ನೂತನ ಸಮಾಜಶಾಸ್ತ್ರ ಪಠ್ಯಕ್ರಮದ ವಿನ್ಯಾಸ, ಪಠ್ಯವಿಷಯಗಳ ಉದ್ದೇಶ, ಬೋಧನಾ ವಿಧಾನಗಳು ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡುತ್ತದೆ ಎಂದು ಶಂಕರಘಟ್ಟದ ಸಮಾಜಶಾಸ್ತ್ರ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ (ಬಿ.ಒ.ಎಸ್.) ಅಧ್ಯಕ್ಷ ಪ್ರೊ. ಅಂಜನಪ್ಪ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಮಾಜಶಾಸ್ತ್ರ ವಿಭಾಗ, ಐಕ್ಯೂಎಸಿ ಘಟಕ ಮತ್ತು ಕುವೆಂಪು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಅಧ್ಯಾಪಕರ ಸಂಘದ ಸಹಯೋಗದಲ್ಲಿ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆಯೋಜಿಸಿದ್ದ 5ನೇ ಸೆಮಿಸ್ಟರ್ ಪಠ್ಯಕ್ರಮ ಕಾರ್ಯಗಾರ ಉದ್ಘಾಟಿಸಿ ಮಾತನಾಡಿ, ಪಠ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಉಪನ್ಯಾಸಕರು ಅಗತ್ಯ ಸಿದ್ಧತೆ ನಡೆಸಬೇಕು. ಪೂರಕ ಬೋಧನಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಎನ್.ಕುಮಾರಸ್ವಾಮಿ ಮಾತನಾಡಿ, ಹೊಸ ಪಠ್ಯಕ್ರಮದ ಪರಿಣಾಮಕಾರಿ ಅನುಷ್ಠಾನ ಹಾಗೂ ಗುಣಮಟ್ಟದ ಬೋಧನೆಯಲ್ಲಿ ಇಂತಹ ಕಾರ್ಯಗಾರಗಳು ಅವಶ್ಯ ಎಂದು ತಿಳಿಸಿದರು.
ದೇಶೀಯ ವಿದ್ಯಾಶಾಲಾ ಸಮಿತಿ ಕುಲಸಚಿವ ಡಾ. ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪರಮೇಶ ಜಿ.ಎಸ್. ಅವರು ಸ್ವಾಗತಿಸಿದರು. ಸಮಾಜಶಾಸ್ತ್ರ ಅಧ್ಯಾಪಕರ ಸಂಘ ಕುವೆಂಪು ವಿಶ್ವವಿದ್ಯಾಲಯದ ಕಾರ್ಯದರ್ಶಿ ಶಂಕರ್ ಎನ್ ಆರ್ ವಂದಿಸಿದರು. ಡಿವಿಎಸ್ ಕಾಲೇಜಿನ
ಸಮಾಜ ಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕಿ ಪವಿತ್ರ ಎಚ್ ಎಸ್ ನಿರೂಪಿಸಿದರು. ಕಾರ್ಯಗಾರದಲ್ಲಿ ವಿವಿಧ ಕಾಲೇಜುಗಳ ಸಮಾಜಶಾಸ್ತ್ರ ವಿಭಾಗದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಪಠ್ಯಕ್ರಮದ ವಿವಿಧ ಆಯಾಮಗಳ ಕುರಿತು ವಿಚಾರ ವಿನಿಮಯ ನಡೆಸಿದರು. ಕಾರ್ಯಗಾರವು ಯಶಸ್ವಿಯಾಗಿ ನೆರವೇರಿತು.
