Monday, August 3, 2026
Monday, August 3, 2026
Home Blog Page 2079

ಲಾಕ್ ಡೌನ್ ಅವಧಿ : ಶಾಲಾ ಕಟ್ಟಡ ನಿರ್ವಹಣಾ ಕೊರತೆ

0

ಕೋವಿಡ್, ಲಾಕ್ ಡೌನ್ ನಂತರ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳು ಸೇರಿ ಎಲ್ಲ ಶಾಲಾ-ಕಾಲೇಜುಗಳು ಪ್ರಾರಂಭಗೊಂಡಿವೆ. ಶಾಲೆಗಳಲ್ಲಿ ಮಕ್ಕಳ ದಾಖಲಾತಿ 2.35 ಲಕ್ಷದ ದಾಟಿದೆ ಎನ್ನಲಾಗುತ್ತಿದೆ. ಆದರೆ ಮೂಲಸೌಕರ್ಯ ಕೊರತೆಯಿಂದ ಸರ್ಕಾರಿ ಶಾಲೆಗಳು ಬಳಲುತ್ತಿವೆ.
ನಿರ್ವಹಣೆ ಕೊರತೆಯಿಂದ ಸರಕಾರಿ ಶಾಲೆಗಳು ಶಿಥಿಲಗೊಂಡಿವೆ. ಈ ಸಂಬಂಧ 13 ಮಾನದಂಡಗಳನ್ನು ಅನುಸರಿಸಿ, ಶಾಲೆಗಳಲ್ಲಿರುವ ಕೊರತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಖಾಸಗಿ ಕಂಪನಿಗಳ ಸಿಎಸ್ಆರ್ ನಿಧಿ, ಸ್ವಯಂ ಸೇವಾ ಸಂಸ್ಥೆ, ಹಳೆ ವಿದ್ಯಾರ್ಥಿ ಸಂಘಗಳ ನೆರವಿನಿಂದ ಈ ಶಾಲೆಗಳ ರಿಪೇರಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಾರ್ಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಶಾಲೆಗಳು ಮುಚ್ಚಿದ್ದ ಕಾರಣ ನಿರ್ವಹಣೆ ಮಾಡಲಾಗದೇ, ಹಾಗೂ ಮಳೆಯಿಂದಾಗಿ ಹಲವೆಡೆ ಕಟ್ಟಡಗಳು ಕುಸಿದಿವೆ. ರಾಜ್ಯಾದ್ಯಂತ 7,800 ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಲೆಗಳಲ್ಲಿರುವ ಮೂಲಸೌಕರ್ಯ ಮತ್ತು ಸ್ಥಿತಿಗತಿಗಳ ಬಗ್ಗೆ ಶಿಕ್ಷಣ ಇಲಾಖೆ ಮಾಹಿತಿ ಸಂಗ್ರಹಿಸಿದೆ. ಮೂರು ಸಾವಿರಕ್ಕೂ ಹೆಚ್ಚು ಶಾಲಾ ಕಟ್ಟಡಗಳು ತೀವ್ರವಾಗಿ ಹಾನಿಗೊಳಗಾಗಿದ್ದು ನಾಲ್ಕು ಸಾವಿರಕ್ಕೂ ಹೆಚ್ಚು ಕಟ್ಟಡಗಳು ಮಧ್ಯಮ ಪ್ರಮಾಣದ ಹಾನಿಗೊಳಗಾಗಿವೆ ಇದರಲ್ಲಿ ಗ್ರಾಮೀಣ ಮತ್ತು ಪ್ರಾರ್ಥಮಿಕ ಶಾಲೆಗಳೇ ಹೆಚ್ಚು ಎಂಬ ವಿಚಾರಗಳು ಬೆಳಕಿಗೆ ಬಂದಿವೆ. ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ವಾಣಿಜ್ಯ ಬಳಕೆ ಸಿಲಿಂಡರ್ ಗಳ ಬೆಲೆ ಏರಿಕೆ

0

ವಾಣಿಜ್ಯ ಬಳಕೆಯ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆ ರೂ. 266 ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಸಿಲೆಂಡರ್ ಬೆಲೆ 2000.50 ಪೈಸೆ ಮುಟ್ಟಿದೆ. ಮುಂಚೆ ಈ ಬೆಲೆ ರೂ.1734 ಇತ್ತು. ಗೃಹಬಳಕೆಯ ಸಿಲಿಂಡರ್ ಗಳ ಬೆಲೆ ಏರಿಕೆ ಮಾಡಿಲ್ಲ.

