ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವ್ಯಕ್ತವಾಗುತ್ತಿರುವ ವಿರೋಧದ ನಡುವೆಯೇ ಇಂಧನ ಸಚಿವ ಕೆ.ಜೆ. ಜಾರ್ಜ್ ಯೋಜನೆಯ ಪರವಾಗಿ ಸ್ಪಷ್ಟನೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶರಾವತಿ ಅಣೆಕಟ್ಟು ನಿರ್ಮಾಣದ ಸಂದರ್ಭದಲ್ಲಿಯೂ ಪರಿಸರ ನಾಶವಾಗಿಲ್ಲವೇ ಎಂಬ ಪ್ರಶ್ನೆ ಉದ್ಭವಿಸಿತ್ತು. ಆಗ ಸಾವಿರಾರು ಎಕರೆ ಭೂಮಿ ಮುಳುಗಡೆಯಾಗಿದ್ದು, ಅನೇಕ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಆದರೆ ಆ ಯೋಜನೆಯಿಂದ ಸುಮಾರು ಸಾವಿರ ಮೆಗಾವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆಯಾಗುತ್ತಿದೆ ಎಂದು ಹೇಳಿದರು.
ಇದಕ್ಕೆ ವಿರುದ್ಧವಾಗಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬಗ್ಗೆ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಸಚಿವರು, ಈ ಯೋಜನೆಯಲ್ಲಿ ಸಮುದ್ರದ ಕಡೆಗೆ ಹರಿಯುವ ನೀರನ್ನು ಪಂಪ್ ಮಾಡಿ ಜಲಾಶಯಕ್ಕೆ ತಂದು ವಿದ್ಯುತ್ ಉತ್ಪಾದಿಸಲಾಗುತ್ತದೆ ಎಂದು ವಿವರಿಸಿದರು.
ಯೋಜನೆಗೆ ಕೇವಲ 125 ಎಕರೆ ಭೂಮಿ ಮಾತ್ರ ಅಗತ್ಯವಿದ್ದು, ಪೈಪ್ಲೈನ್ ಅಳವಡಿಕೆಗೆ ಮಾತ್ರ ಹೆಚ್ಚುವರಿ ಭೂಮಿ ಬೇಕಾಗುತ್ತದೆ. ಆದರೆ ಈ ಯೋಜನೆಯಿಂದ ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದು ಹೇಳಿದರು.
ಯೋಜನೆಯಿಂದ ಯಾವುದೇ ರೀತಿಯ ಪರಿಸರ ಹಾನಿಯಾಗುವುದಿಲ್ಲ. ಪೈಪ್ಲೈನ್ ಅಳವಡಿಕೆಗಾಗಿ ಬಳಸುವ ಪ್ರದೇಶಗಳಲ್ಲಿ ಮತ್ತೆ ಅರಣ್ಯ ಬೆಳೆಸಲಾಗುತ್ತದೆ. ಇದು ಎಲ್ಲರಿಗೂ ಅನುಕೂಲವಾಗುವ ಉತ್ತಮ ಯೋಜನೆಯಾಗಿದೆ ಎಂದು ಜಾರ್ಜ್ ಅಭಿಪ್ರಾಯಪಟ್ಟರು.
ಯೋಜನೆಗೆ ಅಗತ್ಯವಿರುವ ಎಲ್ಲಾ ಪರಿಸರ ಹಾಗೂ ಕಾನೂನುಬದ್ಧ ಅನುಮತಿಗಳು ದೊರೆತ ಬಳಿಕವೇ ಕಾಮಗಾರಿ ಆರಂಭಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದರು.
