Bharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಾನವೀಯ ಸೇವೆಗಳ ಮೂಲಕ ವಿಶ್ವದ 216 ದೇಶಗಳಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿಕೊಂಡಿದ್ದು, ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ವಿಶೇಷ ಒತ್ತು ನೀಡುತ್ತಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯದರ್ಶಿ ಕೆ. ಗಂಗಪ್ಪ ಗೌಡ ಹೇಳಿದರು.
ಶಿವಮೊಗ್ಗ ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಣಾಧಿಕಾರಿಗಳು, ದೈಹಿಕ ಶಿಕ್ಷಣ ಪರಿವೀಕ್ಷಕರು, ಸಿಆರ್ಪಿ ಹಾಗೂ ಬಿಆರ್ಪಿಗಳ ಒಂದು ದಿನದ ಮಾಹಿತಿ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿಗಳು ಇಂತಹ ಮಾಹಿತಿ ಕಾರ್ಯಗಾರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಹಕರಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಮಾತನಾಡಿ, ಮಾಹಿತಿ ಕಾರ್ಯಗಾರಗಳು ಜ್ಞಾನ ವೃದ್ಧಿಗೆ ಸಹಕಾರಿಯಾಗುವುದರ ಜೊತೆಗೆ ಇತರರಿಗೆ ತರಬೇತಿ ನೀಡುವ ಸಾಮರ್ಥ್ಯವನ್ನೂ ಬೆಳೆಸುತ್ತವೆ ಎಂದರು. ಜಿಲ್ಲೆಯ ಎಲ್ಲ ಅಧಿಕಾರಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೆಚ್ಚಿನ ಶ್ರಮ ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತೆ ಶ್ರೀಮತಿ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಮಕ್ಕಳಲ್ಲಿ ಕೌಶಲ್ಯ ಮತ್ತು ಜ್ಞಾನ ವೃದ್ಧಿಗಾಗಿ ಸಂಸ್ಥೆಯು ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದಕ್ಕೆ ಶಿಕ್ಷಣ ಇಲಾಖೆಯ ಸಹಕಾರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
Bharat Scouts and Guides ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಆಯುಕ್ತ ಎಸ್. ಜಿ. ಆನಂದ್, ರೋವರ್ ವಿಭಾಗದ ಜಿಲ್ಲಾ ಆಯುಕ್ತ ಕೆ. ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ. ವಿಜಯಕುಮಾರ್, ಜಿಲ್ಲಾ ಗೈಡ್ ಆಯುಕ್ತೆ ಕೆ. ಲಕ್ಷ್ಮೀ ರವಿ, ಜಿಲ್ಲಾ ಕಾರ್ಯದರ್ಶಿ ಕೆ. ವಿ. ಚಂದ್ರಶೇಖರಯ್ಯ, ತರಬೇತಿ ಆಯುಕ್ತ ಎಚ್. ಶಿವಶಂಕ್ರಪ್ಪ ಸೇರಿದಂತೆ ರಾಜೇಶ್ ಅವಲಕ್ಕಿ, ಸುಮನಾಶೇಖರ್, ಮಲ್ಲಿಕಾರ್ಜುನ್ ಕಾನೂರ್, ರುದ್ರಪ್ಪ ಚೇಲೂರು ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