ಕೊನೆಗೂ ಧಕ್ಕಿದ ಪರಿಹಾರ : ಕಾರ್ಮಿಕರ ನಿಟ್ಟುಸಿರು

0

ತುಂಗಭದ್ರಾ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ 26 ವರ್ಷ ನಂತರ ಬಾಕಿ ಪರಿಹಾರ ವಿತರಿಸಲಾಯಿತು. ಪರಿಹಾರಕ್ಕಾಗಿ ಹತ್ತಾರು ವರ್ಷದಿಂದ ಕಾದಿದ್ದ ಕಾರ್ಮಿಕರು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ.
ಪರಿಹಾರ ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂಎಲ್‌ಸಿ ಆಯನೂರು ಮಂಜುನಾಥ್ ಅವರು ಮಾತನಾಡಿ, 26ವರ್ಷ ನಂತರ ಕಾರ್ಮಿಕರ ಹೋರಾಟಕ್ಕೆ ಜಯಸಿಕ್ಕಿದೆ. ಇದಕ್ಕಾಗಿ ಶ್ರಮಿಸಿದ ಆಡಳಿತ ಮಂಡಳಿ, ಕಾರ್ಮಿಕ ಇಲಾಖೆ, ಕಾರ್ಮಿಕ ಮಂಡಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕಾರ್ಮಿಕ ಇಲಾಖೆ ಆಯುಕ್ತ ನಾಗರಾಜ್ ಮಾತನಾಡಿ, ಪರಿಹಾರದಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಎಲ್ಲ ದಾಖಲೆಗಳನ್ನು ಪರಿಶೀಲಿಸಿದ್ದೇನೆ. 26 ವರ್ಷ ನಂತರ ಪರಿಹಾರ ಮಂಜುರಾಗಿರುವುದು ಸಂತಸ ತಂದಿದೆ ಎಂದರು.

ಕಾರ್ಖಾನೆ ಮಾಲೀಕ ಮಣಿವೇಲನ್, ನಿರ್ದೇಶಕರಾದ ಸುರೇಶ್, ರವಿಚಂದ್ರನ್, ಮಂಗಳೂರು ವಲಯದ ಕಾರ್ಮಿಕ ಆಯುಕ್ತ ಶಿವಕುಮಾರ್ ಇತರರು ಹಾಜರಿದ್ದರು.

ಮೊದಲ ದಿನವೇ ಸುಮಾರು 500 ಮಂದಿಗೆ ಪರಿಹಾರ ಚೆಕ್ ವಿತರಿಸಲಾಯಿತು. ಒಟ್ಟು 926 ಮಂದಿಗೆ 19 ಕೋಟಿ ಪರಿಹಾರ ವಿತರಿಸಬೇಕಿದ್ದು ವಿತರಣೆ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಮುಂದುವರೆಯಲಿದೆ.

ರಜನಿ ಕ್ಷೇಮವಾಗಿದ್ದಾರೆ

ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್, ತಲೈವಾ ರಜನಿಕಾಂತ್ ಚಿಕಿತ್ಸೆ ಬಳಿಕ ಮರಳಿ ಮನೆ ಸೇರಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು ಮನೆಗೆ ಹಿಂದಿರುಗಿದ್ದಾರೆ.
ಅಕ್ಟೋಬರ್ 28 ರಂದು ಎದೆನೋವು ಹಾಗೂ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ರಜನಿಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈಗ ರಜನಿಕಾಂತ್ ಆರೋಗ್ಯವಾಗಿದ್ದು, ಆತಂಕ ಪಡುವ ಯಾವ ಅಗತ್ಯವೂ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಭಯದ ನೆರಳಲ್ಲಿ ಜಿಮ್

0

ನಟ ಪುನೀತ್ ರಾಜಕುಮಾರ್ ಸಾವಿಗೆ ಅತಿಯಾದ ವ್ಯಾಯಾಮ ಕಾರಣ ಎನ್ನುವ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಇದರಿಂದ ಯುವ ಪೀಳಿಗೆ ಆತಂಕಕ್ಕೊಳಗಾಗಿದ್ದಾರೆ.

ಕೆಲವರು ಜಿಮ್ ಗಳಿಗೆ ಗುಡ್ ಬೈ ಹೇಳಿ, ತಮ್ಮ ಸದಸ್ಯತ್ವವನ್ನು ಮುಂದುವರಿಸುವುದಿಲ್ಲ ಎಂದು ಫಿಟ್ನೆಸ್ ಕೇಂದ್ರಗಳಿಗೆ ಗೈರು ಹಾಜರಾಗುತ್ತಿದ್ದಾರೆ. ಈಗಷ್ಟೇ ಕರೋನಾ ಲಾಕ್ಡೌನ್ ಎದುರಾದ ಸಂಕಷ್ಟದಿಂದ ಹೊರಬರಲು ಯತ್ನಿಸುತ್ತಿದ್ದ ಫಿಟ್ನೆಸ್ ಮಾಲೀಕರಿಗೆ ಈ ವಿಷಯ ಆಘಾತವನ್ನುಂಟುಮಾಡಿದೆ.

