ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಹಾಗೂ ಸಂಸ್ಕಾರ ಬೆಳೆಸಿಕೊಳ್ಳಲು ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರ ವೃತ್ತಿ ಪವಿತ್ರವಾದದ್ದು. ಶಿಕ್ಷಕರು ತಮ್ಮ ವೃತ್ತಿಯ ಜೊತೆಗೆ ಸಮಾಜ ಸೇವೆಗೂ ಆದ್ಯತೆ ನೀಡಬೇಕು ಎಂದು ಸಹ್ಯಾದ್ರಿ ಚಿಟ್ಸ್ನ ವ್ಯವಸ್ಥಾಪಕ ನಿರ್ದೇಶಕ ರಮೇಶ್ ಭಟ್ ಅಭಿಪ್ರಾಯಪಟ್ಟರು.
ನಗರದ ಸಹ್ಯಾದ್ರಿ ಚಿಟ್ಸ್ ಕಚೇರಿಯಲ್ಲಿ ಸಾಧಕ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡಿದ ಅವರು, ಉತ್ತಮ ಸಂಸ್ಕಾರ ಹೊಂದಿದ ವ್ಯಕ್ತಿಯನ್ನು ರೂಪಿಸುವಲ್ಲಿ, ಕೌಶಲ್ಯ ಬೆಳೆಸುವಲ್ಲಿ ಹಾಗೂ ಜೀವನದ ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸುವಲ್ಲಿ ಗುರುವಿನ ಪಾತ್ರ ಬಹಳ ಮುಖ್ಯ. ಕೇವಲ ಪಾಠ ಹೇಳಿಕೊಟ್ಟ ಮಾತ್ರಕ್ಕೆ ಗುರುವಾಗುವುದಿಲ್ಲ. ಗುರುಗಳ ನಡತೆ, ವ್ಯಕ್ತಿತ್ವ ಹಾಗೂ ವಿದ್ಯಾರ್ಥಿಗಳೊಂದಿಗಿನ ಒಡನಾಟವೂ ಅಷ್ಟೇ ಮಹತ್ವದ್ದಾಗಿದೆ ಎಂದು ಸಹ್ಯಾದ್ರಿ ಚಿಟ್ಸ್ನ ನಿರ್ದೇಶಕ ಶಿವರಾಜ್ ಹೇಳಿದರು.
ಸಂಸ್ಥೆಯ ಮತ್ತೊಬ್ಬ ನಿರ್ದೇಶಕ ಜಿ. ವಿಜಯಕುಮಾರ್ ಮಾತನಾಡಿ, ಉತ್ತಮ ಗುರುಗಳನ್ನು ಗೌರವಿಸುವುದು ಸಮಾಜವನ್ನು ಗೌರವಿಸಿದಂತೆ. ಮನುಷ್ಯ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಗುರುವಿನ ಮಾರ್ಗದರ್ಶನ ಅತ್ಯಂತ ಪ್ರಮುಖವಾಗಿದೆ. ನಮಗೆ ವಿದ್ಯೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಗುರುಹಿರಿಯರನ್ನು ಗೌರವಿಸುವ ಸಮಾಜವು ಸಂಸ್ಕಾರಯುತವಾಗಿ, ಸದೃಢವಾಗಿ ಬೆಳೆಯುತ್ತದೆ. ನಮ್ಮ ಸಂಸ್ಥೆಯ ವತಿಯಿಂದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಾಲ್ವರು ಸಾಧಕ ಶಿಕ್ಷಕರಾದ ಮಾನಸ, ಶಿಲ್ಪಾಶ್ರೀ, ಕೆಂಡಪ್ಪ ಹಾಗೂ ರವಿಕುಮಾರ್ ಎಸ್.ಆರ್. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಹ್ಯಾದ್ರಿ ಚಿಟ್ಸ್ನ ನಿರ್ದೇಶಕರಾದ ಅನುಪ್, ಯು. ರವೀಂದ್ರನಾಥ್ ಐತಾಳ್ ಸೇರಿದಂತೆ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
