S.N.Channabasappaಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರದಲ್ಲಿ ನಟ ಪ್ರಕಾಶ್ ರಾಜ್ ಅವರ ಪಾತ್ರವನ್ನು ತನಿಖೆಗೊಳಪಡಿಸಬೇಕು ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಧರ್ಮಸ್ಥಳದ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಲಾದ “ಬುರುಡೆ ಗ್ಯಾಂಗ್” ಜೊತೆಗೆ ಪ್ರಕಾಶ್ ರಾಜ್ ಕೈಜೋಡಿಸಿರುವ ಶಂಕೆಗಳು ವ್ಯಕ್ತವಾಗುತ್ತಿವೆ ಎಂದು ಹೇಳಿದ್ದಾರೆ.
ಪ್ರಕಾಶ್ ರಾಜ್ ಅವರಿಗೆ ಯಾವುದೇ ಪೂರ್ವ ಪರಿಚಯವಿಲ್ಲದ ವ್ಯಕ್ತಿಗಳು ನೇರವಾಗಿ ಸಂಪರ್ಕ ಸಾಧಿಸಿದ್ದೇಕೆ, ಧರ್ಮಸ್ಥಳಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ಅವರು ಸಲಹೆ ನೀಡಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಚನ್ನಬಸಪ್ಪ ಎತ್ತಿದ್ದಾರೆ.
ಇದೇ ವೇಳೆ, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಪ್ರಕಾಶ್ ರಾಜ್ ಅವರನ್ನು ಇದುವರೆಗೆ ವಿಚಾರಣೆಗೆ ಕರೆಯದಿರುವುದರ ಬಗ್ಗೆಯೂ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣದೊಂದಿಗೆ ತಮ್ಮ ಸಂಬಂಧವಿಲ್ಲ ಎಂದು ಹೇಳಿಕೊಳ್ಳುವ ಪ್ರಕಾಶ್ ರಾಜ್, ಆರಂಭಿಕ ಹಂತದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂಬಂಧಿತ ವ್ಯಕ್ತಿಗಳ ಪರವಾಗಿ ಪೋಸ್ಟ್ಗಳನ್ನು ಪ್ರಕಟಿಸಿದ್ದೇಕೆ ಎಂಬ ಪ್ರಶ್ನೆಯನ್ನೂ ಶಾಸಕರು ಮುಂದಿಟ್ಟಿದ್ದಾರೆ.
S.N.Channabasappa ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಅವರ ಪಾತ್ರದ ಕುರಿತು ಸಮಗ್ರ ತನಿಖೆ ನಡೆಸುವ ಅಗತ್ಯವಿದೆ ಎಂದು ಚನ್ನಬಸಪ್ಪ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಸರ್ಕಾರವು ಯಾವುದೇ ಒತ್ತಡಗಳಿಗೆ ಮಣಿಯದೆ, ನಟ ಪ್ರಕಾಶ್ ರಾಜ್ ಅವರನ್ನು ವಿಚಾರಣೆಗೆ ಒಳಪಡಿಸಿ, ಅಗತ್ಯವಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
