ಕರ್ನಾಟಕವನ್ನು ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಜಾಗತಿಕ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿಶ್ವವಿದ್ಯಾಲಯ ಹಾಗೂ ವಿಶೇಷ AI ಹಬ್ ಸ್ಥಾಪನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
ಬೆಂಗಳೂರು ಬಿಐಇಸಿನಲ್ಲಿ ನಡೆದ ‘ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026’ ಕಾರ್ಯಕ್ರಮವನ್ನು ಉದ್ಘಾಟಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು.
ಜಾಗತಿಕ ಮಟ್ಟದ AI ಪ್ರತಿಭೆಗಳನ್ನು ರೂಪಿಸುವುದು, ಉನ್ನತ ಮಟ್ಟದ ಸಂಶೋಧನೆಗೆ ಉತ್ತೇಜನ ನೀಡುವುದು ಹಾಗೂ ಶಿಕ್ಷಣ ಸಂಸ್ಥೆಗಳು, ಉದ್ಯಮ ಮತ್ತು ಸರ್ಕಾರದ ನಡುವೆ ಸಮನ್ವಯವನ್ನು ಬಲಪಡಿಸುವ ಉದ್ದೇಶದಿಂದ ಈ ವಿಶ್ವವಿದ್ಯಾಲಯವನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಇದರ ಜೊತೆಗೆ, ಸ್ಟಾರ್ಟ್ಅಪ್ಗಳು, ತಂತ್ರಜ್ಞಾನ ಕಂಪನಿಗಳು ಮತ್ತು ಸಂಶೋಧಕರಿಗಾಗಿ ಅತ್ಯಾಧುನಿಕ ‘AI ಹಬ್’ ಅನ್ನು ಇನ್ಕ್ಯುಬೇಶನ್ ಕೇಂದ್ರವಾಗಿ ಸ್ಥಾಪಿಸಲಾಗುವುದು ಎಂದರು. ಈ ಕೇಂದ್ರವು AI ಆಧಾರಿತ ಸಂಶೋಧನೆ ಮತ್ತು ಹೊಸ ತಂತ್ರಜ್ಞಾನಗಳ ಅಭಿವೃದ್ಧಿಗೆ ವೇದಿಕೆಯಾಗಲಿದೆ.
ರಾಜ್ಯವನ್ನು ‘AI-Native’ ರಾಜ್ಯವನ್ನಾಗಿ ರೂಪಿಸುವ ಗುರಿಯೊಂದಿಗೆ ಶಿಕ್ಷಣ, ಆರೋಗ್ಯ, ಕೃಷಿ, ಸಾರ್ವಜನಿಕ ಸೇವೆಗಳು ಮತ್ತು ಸಣ್ಣ ಉದ್ಯಮಗಳಲ್ಲಿ AI ತಂತ್ರಜ್ಞಾನವನ್ನು ವ್ಯಾಪಕವಾಗಿ ಅಳವಡಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಿಗೆ AI ಆಧಾರಿತ ಬೋಧನಾ ಸಹಾಯಕ ಸಾಧನಗಳು, ಆರೋಗ್ಯ ಕ್ಷೇತ್ರದಲ್ಲಿ ಕಾಯಿಲೆಗಳ ಆರಂಭಿಕ ಪತ್ತೆ ಹಾಗೂ ಚಿಕಿತ್ಸೆಗೆ ತಾಂತ್ರಿಕ ನೆರವು, ಕೃಷಿಯಲ್ಲಿ ರೈತರಿಗೆ ನೈಜ ಸಮಯದ ಸಲಹೆಗಳು ಮತ್ತು ಸಾರ್ವಜನಿಕ ಸೇವೆಗಳಲ್ಲಿ ವೇಗ ಹಾಗೂ ಪಾರದರ್ಶಕತೆ ಹೆಚ್ಚಿಸಲು AI ಬಳಕೆಗೆ ಸರ್ಕಾರ ಒತ್ತು ನೀಡಲಿದೆ ಎಂದರು.
ಈ ವೇಳೆ ಗೂಗಲ್ ಸಂಸ್ಥೆಯೊಂದಿಗೆ ದೀರ್ಘಕಾಲೀನ ಪಾಲುದಾರಿಕೆಗೆ ಆಹ್ವಾನ ನೀಡಿದ ಅವರು, ಶಿಕ್ಷಣ, ಆರೋಗ್ಯ, ಕೃಷಿ, ಸ್ಟಾರ್ಟ್ಅಪ್ ಬೆಂಬಲ, ವಿದ್ಯಾರ್ಥಿಗಳ AI ತರಬೇತಿ, ಜವಾಬ್ದಾರಿಯುತ AI ಅಭಿವೃದ್ಧಿ ಹಾಗೂ ತಂತ್ರಜ್ಞಾನ ಮೂಲಸೌಕರ್ಯ ಹೂಡಿಕೆ ಸೇರಿದಂತೆ ಐದು ಪ್ರಮುಖ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡಿದರು.
ಭಾರತದ ಸಾಫ್ಟ್ವೇರ್ ರಫ್ತಿನಲ್ಲಿ ಕರ್ನಾಟಕವು ಸುಮಾರು 40 ಶೇಕಡಾ ಕೊಡುಗೆ ನೀಡುತ್ತಿದ್ದು, ಬೆಂಗಳೂರು 17 ಸಾವಿರಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಹಾಗೂ ಸಾವಿರಾರು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ ನೆಲೆಯಾಗಿದೆ ಎಂದು ಅವರು ಹೇಳಿದರು. ಸುಧಾರಿತ ಕಂಪ್ಯೂಟಿಂಗ್, ಡೇಟಾ ಸೆಂಟರ್ಗಳು ಮತ್ತು ಡಿಜಿಟಲ್ ಮೂಲಸೌಕರ್ಯವನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದೂ ಭರವಸೆ ನೀಡಿದರು.
ಡೆವಲಪರ್ಗಳು ಧೈರ್ಯವಾಗಿ ಹೊಸದನ್ನು ನಿರ್ಮಿಸಲಿ, ಉದ್ಯಮಿಗಳು ದೊಡ್ಡ ಕನಸು ಕಾಣಲಿ, ಸಂಶೋಧಕರು ಆವಿಷ್ಕಾರವನ್ನು ಮುಂದುವರಿಸಲಿ ಮತ್ತು ವಿದ್ಯಾರ್ಥಿಗಳು ನಿರಂತರವಾಗಿ ಕಲಿಯುತ್ತಿರಲಿ. ಕೃತಕ ಬುದ್ಧಿಮತ್ತೆಯು ನಾವೀನ್ಯತೆ, ಒಳಗೊಳ್ಳುವಿಕೆ ಮತ್ತು ವಿಶ್ವಾಸಾರ್ಹತೆಯಿಂದ ಕೂಡಿರುವುದನ್ನು ಕರ್ನಾಟಕ ಸರ್ಕಾರ ಖಚಿತಪಡಿಸಲಿದೆ ಎಂದರು.
