ಶಿವಮೊಗ್ಗ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಕೇವಲ 10 ರಿಂದ 15 ದಿನಗಳ ಪ್ರಾಯದ ನವಜಾತ ಹೆಣ್ಣು ಶಿಶುವನ್ನು ಹಾಲಿನ ಬಾಟಲಿ ಸಮೇತ ಕೈಚೀಲದಲ್ಲಿ ಇಟ್ಟು ನಿರ್ಜನ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಗವಟೂರು ಹೊಳೆ ಬಳಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದ ಶಿಶು ಸುರಕ್ಷಿತವಾಗಿ ರಕ್ಷಿಸಲ್ಪಟ್ಟಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಗವಟೂರು ಹೊಳೆ ಬಳಿ ಇರುವ ನಿರ್ಜನ ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಶಿಶುವನ್ನು ಅಪರಿಚಿತರು ಅನಾಥವಾಗಿ ಬಿಟ್ಟು ಹೋಗಿದ್ದಾರೆ.
ಸುಮಾರು 10ರಿಂದ 15 ದಿನಗಳ ಪ್ರಾಯದ ಈ ಹೆಣ್ಣು ಮಗುವನ್ನು ಬಟ್ಟೆಯಲ್ಲಿ ಸುತ್ತಿ ಕೈಚೀಲದಲ್ಲಿ ಇರಿಸಲಾಗಿದ್ದು, ಜೊತೆಗೆ ಒಂದು ಹಾಲಿನ ಬಾಟಲಿಯನ್ನೂ ಇಡಲಾಗಿತ್ತು.
ರಾತ್ರಿ ಸುಮಾರು 9 ಗಂಟೆ ವೇಳೆಗೆ ಬಸ್ ನಿಲ್ದಾಣದ ಹಿಂಭಾಗದ ನಿವಾಸಿಯೊಬ್ಬರಿಗೆ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕೈಚೀಲದಲ್ಲಿದ್ದ ನವಜಾತ ಶಿಶು ಪತ್ತೆಯಾಗಿದ್ದು, ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಸುಮಾರು 1.6 ಕೆ.ಜಿ. ತೂಕವಿರುವ ಶಿಶು ಆರೋಗ್ಯವಾಗಿದ್ದು, ಮೊದಲಿಗೆ ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆ ಹಾಗೂ ಆರೈಕೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಮಗುವನ್ನು ಯಾರು, ಯಾವ ಕಾರಣಕ್ಕಾಗಿ ಈ ರೀತಿ ಬಿಟ್ಟು ಹೋಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ರಿಪ್ಪನ್ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
