ಕೈಗಾರಿಕಾ ಕಾರಿಡಾರ್ ಯೋಜನೆಗೆ ಫಲವತ್ತಾದ ಕೃಷಿ ಜಮೀನು ಸ್ವಾಧೀನ ಪಡಿಸಿಕೊಳ್ಳುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ತಾಲ್ಲೂಕಿನ ಮೆಳ್ಳೆಕಟ್ಟೆ, ಅಣಜಿ, ಲಿಂಗಾಪುರ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
‘ಕೈಗಾರಿಕಾ ಕಾರಿಡಾರ್ ಉದ್ದೇಶಕ್ಕಾಗಿ ಫಲವತ್ತಾದ 1,156 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕೆಐಎಡಿಬಿ ಮುಂದಾಗಿದೆ. ನಮ್ಮ ಜಮೀನಲ್ಲಿ ಅಡಿಕೆ, ತೆಂಗು, ಮಾವು, ಹಣ್ಣಿನ ಬೆಳೆ, ಸಾಂಬಾರ್ ಪದಾರ್ಥ ಸೇರಿದಂತೆ ತೋಟಗಾರಿಕೆ ಹಾಗೂ ಕೃಷಿ ಬೆಳೆಗಳನ್ನು ಬೆಳೆಯುತ್ತಿದ್ದೇವೆ. 6-7 ತಲೆಮಾರುಗಳಿಂದ ಕೃಷಿ ಮಾಡಿಕೊಂಡು ಬಂದಿದ್ದೇವೆ. ಈಗ ನಮ್ಮ ಬದುಕನ್ನು ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಎಂದು’ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕೂ ಬಳಸಲಾಗದ ಪ್ರದೇಶವಾಗಿದೆ. ಫಲವತ್ತಾದ ಕೃಷಿ ಜಮೀನಿನಲ್ಲಿ ಯಾವುದೇ ಕೈಗಾರಿಕಾ ಕಟ್ಟಡ, ಕ್ಷೇತ್ರ ರಚನೆ ಮಾಡಲು ಯೋಗ್ಯವಾಗಿಲ್ಲ ಎಂದು ತಿಳಿಸಿದರು.
ನವಿಲು, ಗೂಬೆ, ಮೊಲ, ನರಿ, ಕಾಡುಹಂದಿ, ಪುನುಗು ಬೆಕ್ಕು, ಕಾಡುಬೆಕ್ಕು, ಕಾಡುಕುರಿ, ಕರಡಿ, ಜಿಂಕೆ ಸೇರಿದಂತೆ ವನ್ಯಜೀವಿ ಸಂಕುಲ ಆಶ್ರಯ ಪಡೆದಿದೆ. ಇಂತಹ ಪ್ರದೇಶದಲ್ಲಿ ಕೈಗಾರಿಕಾ ಕಾರಿಡಾರ್ ಮಾಡಿದರೆ ಜೀವವೈವಿಧ್ಯ ನಾಶವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಹಿಂದಿನ ಸರ್ಕಾರಗಳು ಬೃಹತ್ ನೀರಾವರಿ ಯೋಜನೆಗಳನ್ನು ಕೈಗೊಂಡಿವೆ. ಕೈಗಾರಿಕಾ ಕಾರಿಡಾರ್ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದಲ್ಲಿ ಸರ್ಕಾರದ ಬೊಕ್ಕಸಕ್ಕೂ ಅಪಾರ ನಷ್ಟವಾಗುತ್ತದೆ.
ಸರ್ಕಾರ ಭೂಸ್ವಾಧೀನದಿಂದ ಹಿಂದೆ ಸರಿಯದಿದ್ದರೆ ತೀವ್ರಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ, ಮುಖಂಡರಾದ ಹೊನ್ನೂರು ಮುನಿಯಪ್ಪ, ಸಿದ್ಧವೀರಪ್ಪ, ಮರಳಸಿದ್ದಯ್ಯ, ಗೋಶಾಲೆ ಬಸವರಾಜ, ಚಿತ್ರದುರ್ಗದ ಚಿಕ್ಕಬ್ಬಿಗೆರೆ ನಾಗರಾಜ, ಗ್ರಾಮಸ್ಥರಾದ ಶಂಕರ್, ಚಂದ್ರಪ್ಪ, ಕೆ.ವಿ.ಅನ್ನಪೂರ್ಣ, ಶರತ್, ಸುನೀತಾ, ಮಂಜುಳಾ, ಜ್ಯೋತಿ, ನವೀನ, ಗಿರಿಜಮ್ಮ, ಶಶಿಕಲಾ, ನಿರ್ಮಲಮ್ಮ ಭಾಗವಹಿಸಿದ್ದರು.