ಶಿವಮೊಗ್ಗ ಜಿಲ್ಲೆಯಾದ್ಯಂತ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ರೈತರ ಪ್ರಮುಖ ಸಮಸ್ಯೆಗಳ ಕುರಿತು ಇಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉನ್ನತಾಧಿಕಾರಿಗಳ ತುರ್ತು ಪರಾಮರ್ಶನಾ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರು, ಸಂಕಷ್ಟದಲ್ಲಿರುವ ರೈತರಿಗೆ ತ್ವರಿತ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ಸಮಸ್ಯೆಗೆ ವಿಳಂಬವಿಲ್ಲದೆ ಸ್ಪಂದಿಸಬೇಕೆಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಸಭೆಯಲ್ಲಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ಅಡಿಕೆ ಬೆಳೆಗಾರರ ಸಮಸ್ಯೆ ಪ್ರಮುಖವಾಗಿ ಚರ್ಚೆಗೆ ಬಂದಿತು. ಶಿವಮೊಗ್ಗ ಗ್ರಾಮಾಂತರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನೆಲಕಚ್ಚಿರುವ ಅಡಿಕೆ ಮರಗಳಿಗೆ ಪರಿಹಾರ ಒದಗಿಸುವ ಕುರಿತು ಸರ್ಕಾರಕ್ಕೆ ಸಲ್ಲಿಸಲಾಗಿರುವ ಪ್ರಸ್ತಾವನೆಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು.
ಇದೇ ವೇಳೆ, 2024-25ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (R-WBCIS) ಅಡಿಯಲ್ಲಿ ರೈತರಿಗೆ ಪರಿಹಾರ ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲಾಯಿತು. ಅರ್ಹ ರೈತರಿಗೆ ನ್ಯಾಯ ದೊರಕುವಂತೆ ತ್ವರಿತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಜಿಲ್ಲೆಯ ಪ್ರಮುಖ ನದಿಗಳ ಹರಿವು ಹಾಗೂ ಜಲಾಶಯಗಳ ನೀರಿನ ಸಂಗ್ರಹದ ಸ್ಥಿತಿಗತಿಯನ್ನೂ ಸಭೆಯಲ್ಲಿ ಪರಿಶೀಲಿಸಲಾಯಿತು. ಲಿಫ್ಟ್ ಇರಿಗೇಶನ್ ಪಂಪ್ಗಳು, ಮೋಟಾರುಗಳ ಕಾರ್ಯಕ್ಷಮತೆ ಮತ್ತು ವಿದ್ಯುತ್ ಬಿಲ್ ನಿರ್ವಹಣೆ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಹಾಳಾಗಿರುವ ಮಳೆಮಾಪನ ಕೇಂದ್ರಗಳನ್ನು ತಕ್ಷಣ ದುರಸ್ತಿಗೊಳಿಸಿ, ನಿಖರ ಹವಾಮಾನ ಮಾಹಿತಿ ದೊರಕುವಂತೆ ಕ್ರಮ ವಹಿಸಲು ಸಭೆಯಲ್ಲಿ ಆದೇಶಿಸಲಾಯಿತು.
ಮುಂಬರುವ ದಿನಗಳಲ್ಲಿ ರೈತರಿಗೆ ಯಾವುದೇ ಕೊರತೆ ಉಂಟಾಗದಂತೆ ಮೇವು, ರಾಸಾಯನಿಕ ಗೊಬ್ಬರ ಸೇರಿದಂತೆ ಅಗತ್ಯ ಕೃಷಿ ಪರಿಕರಗಳ ದಾಸ್ತಾನು, ವಿತರಣೆ ಹಾಗೂ ಉಳಿಕೆ ಪ್ರಮಾಣದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರ ಹಿತಾಸಕ್ತಿಗೆ ಯಾವುದೇ ರೀತಿಯ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ಬಿ.ವೈ. ರಾಘವೇಂದ್ರ ಸ್ಪಷ್ಟಪಡಿಸಿದರು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಬಾಕಿ ಇರುವ ಪ್ರಸ್ತಾವನೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಅವರು ಸೂಚನೆ ನೀಡಿದರು.
