ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ ಜಲಾಶಯಗಳ ಒಳಹರಿವು ಬಹುತೇಕ ಶೂನ್ಯಕ್ಕೆ ಇಳಿದಿರುವ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನಲ್ಲಿ ಜಲಾಶಯಗಳನ್ನು ನಂಬಿಕೊಂಡು ಯಾವುದೇ ಮುಂಗಾರು ಹಂಗಾಮಿನ ಬೆಳೆಗಳನ್ನು ಬೆಳೆಯದಂತೆ ಕ.ನೀ. ನಿ.ನಿ ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.
ಕಳೆದ ಜುಲೈ 2 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಬರದ ಪರಿಸ್ಥಿತಿ ಕುರಿತು ಸುಧೀರ್ಘ ಚರ್ಚೆ ನಡೆಸಲಾಗಿದ್ದು, “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದರು.
ಮುಖ್ಯಮಂತ್ರಿಗಳ ನಿರ್ದೇಶನದಂತೆ ಪ್ರಸ್ತುತ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕಡ್ಡಾಯವಾಗಿ ಕೇವಲ ಕುಡಿಯುವ ನೀರಿಗಾಗಿ ಮಾತ್ರ ಕಾಯ್ದಿರಿಸಬೇಕಾದ ತುರ್ತು ಪರಿಸ್ಥಿತಿ ಎದುರಾಗಿದೆ. ಸರ್ಕಾರದ ಸುತ್ತೋಲೆಯ ಅನ್ವಯ, ರೈತರಿಗೆ ಈ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡಲು ಹಾಗೂ ಆಯಾ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಲು ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ.
ಕುಡಿಯುವ ನೀರಿಗೆ ಮಾತ್ರ ಜಲ ಬಿಡುಗಡೆ
“ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆ ಹಾಗೂ ತುಂಗಾ ಅಣೆಕಟ್ಟು ಕಾಲುವೆಗಳಲ್ಲಿ ಕೇವಲ ಜನ-ಜಾನುವಾರುಗಳ ಕುಡಿಯುವ ನೀರಿನ ಉದ್ದೇಶಕ್ಕೆ ಸೀಮಿತವಾಗಿ ಮಾತ್ರ ನೀರನ್ನು ಹರಿಸಲು ಈಗಾಗಲೇ ದಿನಾಂಕ: 03.07.2026 ರಂದು ಅಧಿಕೃತ ಪ್ರಕಟಣೆ ಹೊರಡಿಸಿ ಕ್ರಮ ಕೈಗೊಳ್ಳಲಾಗಿದೆ.”
ಆದ್ದರಿಂದ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತ ಬಾಂಧವರು ಯಾವುದೇ ನೀರಾವರಿ ಬೆಳೆಗಳನ್ನು ಬೆಳೆಯಲು ಮುಂದಾಗಬಾರದೆಂದು ವಿನಂತಿಸಲಾಗಿದ್ದು ಜಲಕ್ಷಾಮದ ಈ ಸಂದರ್ಭದಲ್ಲಿ ರೈತರು ಪರಿಸ್ಥಿತಿಯನ್ನು ಅರ್ಥೈಸಿಕೊಂಡು, ಇಲಾಖೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕಾಗಿ ಕ ನೀ ನಿ ನಿ, ತುಂಗಾ ಮೇಲ್ದಂಡೆ ಯೋಜನೆ ವಿಭಾಗದ
ಕಾರ್ಯಪಾಲಕ ಎಂಜಿನಿಯರ್ ಕೋರಿದ್ದಾರೆ.
ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ
Date:
