ಶಿವಮೊಗ್ಗ ನಗರದ ಕೆಲವು ವಾರ್ಡ್ಗಳಲ್ಲಿ ಕಳೆದ ಕೆಲ ದಿನಗಳಿಂದ ತಾಂತ್ರಿಕ ಕಾರಣಗಳಿಂದಾಗಿ ಕುಡಿಯುವ ನೀರಿನ ಸರಬರಾಜಿನಲ್ಲಿ ಉಂಟಾಗಿರುವ ವ್ಯತ್ಯಯವನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕರಾದ ಎಸ್.ಎನ್. ಚೆನ್ನಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ನಗರದ ನ್ಯೂ ಮಂಡ್ಲಿ ವಾಟರ್ ಪಂಪ್ ಹೌಸ್ ಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳದಲ್ಲಿದ್ದ ಜಲಮಂಡಳಿಯ ಇಂಜಿನಿಯರ್ಗಳು ಹಾಗೂ ತಾಂತ್ರಿಕ ಸಿಬ್ಬಂದಿಯಿಂದ ಪ್ರಸ್ತುತ ನಡೆಯುತ್ತಿರುವ ದುರಸ್ತಿ ಕಾರ್ಯದ ಪ್ರಗತಿಯ ಮಾಹಿತಿಯನ್ನು ಪಡೆದುಕೊಂಡ ಶಾಸಕರು, ನಗರದ ಜನತೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸಲು ಆದೇಶಿಸಿದರು. ತಾಂತ್ರಿಕ ಅಡಚಣೆಯನ್ನು ಸಂಪೂರ್ಣವಾಗಿ ನಿವಾರಿಸಿ, ಎಂದಿನಂತೆ ವ್ಯವಸ್ಥಿತವಾಗಿ ಕುಡಿಯುವ ನೀರನ್ನು ಸರಬರಾಜು ಮಾಡಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ನಗರದ ಜನತೆಗೆ ಕುಡಿಯುವ ನೀರಿನ ಕೊರತೆಯಾಗದಂತೆ ಪರ್ಯಾಯ ಕರಡು ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರಿಗೆ ಉಂಟಾಗಿರುವ ಈ ತಾತ್ಕಾಲಿಕ ತೊಂದರೆಯನ್ನು ಜಲಮಂಡಳಿಯು ಶೀಘ್ರದಲ್ಲೇ ಬಗೆಹರಿಸಲಿದ್ದು, ನಾಗರಿಕರು ಸಹಕರಿಸಬೇಕಾಗಿ ಕೋರಿದ್ದಾರೆ.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಹಾಗೂ ಜಲ ಮಂಡಳಿಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
