ತೀರ್ಥಹಳ್ಳಿ ತಾಲೂಕಿನ ಕಲ್ಗುಂಡಿ ಬಳಿ ಪಿಕ್ಅಪ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪದಡಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಪಿಕ್ಅಪ್ ವಾಹನದಲ್ಲಿ ಸುಮಾರು 8ರಿಂದ 10 ಗೋವುಗಳನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಪರಾರಿಯಾಗಿದ್ದಾರೆ. ಕುಂದಾಪುರ ಮೂಲದ ಇಲಿಯಾಸ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಗೋವುಗಳನ್ನು ವಧೆ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿತ್ತು ಎಂದು ವಶಕ್ಕೆ ಪಡೆದ ವ್ಯಕ್ತಿ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.
ಇನ್ನೊಂದೆಡೆ, ಗೋಶಾಲೆಗಳಿಂದಲೇ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎಂಬ ಗಂಭೀರ ಆರೋಪವನ್ನು ಸ್ಥಳೀಯರು ಮಾಡಿದ್ದು, ಪ್ರಕರಣದ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿವೆ.
ಪೊಲೀಸರು ಪಿಕ್ಅಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು, ಪರಾರಿಯಾಗಿರುವ ಮೂವರಿಗಾಗಿ ಶೋಧ ನಡೆಸುತ್ತಿದ್ದಾರೆ.
ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೋವುಗಳನ್ನು ಎಲ್ಲಿಂದ ತರಲಾಗಿತ್ತು? ಎಲ್ಲಿಗೆ ಸಾಗಿಸಲಾಗುತ್ತಿತ್ತು? ಈ ಸಾಗಾಟದ ಹಿಂದೆ ಇನ್ನೂ ಯಾರು ಇದ್ದಾರೆ? ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
