ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಹಿಂಡು ನಾಯಿಗಳ ದಾಳಿಗೆ ಆರು ಸಾಕು ಕುರಿಗಳು ಸಾವನ್ನಪ್ಪಿರುವ ಘಟನೆ ನೆಹರೂ ನಗರದಲ್ಲಿ ನಡೆದಿದೆ.
ಮನ್ಸೂರ್ ಅಲಿ ಖಾನ್ ಅವರಿಗೆ ಸೇರಿದ ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಬೆಳಗ್ಗೆ ಕುರಿಗಳಿಗೆ ಮೇವು ಹಾಕಲು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಕುರಿಗಳು ಮೃತಪಟ್ಟಿರುವುದನ್ನು ಕಂಡ ಮಾಲೀಕರು ಕಣ್ಣೀರಿಟ್ಟಿದ್ದಾರೆ.
ಸಾಗರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆ ಸಾರ್ವಜನಿಕರಲ್ಲಿ ಭೀತಿ ಉಂಟಾಗಿದೆ. ಇದೀಗ ಮಕ್ಕಳು, ಮಹಿಳೆಯರು ಹಾಗೂ ವೃದ್ಧರ ಸುರಕ್ಷತೆ ಬಗ್ಗೆಯೂ ಆತಂಕ ಎದುರಾಗಿದೆ. ನೆಹರೂ ನಗರ ಹಾಗೂ ಸುತ್ತಮುತ್ತಲಿನ ಬಡಾವಣೆಗಳ ನಿವಾಸಿಗಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ.
ಬೀದಿ ನಾಯಿಗಳ ನಿಯಂತ್ರಣಕ್ಕೆ ನಗರಸಭೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ವಾನಗಳ ಸಂತಾನಹರಣ ಚಿಕಿತ್ಸೆ ನಡೆಸಿ, ಬೀದಿ ನಾಯಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.
ನಗರಸಭೆ ಕೂಡಲೇ ಎಚ್ಚೆತ್ತು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
