ಶಿವಮೊಗ್ಗದ ಡಿಎಆರ್ ಪೊಲೀಸ್ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ನೂತನ ಉಸ್ತುವಾರಿ, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಕೆ.ಸಿ.ನಾರಾಯಣಗೌಡ ಅವರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಕೆ.ಸಿ.ನಾರಾಯಣಗೌಡ ಅವರು ನಿಕಟಪೂರ್ವ ಮುಖ್ಯಮಂತ್ರಿಗಳಾದ ನನ್ನ ಗುರುಗಳಾದ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ತತ್ವದ ಹಲವಾರು ಹೊಸ ಯೋಜನೆಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿ ರೈತ ವಿದ್ಯಾನಿಧಿ ಯೋಜನೆ, ಜನಸೇವಕ ಕಾರ್ಯಕ್ರಮ, ಗ್ರಾಮ ಯೋಜನೆ ಜನಸಮೃದ್ಧಿ ಕಾರ್ಯಕ್ರಮ, ಆರೋಗ್ಯ ಕ್ಷೇತ್ರದ ಉನ್ನತಿಕರಣ ನಮ್ಮ ಸರ್ಕಾರದ ಜನಸೇವಾ ಕಾರ್ಯಕ್ರಮವಾಗಿದೆ ಎಂದು ಸಚಿವರು ತಿಳಿಸಿದರು.
14 ಅಮೃತ ಯೋಜನೆಗಳನ್ನು ಹೊಸದಾಗಿ ಘೋಷಿಸಲಾಗಿದೆ. ಕೃಷಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ ಆರೋಗ್ಯ ಕ್ರೀಡೆ ಕೈಗಾರಿಕೆ ವಲಯಗಳ ಸಮಗ್ರವಾಗಿ ಅಭಿವೃದ್ಧಿಪಡಿಸುವುದು ಉದ್ದೇಶವಾಗಿದೆ. ಜಿಲ್ಲೆಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ, ಅಭಿವೃದ್ಧಿಗೆ ಪೂರಕವಾಗಿ ಸಮಗ್ರ ನೂತನ ರಸ್ತೆಗಳು, ರೈಲ್ವೆ ಮಾರ್ಗ, ವಿಮಾನನಿಲ್ದಾಣ ಕಾರ್ಯಕ್ರಮಗಳನ್ನು ನಿಗದಿತ ವೇಳೆಯೊಳಗಾಗಿ ಪೂರ್ಣಗೊಳಿಸಲಾಗುತ್ತದೆ.
ಜಿಲ್ಲೆಯ ಆರು ತಾಲೂಕಿನ ಕ್ರೀಡಾಂಗಣಗಳನ್ನು ಅಭಿವೃದ್ಧಿ ಪಡಿಸಲು ಕ್ರಮಕೈಗೊಳ್ಳಲಾಗಿದೆ. ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಗಾಗಿ ಹಾಸ್ಟೆಲ್ಗಳನ್ನು ಈ ವರ್ಷದಲ್ಲಿ ಶಿವಮೊಗ್ಗ ನಗರದಲ್ಲಿ ಪ್ರಾರಂಭಿಸಲಾಗುತ್ತದೆ ಸಚಿವ ನಾರಾಯಣಗೌಡ ಅವರು ತಿಳಿಸಿದರು.
ಶಿವಮೊಗ್ಗ ನಗರಕ್ಕೆ 104 ಕೋಟಿ ರೂ. ವೆಚ್ಚದಲ್ಲಿ 24X7 ನಿರಂತರ ಕುಡಿಯುವ ನೀರನ್ನು ಪೂರೈಸುವ ಯೋಜನೆ ಹಾಗೂ ಮಹಾನಗರ ಪಾಲಿಕೆ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸುವ 96.50 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಕಾಮಗಾರಿಗಳನ್ನು ಒಂದು ವರ್ಷದ ಅವಧಿಯಲ್ಲಿಯೇ ಪೂರೈಸಲಾಗುತ್ತದೆ ಎಂದು ಸಚಿವರು ಹೇಳಿದರು.
ಜಲ್ ಜೀವನ್ ಮಿಷನ್ ಯೋಜನೆಯಡಿ 2024 ರೊಳಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಯಡಿ ಇದುವರೆಗೆ 36.99 ಕೋಟಿ ರೂ ವೆಚ್ಚದಲ್ಲಿ 334 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು ಪ್ರಗತಿಯಲ್ಲಿವೆ ಎಂದು ಸಚಿವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ತಿನ ಸದಸ್ಯ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ. ಆರ್, ಮೇಯರ್ ಸುನಿತಾ ಅಣ್ಣಪ್ಪ, ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.