ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಡ್ಡಮತದಾನ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರಗ ಜ್ಞಾನೇಂದ್ರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯಂತಹ ಪಕ್ಷಕ್ಕೆ ದ್ರೋಹ ಮಾಡುವ ಕೆಲಸ ಯಾರೂ ಮಾಡಬಾರದಿತ್ತು. ಅಡ್ಡಮತದಾನದ ಬಗ್ಗೆ ಪಕ್ಷದಲ್ಲಿ ಬಹಳ ನೋವಿದ್ದು, ಈ ವಿಚಾರವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿದರು.
ಅಡ್ಡಮತದಾನ ಮಾಡಿದವರನ್ನು ಪತ್ತೆಹಚ್ಚಲು ಸಮಿತಿಯನ್ನು ರಚಿಸಲಾಗಿದ್ದು, ಒಂದು ಅಥವಾ ಎರಡು ದಿನಗಳಲ್ಲಿ ವರದಿ ಬರಲಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ತನ್ನ ಶಾಸಕರನ್ನು ಒಟ್ಟುಗೂಡಿಸಿ ಕಟ್ಟುನಿಟ್ಟಿನ ನಿಗಾದಲ್ಲಿ ಇಟ್ಟಿತ್ತು. ಆದರೆ ನಮ್ಮ ನಾಯಕರು ಶಾಸಕರನ್ನು ನಂಬಿದ್ದರು. ಆದರೂ ಪಕ್ಷದೊಳಗೆ ವಿಶ್ವಾಸಘಾತಕತನ ನಡೆದಿರುವುದು ನೋವು ತಂದಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ವಿಚಾರ
ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷರು ನೋವಿನಿಂದ ಆ ರೀತಿಯ ಹೇಳಿಕೆ ನೀಡಿದ್ದರು. ಧರ್ಮಸ್ಥಳವು ಪವಿತ್ರ ಕ್ಷೇತ್ರವಾಗಿದ್ದು, ಅಲ್ಲಿ ರಾಜಕೀಯವನ್ನು ತರಬಾರದು ಎಂಬ ಅಭಿಪ್ರಾಯವನ್ನು ಪಕ್ಷದ ಹಿರಿಯರು ವ್ಯಕ್ತಪಡಿಸಿದ್ದಾರೆ ಎಂದರು.
ಹಿರಿಯ ನಾಯಕರ ಸಲಹೆಯ ಮೇರೆಗೆ ಅಧ್ಯಕ್ಷರು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ. ಅಡ್ಡಮತದಾನದ ಕುರಿತು ರಚನೆಯಾಗಿರುವ ಸಮಿತಿ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಎಲ್ಲ ಸತ್ಯಾಂಶಗಳು ಬಹಿರಂಗವಾಗಲಿವೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
