ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾದ ಉಡುತಡಿ (ಉಡುಗಣಿ) ಗ್ರಾಮಕ್ಕೆ ಸಂಸದ ರಾಘವೇಂದ್ರ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಪ್ರಮುಖ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು..
೧೨ನೇ ಶತಮಾನದ ವಚನ ಚಳವಳಿಯ ಧೀಮಂತ ಶಕ್ತಿ, ಶಿವಭಕ್ತಿಯ ಶ್ರೇಷ್ಠ ಸಂಕೇತವಾದ ಪೂಜ್ಯ ಅಕ್ಕಮಹಾದೇವಿ ಅವರ ಜನ್ಮಸ್ಥಳವಾಗಿ ಉಡುತಡಿಯು ವಿಶ್ವದಾದ್ಯಂತ ಕೀರ್ತಿ ಪಡೆದಿದೆ. ಅಂದಿನ ರಾಜ ಕೌಶಿಕನ ಕೋಟೆ-ರಾಜಧಾನಿಯಾಗಿದ್ದ ಈ ಐತಿಹಾಸಿಕ ಪುಣ್ಯಭೂಮಿಯನ್ನು ಇಂದು ಅತ್ಯುತ್ತಮ ಸಾಂಸ್ಕೃತಿಕ ಪ್ರವಾಸಿ ತಾಣವನ್ನಾಗಿ ರೂಪಿಸಲಾಗುತ್ತಿದೆ.
(KNNL) ವತಿಯಿಂದ ಅಕ್ಕಮಹಾದೇವಿ ಸ್ಮಾರಕ ದೇವಸ್ಥಾನದ ಸುತ್ತಮುತ್ತ ಹಾಗೂ ಈ ಐತಿಹಾಸಿಕ ಪರಿಸರದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿಯನ್ನು ಶಿವಮೊಗ್ಗ ಲೋಕಸಭಾಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸದರಿ ಯೋಜನೆಗಳನ್ನು ನಿಗದಿತ ಅವಧಿಯೊಳಗೆ, ಉನ್ನತ ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ, ದೇಶ-ವಿದೇಶಗಳಿಂದ ಆಗಮಿಸುವ ಭಕ್ತಾದಿಗಳಿಗೆ ಹಾಗೂ ಪ್ರವಾಸಿಗರಿಗೆ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸುವಂತೆ ಸ್ಥಳದಲ್ಲಿದ್ದ ಅಭಿಯಂತರರಿಗೆ ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಬಿ.ವೈ.ರಾಘವೇಂದ್ರ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು
ನಮ್ಮ ಜಿಲ್ಲೆಯ ಇಂತಹ ಐತಿಹಾಸಿಕ ಮತ್ತು ಧಾರ್ಮಿಕ ಕೇಂದ್ರಗಳನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ತಲುಪಿಸಲು ನಮ್ಮ ಕೇಂದ್ರ ಸರ್ಕಾರ ಸದಾ ಬದ್ಧವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ
