ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರಮುಖ ರಸ್ತೆಯೊಂದು ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ಕುರಿತ ವರದಿ.
ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಭಾಗದಲ್ಲಿ ಕಳೆದ ಕೆಲ ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಮಾಲತಿ ನದಿ ಉಕ್ಕಿ ಹರಿಯುತ್ತಿದ್ದು, ಆಗುಂಬೆ ಸಮೀಪದ ನಾಬಳ ಸೇತುವೆಯ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ.
ಸೇತುವೆಯ ಮೇಲೆ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಹೊಸಗದ್ದೆ–ಆಗುಂಬೆ ರಸ್ತೆ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರು ಈ ಮಾರ್ಗವನ್ನು ಬಳಸಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ತೀರ್ಥಹಳ್ಳಿಗೆ ತೆರಳುವ ವಾಹನ ಸವಾರರು ಬದಲಿ ಮಾರ್ಗವಾಗಿ ಆಗುಂಬೆ ಮೂಲಕ ಸಂಚರಿಸಬಹುದು. ಅಲ್ಲದೆ, ಬೇಗಾರು–ಕೈಮರ–ಕಮ್ಮರಡಿ ಮಾರ್ಗದ ಮೂಲಕವೂ ತೀರ್ಥಹಳ್ಳಿಗೆ ತಲುಪಬಹುದಾಗಿದೆ.
ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ಮತ್ತು ತಗ್ಗು ಪ್ರದೇಶಗಳ ಸಮೀಪ ಅನಗತ್ಯವಾಗಿ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
