ಬ್ರಾಹ್ಮಣ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.
ಈ ಉದ್ದೇಶದಿಂದಲೇ 2019ರಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದ್ದು, ಸಮುದಾಯದ ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗುವ ಉದ್ದೇಶದಿಂದ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಂಡಳಿಯ ಮೂಲಕ ಇದುವರೆಗೆ ಸುಮಾರು 87 ಕೋಟಿ ರೂಪಾಯಿ ನೆರವು ಫಲಾನುಭವಿಗಳಿಗೆ ತಲುಪಿದೆ. ಅರ್ಜಿಗಳನ್ನು ಆಹ್ವಾನಿಸಿ, ಅರ್ಹರನ್ನು ಗುರುತಿಸಿ ಅವರಿಗೆ ನೇರ ಸಾಲ ಸೌಲಭ್ಯ ಒದಗಿಸುವ ಕಾರ್ಯವನ್ನು ಮಂಡಳಿ ಸಮರ್ಥವಾಗಿ ನಿರ್ವಹಿಸುತ್ತಿದೆ ಎಂದು ಪರಮೇಶ್ವರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಲ್ಲಿಯವರೆಗೆ ಸುಮಾರು 1,333 ಅರ್ಜಿಗಳನ್ನು ಪರಿಶೀಲಿಸಿ ಫಲಾನುಭವಿಗಳಿಗೆ ನೇರ ಸಾಲ ಮಂಜೂರು ಮಾಡಲಾಗಿದೆ. ಸಾಲ ಪಡೆದವರು ಅದನ್ನು ಉದ್ದೇಶಿತ ಸ್ವ ಉದ್ಯೋಗ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಕಾರ್ಯವೈಖರಿಯನ್ನು ಶ್ಲಾಘಿಸಿದ ಡಾ.ಜಿ. ಪರಮೇಶ್ವರ, ಸರ್ಕಾರದ ಯೋಜನೆಗಳು ಅಗತ್ಯವಿರುವ ಕುಟುಂಬಗಳಿಗೆ ಪರಿಣಾಮಕಾರಿಯಾಗಿ ತಲುಪುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರು, ನಿರ್ದೇಶಕರು ಹಾಗೂ ಸಿಬ್ಬಂದಿಯ ಕಾರ್ಯವನ್ನು ಅಭಿನಂದಿಸಿದ್ದಾರೆ.
ಮುಂದಿನ ದಿನಗಳಲ್ಲಿಯೂ ಸಮುದಾಯದ ಅಭಿವೃದ್ಧಿಗೆ ಇನ್ನಷ್ಟು ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿರುವ ಅವರು, 2026–27ನೇ ಸಾಲಿನ ವಿವಿಧ ಯೋಜನೆಗಳಿಗೆ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದಿದ್ದಾರೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಿ ಸರ್ಕಾರದ ಈ ಸೌಲಭ್ಯದ ಪ್ರಯೋಜನ ಪಡೆಯುವಂತೆ ಡಾ.ಜಿ. ಪರಮೇಶ್ವರ ಮನವಿ ಮಾಡಿದ್ದಾರೆ.
