ಜೀವನ ಅಮೂಲ್ಯವಾದದ್ದು, ಅದನ್ನು ಮಾದಕ ವಸ್ತುಗಳಿಗೆ ಬಲಿ ಕೊಡಬೇಡಬಾರದು. ಉತ್ತಮ ಅಭ್ಯಾಸ ಮತ್ತು ಹವ್ಯಾಸಗಳ ಮೂಲಕ ವಿದ್ಯಾರ್ಥಿಗಳು ಉತ್ತಮ ಜೀವನ ಕಟ್ಟಿಕೊಳ್ಳಬೇಕೆಂದು ಹಿರಿಯ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಿಕ್ಷಣ ಇಲಾಖೆ, ಸರ್ಕಾರಿ ದುರ್ಗಿಗುಡಿ ಶಾಲೆ ಹಾಗೂ ಸುರಭಿ ಮಹಿಳಾ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ದುರ್ಗಿಗುಡಿ ಶಾಲೆಯಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಅಂತರರಾಷ್ಟ್ರೀಯ ಮಾದಕ ವಸ್ತು ಸೇವನೆ ಹಾಗೂ ನಿಷೇಧ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವ್ಯಸನ ಮುಕ್ತ, ಸದೃಢ ಮತ್ತು ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಮುಖ್ಯವಾಗಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು ಎಂದ ಅವರು ಮಕ್ಕಳು ಸಮಾಜಮುಖಿಯಾಗಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಮ್ಮ ಸಜೀವನದ ಉದಾಹರಣೆಗಳ ಮೂಲಕ ಮಕ್ಕಳಿಗೆ ಅರ್ಥವಾಗುವ ರೀತಿಯಲ್ಲಿ ವಿವರಿಸಿದರು. ಗಾಂಧೀಜಿಯವರು ಕಂಡಂತಹ ನಶ ಮುಕ್ತ ಭಾರತದ ಕನಸಿನೊಂದಿಗೆ ನಾವು ಯಾವ ರೀತಿಯಾಗಿ ನಡೆದುಕೊಳ್ಳಬೇಕು ಮತ್ತು ನಶೆ ಪದಾರ್ಥಗಳ ಸಾಗಾಣಿಕೆಯನ್ನು ತಡೆಯುವಲ್ಲಿ ನಮ್ಮ ಪಾತ್ರವೇನು ಎಂಬ ಪ್ರತಿಜ್ಞಾ ವಿಧಿಯನ್ನು ಎಲ್ಲರಿಗೂ ಬೋಧಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಫಲಾನುಭವಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶಶಿರೇಖಾ, ಅಂಗವಿಕಲ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿ ಸುವರ್ಣ ನಾಯಕ್, ದುರ್ಗಿಗುಡಿ ಶಾಲೆಯ ಎಸ್ ಡಿ ಎಂ ಸಿ ಸದಸ್ಯರಾದ ಸತೀಶ್, ಬಾಲ ನ್ಯಾಯ ಮಂಡಳಿ ಸದಸ್ಯರು ಹಾಗೂ ಸುರಭಿ ಮಹಿಳಾ ಮಂಡಳಿ ದಾವಣಗೆರೆಯ ನಿರ್ದೇಶಕರಾದ ರೇಖಾ ಜಿ.ಎಂ, ಮತ್ತು ಸುರಭಿ ಐ ಆರ್ ಸಿ ಎ ನಿರ್ದೇಶಕರಾದ ಲತಾ ಎ ವಿ ಉಪಸ್ಥಿತರಿದ್ದು, ಕಾರ್ಯಕ್ರಮದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಶಾಲೆಯ ಮುಖ್ಯ ಶಿಕ್ಷಕರಾದ ಮೋಹನ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ರೇಖಾ ಜಿ.ಎಂ.ಸರ್ವರನ್ನೂ ಸ್ವಾಗತಿಸಿದರೆ, ಲತಾ ಎ ವಿ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸರಸ್ವತಿ ವಂದನಾರ್ಪಣೆ ಮಾಡಿದರು.
ಉತ್ತಮ ಅಭ್ಯಾಸ ಮತ್ತು ಹವ್ಯಾಸ ಗಳ ಮೂಲಕ ವಿದ್ಯಾರ್ಥಿಗಳು ಉತ್ತಮ ಜೀವನ ಕಟ್ಟಿಕೊಳ್ಳಬೇಕು- ನ್ಯಾ.ಎಂ.ಎಸ್.ಸಂತೋಷ್
Date:
