ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗಿನಿಂದ ವಿದ್ಯಾರ್ಥಿಗಳ ಜೀವನ ಹಾಳಾಗುವುದನ್ನು ತಡೆಯಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಗಂಭೀರವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಶಾಲಾ-ಕಾಲೇಜುಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚು ಸೇರುವ ಸ್ಥಳಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಿಕ್ಷಣ ಇಲಾಖೆ ಪ್ರತಿ ತಿಂಗಳು ಮಕ್ಕಳ ಕ್ಲಬ್ಗಳಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ ವರದಿ ಸಲ್ಲಿಸಬೇಕು. ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳು ಸಿಗರೇಟ್, ಗುಟ್ಕಾ ಸೇರಿದಂತೆ ಯಾವುದೇ ಮಾದಕ ವಸ್ತುಗಳ ಬಳಕೆ ಮಾಡದಂತೆ ವಾರ್ಡನ್ಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಸೂಚಿಸಿದರು.
ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾದಕ ದ್ರವ್ಯ ಪತ್ತೆಗಾಗಿ ಟೆಸ್ಟಿಂಗ್ ಕಿಟ್ಗಳು ಲಭ್ಯವಿದ್ದು, ವ್ಯಸನ ಮುಕ್ತಿ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದರು. ಅಬಕಾರಿ ಇಲಾಖೆ ಅನಧಿಕೃತ ಮದ್ಯ ಮಾರಾಟವನ್ನು ಕಟ್ಟುನಿಟ್ಟಾಗಿ ತಡೆಯಬೇಕು. ಕೃಷಿ ಇಲಾಖೆ ಬೆಳೆ ಸಮೀಕ್ಷೆ ವೇಳೆ ಹಾಗೂ ಅರಣ್ಯ ಇಲಾಖೆ ತಮ್ಮ ನಿಯಮಿತ ಪರಿಶೀಲನೆ ವೇಳೆ ಅಕ್ರಮ ಗಾಂಜಾ ಬೆಳೆ ಕುರಿತು ಮಾಹಿತಿ ಸಂಗ್ರಹಿಸಿ ಸಂಬಂಧಿತ ಇಲಾಖೆಗಳೊಂದಿಗೆ ಹಂಚಿಕೊಳ್ಳಬೇಕು ಎಂದು ತಿಳಿಸಿದರು.
ನಗರದ ಒಂದು ಕಾಂಡಿಮೆಂಟ್ಸ್ ಅಂಗಡಿಯಲ್ಲಿ ಆಯುರ್ವೇದ ಔಷಧಿ ಹೆಸರಿನಲ್ಲಿ ಮಾರಾಟವಾಗುತ್ತಿದ್ದ ಮಾತ್ರೆಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಅದು ನೋವು ನಿವಾರಕ ಮಾತ್ರೆ ಎಂಬುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಯುಷ್ ಇಲಾಖೆ ಹಾಗೂ ಔಷಧ ನಿಯಂತ್ರಣಾಧಿಕಾರಿಗಳು ಅಂಗಡಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಟ್ರೇಡ್ ಲೈಸೆನ್ಸ್ ರದ್ದುಪಡಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಭೆಯಲ್ಲಿ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ, ಗಾಂಜಾ ಸಾಗಾಟ, ಪೆಡ್ಲರ್ಗಳ ಮಾಹಿತಿ ಹಾಗೂ ಅಕ್ರಮ ಚಟುವಟಿಕೆಗಳ ವಿರುದ್ಧ ಅರಣ್ಯ, ಅಬಕಾರಿ ಮತ್ತು ಪೊಲೀಸ್ ಇಲಾಖೆಗಳು ನಿರಂತರ ಸಮನ್ವಯದೊಂದಿಗೆ ಕಾರ್ಯಾಚರಣೆ ನಡೆಸಬೇಕು ಎಂದರು. ಶಿಕ್ಷಣ ಇಲಾಖೆ ಶಾಲಾ-ಕಾಲೇಜುಗಳ ಸುತ್ತಮುತ್ತ ಮಾದಕ ದ್ರವ್ಯ ತಡೆಗೆ ವಿಶೇಷ ನಿಗಾ ವಹಿಸುವಂತೆ ಸೂಚಿಸಿದರು.
