ಜೀವನದಲ್ಲಿ ಎದುರಾಗುವ ಕಷ್ಟದ ಪರಿಸ್ಥಿತಿಗಳನ್ನು ಸವಾಲಾಗಿ ಸ್ವೀಕರಿಸಿ ಎದುರಿಸಬೇಕು. ನಿರಂತರ ಪರಿಶ್ರಮ ವಹಿಸಿ ಮುನ್ನಡೆದಾಗ ಸಾಧನೆ ಸಾಧ್ಯ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರತಿಭಾ ಪುರಸ್ಕಾರ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಡಿವಿಎಸ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮುಖ್ಯ ಅತಿಥಿಯಾಗಿ ಭಾಗವಹಿಸಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳು ಮೊಬೈಲ್ಗಳನ್ನು ಪಕ್ಕಕ್ಕಿಟ್ಟು ವಾಸ್ತವಗಳನ್ನು ಅರ್ಥ ಮಾಡಿಕೊಂಡು ನಿಮ್ಮ ಸಾಧನೆಗೆ ಹೊಸ ವೇದಿಕೆಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಬಹಳ ಮುಖ್ಯವಾಗಿ ಇಂದಿನ ವೇಗದ ಜಾಗತಿಕ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಒಳ್ಳೆಯದು ಯಾವುದು ಮತ್ತು ಕೆಟ್ಟದ್ದು ಯಾವುದು ಎಂಬುದನ್ನು ತಿಳಿದುಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆದ್ದರಿಂದ ಅಂತರ್ಜಾಲ ಮತ್ತು ಸಾಮಾಜಿಕ ಮಾಧ್ಯಮಗಳ ಗೀಳಿಗೆ ಒಳಗಾಗದೆ ಎಲ್ಲರೂ ವಾಸ್ತವ ಜಗತ್ತನ್ನು ಅರಿತುಕೊಳ್ಳಬೇಕು ಎಂದರು.
ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದ ಕಾಲೇಜಿನ ಹಿರಿಯ ವಿದ್ಯಾರ್ಥಿ ರಾಜೇಂದ್ರ, ವಿದ್ಯಾರ್ಥಿಗಳಿಗೆ ಇಂದಿನ ಪರಿಸ್ಥಿತಿಯಲ್ಲಿ ಹೇಗೆ ತಮ್ಮ ವರ್ತನೆಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದೆ ತಮ್ಮ ಸಾಧ£ ಮಾಡಬೇಕು ಎಂಬುದರ ಬಗ್ಗೆ ವಿವರಿಸಿದರು.
ಚಾಂದಿನಿ ಅವರು ವಿದ್ಯಾರ್ಥಿಗಳಿಗೆ ತೃತೀಯ ಲಿಂಗಿಗಳ ಬಗ್ಗೆ ಇರುವ ಅನುಮಾನ ಮತ್ತು ಗೊಂದಲಗಳನ್ನು ಪರಿಹರಿಸಿದರು. ತೃತೀಯ ಲಿಂಗಿಗಳ ಸಮಸ್ಯೆಗಳು ಪರಿಹಾರ ಕಾಣುತ್ತಿವೆ. ಸರ್ಕಾರ ಅವರಿಗೂ ಸಹ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದೆ. ಆದರೆ ಅವರ ಬಗ್ಗೆ ಅನೇಕ ರೀತಿಯ ಅಪಪ್ರಚಾರಗಳು ನಡೆಯುತ್ತಿವೆ ಎಂದು ಅಭಿಪ್ರಾಯಪಟ್ಟರು.
ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪ ಗೌಡ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಉತ್ತಮ ಅಧ್ಯಯನ ನಡೆಸಿ ಉನ್ನತ ಸಾಧನೆ ಮಾಡಬೇಕು. ಉನ್ನತ ಸ್ಥಾನ ಅಲಂಕರಿಸಿ ಸಮಾಜಮುಖಿ ಮನೋಭಾವದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ಪಿ.ದಿನೇಶ್ ಮಾತನಾಡಿ, ತಂತ್ರಜ್ಞಾನ ಯುಗದಲ್ಲಿ ಅವಶ್ಯವಿರುವ ಕೌಶಲ್ಯಗಳನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ನಿರಂತರ ಪರಿಶ್ರಮ ವಹಿಸಿದರೆ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು.
ಅಶೋಕ್ ಪಾಟೀಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ, ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಜಿ.ಮಧುಸೂದನ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್ಕುಮಾರ್ ಶೆಟ್ಟಿ, ನಿರ್ದೇಶಕ ಕೆ.ಎನ್.ರುದ್ರಪ್ಪ ಕೊಳಲೆ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
