ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆ ಪೊಲೀಸರು ಹೈ ಅಲರ್ಟ್ ಘೋಷಿಸಿ ತೀವ್ರ ತಪಾಸಣೆ ಮತ್ತು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ದುಷ್ಕರ್ಮಿಗಳು ಇ-ಮೇಲ್ ಮೂಲಕ ನ್ಯಾಯಾಲಯದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದು, ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಜಿಲ್ಲಾ ನ್ಯಾಯಾಲಯ ಕಟ್ಟಡಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಆತಂಕ ಸೃಷ್ಟಿಸಿದೆ. ದುಷ್ಕರ್ಮಿಗಳು ನ್ಯಾಯಾಲಯದಲ್ಲಿ ಐದು ಮಿನಿ ಸಿಲಿಂಡರ್ಗಳು ಹಾಗೂ ಕಬ್ಬಿಣದ ತುಂಡುಗಳನ್ನು ಬಳಸಿ ಸ್ಫೋಟ ನಡೆಸುವುದಾಗಿ ಉಲ್ಲೇಖಿಸಿ ಮುಖ್ಯ ನ್ಯಾಯಾಧೀಶರಿಗೆ ತಡರಾತ್ರಿ ಸುಮಾರು ಒಂದು ಗಂಟೆಯವರೆಗೆ ಇ-ಮೇಲ್ ಕಳುಹಿಸಿದ್ದಾರೆ.
ಬೆದರಿಕೆ ಮಾಹಿತಿ ದೊರೆಯುತ್ತಿದ್ದಂತೆಯೇ ಶ್ವಾನ ದಳ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (BDS) ಸಿಬ್ಬಂದಿ ನ್ಯಾಯಾಲಯ ಆವರಣದಲ್ಲಿ ತೀವ್ರ ತಪಾಸಣೆ ನಡೆಸಿದರು. ನ್ಯಾಯಾಲಯದ ಪ್ರತಿಯೊಂದು ವಿಭಾಗ ಹಾಗೂ ಕಟ್ಟಡದ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲಿಸಲಾಗುತ್ತಿದೆ.
ಈ ಸಂಬಂಧ ನ್ಯಾಯಾಲಯದ ಅಧಿಕಾರಿಯೊಬ್ಬರು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇ-ಮೇಲ್ ಕಳುಹಿಸಿದವರ ಪತ್ತೆಗೆ ಮುಂದಾಗಿದ್ದಾರೆ.
ಘಟನಾ ಸ್ಥಳಕ್ಕೆ ಡಿಎಸ್ಪಿಗಳಾದ ಶೀಲವಂತ ಹಾಗೂ ಸಂಜೀವ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭದ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಇದಾಗ್ಯೂ, ಬಿಗಿ ಪೊಲೀಸ್ ಭದ್ರತೆಯ ನಡುವೆ ನ್ಯಾಯಾಲಯದ ಕಲಾಪಗಳು ಎಂದಿನಂತೆ ಮುಂದುವರಿದಿವೆ. ಮಧ್ಯಾಹ್ನ ಎರಡು ಗಂಟೆಯೊಳಗೆ ಸ್ಫೋಟ ನಡೆಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.
