ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಆಗಸ್ಟ್ 15ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಿಯಮಾನುಸಾರ ಅಂದು ಬೆಳಿಗ್ಗೆ 9ಗಂಟೆಗೆ ಧ್ವಜಾರೋಹಣ ಆಹ್ವಾನಿತ ಗಣ್ಯರಿಂದ ನಡೆಯಲಿದೆ. ಅಂತೆಯೇ ಗಣ್ಯರಿಂದ ಸಂದೇಶ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಎಲ್ಲಾ ಕಾರ್ಯಕ್ರಮಗಳು ಸುಗಮವಾಗಿ ನಡೆದುಕೊಂಡು ಹೋಗಲು ವಿವಿಧ ಇಲಾಖೆಗಳ ಜಿಲ್ಲಾ ಮಟ್ಡದ ಹಿರಿಯ ಅಧಿಕಾರಿಗಳ ಹಲವು ಸಮಿತಿಗಳನ್ನು ನೇಮಿಸಲಾಗಿದೆ ಎಂದವರು ತಿಳಿಸಿದರು.
ಸ್ವಾತಂತ್ರ ದಿನಾಚರಣೆಯ ಸಂಭ್ರಮವನ್ನು ಇಮ್ಮಡಿಗೊಳಿಸಲು ದಿನಾಚರಣೆಯ ಮುನ್ನಾ ದಿನದಂದು ನಗರದ ಎಲ್ಲಾ ಕಚೇರಿಗಳ ಮುಖ್ಯಸ್ಥರು ತಮ್ಮ ಕಚೇರಿ ಕಟ್ಟಡಗಳನ್ನು ಸರ್ಕಾರಿ ಕಚೇರಿ ಕಟ್ಟಡಗಳನ್ನು ಮತ್ತು ನಗರದ ಪ್ರಮುಖ ರಸ್ತೆ ಮತ್ತು ವರ್ತುಲಗಳನ್ನು ವಿದ್ಯುದ್ದೀಪ ಹಾಗೂ ತಳಿರು-ತೋರಣಗಳಿಂದ ಅಲಂಕರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಅವರು, ಸ್ಥಳೀಯ ಸರ್ಕಾರೇತರ ಸಂಘ-ಸAಸ್ಥೆಗಳು, ವಾಣಿಜ್ಯ ಸಂಸ್ಥೆಗಳೂ ಸಹ ಈ ಸಂಭ್ರಮಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಲಾಗುವುದು. ಸಮಾರಂಭ ನಡೆಯುವ ಪ್ರಧಾನ ವೇದಿಕೆ ಮತ್ತು ಕ್ರೀಡಾಂಗಣದ ಮುಂಭಾಗದಲ್ಲಿ ಸುಂದರವಾದ ಕಮಾನುಗಳನ್ನು ನಿರ್ಮಿಸಲಾಗುವುದು. ಅಂದು ಬೆಳಿಗ್ಗೆ ನೆಹರೂ ಕ್ರೀಡಾಂಗಣದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅದೇ ದಿನ ಸಂಜೆ ನಗರದ ಕುವೆಂಪು ರಂಗಮಂದಿರದಲ್ಲಿ ಪೊಲೀಸ್ ಬ್ಯಾಂಡ್ ಮತ್ತು ಶಾಲಾ ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದವರು ನುಡಿದರು.
ಸ್ವಾತಂತ್ರ್ಯೋತ್ಸವ ಭವ್ಯ ವೇದಿಕೆಯಲ್ಲಿ ವಿವಿವಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳನ್ನು ಗುರುತಿಸಿ ಗೌರವಿಸಲಾಗುವುದು. ಅಲ್ಲದೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಲಾಗುವುದು ಎಂದವರು ನುಡಿದರು.
ಸ್ವಾತಂತ್ರ್ಯೋತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸಲು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ನೀಡಲಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಲಾಗಿರುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆಯೂ ಸೂಚಿಸಲಾಗಿದೆ. ಈ ಅವಧಿಯಲ್ಲಿ ಸಂಭ್ರಮಾಚರಣೆಗೆ ಯಾವುದೇ ಚ್ಯುತಿಯಾಗದಂತೆ ಎಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಲಾಗಿದೆ ಎಂದವರು ನುಡಿದರು.
ಆಯೋಜನೆಯ ಜವಾಬ್ದಾರಿ ವಹಿಸಿಕೊಂಡಿರುವ ಅಧಿಕಾರಿಗಳು ವೇದಿಕೆ ಅಲಂಕಾರ, ರಾಷ್ಟ್ರಗೀತೆ, ನಾಡಗೀತೆ, ಪಥಸಂಚಲನ ಸಿದ್ಧತೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮುಂತಾದ ಎಲ್ಲಾ ಚಟುವಟಿಕೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಪೆರೇಡಿನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸಮರ್ಪಕ ತರಬೇತಿ ನೀಡಬೇಕು. ಮಕ್ಕಳು ಉತ್ತಮ ಶಾಲಾ ಸಮವಸ್ತ್ರದೊಂದಿಗೆ ಶಿಸ್ತುಬದ್ಧವಾಗಿ ಪೆರೇಡಿನಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸ್ವಾತಂತ್ರ್ಯ ಸೇನಾನಿಗಳನ್ನು ಆಹ್ವಾನಿಸಿ, ಕಾರ್ಯಕ್ರಮದ ನಂತರ ಅವರನ್ನು ಗೌರವಯುತವಾಗಿ ಬೀಳ್ಕೊಡುವ ಬಗ್ಗೆಯೂ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು.
ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಈ ಕಾರ್ಯಕ್ರಮಕ್ಕೆ ನಿಯಮಾನುಸಾರ ಗಣ್ಯರು, ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಆಹ್ವಾನಿಸಲಾಗುವುದು. ಅಂದು ನಡೆಯುವ ಆಕರ್ಷಕ ಪಥಸಂಚಲನದಲ್ಲಿ ಪೊಲೀಸ್, ಮೀಸಲು ಪಡೆ ಸಶಸ್ತ್ರ ಪೊಲೀಸ್, ಸೇವಾದಳ, ಸ್ಕೌಟ್ಸ್ ಅಂಡ್ ಗೈಡ್ಸ್, ಬಾಲಮಂದಿರ ಮಕ್ಕಳು ಸೇರಿದಂತೆ ನಗರದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುವರು. ವಿಶೇಷವಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಭಾರತ ಜೋಡೋ ಪರಿಕಲ್ಪನೆಯನ್ನು ಪ್ರತಿಬಿಂಬಿಸುವಂತೆ ಕಲಾ ಪ್ರದರ್ಶನ ನಡೆಸಲಾಗುವುದು. ಅಲ್ಲದೇ ಶಾಲಾ ಮಕ್ಕಳ ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ತಹಶೀಲ್ದಾರ್ ರಾಜೀವ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಆಗಸ್ಟ್ 15, “ಸಂಭ್ರಮದ ಸ್ವಾತಂತ್ರ್ಯೋತ್ಸವ” ಆಚರಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
Date:
