಯಾಕ್ಟರ್‌ಗಳು, ಬೋಟ್‌ಗಳು ಹಾಗೂ ಮರಳು ಫಿಲ್ಟರ್ ಮಾಡುವ ಯಂತ್ರಗಳು ಸೇರಿದಂತೆ ಒಟ್ಟು 52 ವಾಹನ/ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶಿವಮೊಗ್ಗದ ಹಿರಿಯ ಭೂ ವಿಜ್ಞಾನಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಛೇರಿಯ ಮೇಲೂ ಶೋಧನಾ ವಾರೆಂಟ್ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕಛೇರಿಯ ಪ್ರಮುಖ ದಾಖಲೆಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಿದ್ದಾರೆ.
ಜಂಟಿ ಕ್ರಮಕ್ಕೆ ಸೂಚನೆ:
ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರ್.ಟಿ.ಓ, ಅರಣ್ಯ ಇಲಾಖೆ, ಸಹಾಯಕ ಭೂ ದಾಖಲಾತಿ ಇಲಾಖೆ, ಪರಿಸರ ಮಾಲಿನ್ಯ ಮತ್ತು ನಿಯಂತ್ರಣ ಇಲಾಖೆ ಹಾಗೂ ಪಿ.ಡಬ್ಲ್ಯುಡಿ ಇಲಾಖೆಗಳಿಗೆ ಲೋಕಾಯುಕ್ತರು ಸೂಚನೆ ನೀಡಿದ್ದಾರೆ.
ಈ ಜಂಟಿ ಕಾರ್ಯಾಚರಣೆಯಲ್ಲಿ ಶಿವಮೊಗ್ಗ ಮಾತ್ರವಲ್ಲದೆ ದಾವಣಗೆರೆ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಬೆಳಗಾವಿ ಜಿಲ್ಲೆಗಳ ಲೋಕಾಯುಕ್ತ ಘಟಕಗಳ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಭಾಗವಹಿಸಿದ್ದರು ಎಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ದೇಗುಲದ ವಾಸ್ತು- ವಿನ್ಯಾಸ ಮತ್ತು ಮನುಷ್ಯ ಶರೀರ, ಒಂದು ವಿವೇಚನೆ ...

Klive Special Article ದೇವಸ್ಥಾನದ ವಾಸ್ತುಶಿಲ್ಪ ಮತ್ತು ಮಾನವ ಶರೀರ ರಚನೆಯ...

B.Y. Raghavendra ದೇಶದ ತಳಮಟ್ಟದ ಸಾಧಕರ ಯಶಸ್ಸಿನ ಕತೆ ತಿಳಿಸುವ ಪ್ರಧಾನಿ ಮೋದಿ ಅವರ “ಮನ್ ಕಿ ಬಾತ್”- ಬಿ.ವೈ.ರಾಘವೇಂದ್ರ

B.Y. Raghavendra ಶಿಕಾರಿಪುರ ತಾಲ್ಲೂಕಿನ ಅಂಬಾರಗೊಪ್ಪದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಸಾರ್ವಜನಿಕರೊಂದಿಗೆ...