ಇದರ ಸಲುವಾಗಿ ಸುರಕ್ಷತೆ ದೃಷ್ಟಿಯಿಂದ ಜಿಮ್ ಹಾಗೂ ಫಿಟ್ನೆಸ್ ಸೆಂಟರ್ ಗಳಿಗೆ ವಿಶೇಷ ಮಾರ್ಗಸೂಚಿ ನಿಯಮಗಳನ್ನು ರೂಪಿಸುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಜಿಮ್ ಮತ್ತು ಫಿಟ್ನೆಸ್ ಸೆಂಟರ್ ಗಳಲ್ಲಿ ದೈಹಿಕ ಕಸರತ್ತಿನ ವೇಳೆ ಸುರಕ್ಷತೆ ನಿಯಮಗಳನ್ನು ಪಾಲಿಸ ಬೇಕಾದ ಅಗತ್ಯವಿದೆ. ಇದಕ್ಕೆ ಕಡ್ಡಾಯವಾಗಿ ಸುರಕ್ಷತಾ ಸಾಮಗ್ರಿಗಳು, ಇತರ ನಿರ್ವಹಣೆ ಸೇರಿ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ, ಹೃದಯ ತಜ್ಞರಿಂದ ವರದಿ ತಯಾರಿಸಿ ಮಾರ್ಗಸೂಚಿ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಅನಾರೋಗ್ಯ ಸಮಸ್ಯೆಗಳು ಕಂಡು ಬಂದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕೆಲಸ, ಪ್ರಥಮ ಚಿಕಿತ್ಸೆ ಮತ್ತು ಆಸ್ಪತ್ರೆಗೆ ದಾಖಲಿಸುವುದು. ವಿಶೇಷ ಮಾರ್ಗದರ್ಶನ ತರಬೇತಿಯನ್ನು ಜಿಮ್ ಮತ್ತು ಫಿಟ್ನೆಸ್ ತರಬೇತಿದಾರರಿಗೆ ನೀಡಲಾಗುವುದು ಎಂದು ತಿಳಿಸಿದರು. 16 ವರ್ಷದ ಹಿಂದೆ ಪುನೀತ್ ರಾಜಕುಮಾರ್ ಹಾಗೂ ರಾಘವೇಂದ್ರ ರಾಜಕುಮಾರ್ ಅವರು ಇಬ್ಬರೂ ಒಂದೇ ಸಲ ಜಿಮ್ ಅಭ್ಯಾಸ ಆರಂಭಿಸಿದ್ದರು. ಪುನೀತ್ ದೇಹದಂಡನೆ ನೋಡಲು ಸಂತೋಷವಾಗುತ್ತಿತ್ತು. ಆದರೆ ಈಗ ಸಂಬಂಧಿಸಿರುವ ಆಘಾತದಿಂದ ಜಿಮ್ ಮಾಡಬೇಕಾ , ಅಥವಾ ಮಾಡಬಾರದು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಹಲವಾರು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ಒಂದೆರಡು ಪ್ರಕರಣಗಳಿಂದ ಜಿಮ್ ಮಾಡುವುದು ತಪ್ಪು ಎಂಬ ನಿರ್ಧಾರ ಸರಿ ಇಲ್ಲ ಎಂದು ಮಾಧ್ಯಮ ಮಿತ್ರರಿಗೆ ತಿಳಿಸಿದರು.

ಟಿ – 20 ಆಫ್ಘಾನ್ ಗೆ ಮಣಿದ ನಮೀಬಿಯಾ

0

ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ B – ಗುಂಪಿನ ಅಫ್ಘಾನಿಸ್ತಾನ ಮತ್ತು ನಮೀಬಿಯಾ ತಂಡಗಳ ನಡುವೆ ಪಂದ್ಯ ನಡೆಯಿತು. ನಮೀಬಿಯಾ ವಿರುದ್ಧ ಅಫ್ಘಾನಿಸ್ತಾನ ಭರ್ಜರಿ ಜಯ ಸಾಧಿಸಿತು.
ಅಬುಧಾಬಿಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 160 ರನ ಕಲೆಹಾಕಿತು. ಕ್ರಮಾಂಕದಲ್ಲಿ ಮೊದಲು ಬ್ಯಾಟಿಂಗ್ ನಲ್ಲಿ ಆಡಿದ ಮೊಹಮದ್ ಶಾಹಜಾದ್ 33 ಎಸೆತಕ್ಕೆ 3 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿ 45 ರನ್ ಗಳನ್ನ ಕಲೆಹಾಕಿದರು.ಹಾಗೂ ನಾಯಕ ಮೊಹಮದ್ ನಬಿ 17 ಎಸೆತಕ್ಕೆ 5 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿ 32 ರನ್ ಕಲೆ ಹಾಕಿದರು. ಇವರಿಬ್ಬರ ಜೊತೆಯಾಟದ ಬಿರುಸಿನ ಬ್ಯಾಟಿಂಗ್ ನಿಂದ ನಮೀಬಿಯಾ ತಂಡ ನಲುಗಾಡಿತು.
160 ರನ್ ಗಳ ಗೆಲುವಿನ ಗುರಿಯನ್ನಿಟ್ಟುಕೊಂಡು ಬೆನ್ನತ್ತಿ ಆಡಿದ ನಮೀಬಿಯಾ ತಂಡ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿ. ಹಮೀದ್ ಹಸನ್ 9 ರನ್ ಗಳಿಗೆ 3 ವಿಕೆಟ್ ತೆಗೆದುಕೊಂಡರು. ಹಾಗೆಯೇ ನವೀನ್ ಉಲ್ ಹಕ್ 26 ರನ್ ಗಳಿಗೆ 3 ವಿಕೆಟ್ ತೆಗೆದುಕೊಂಡರು. ಇವರಿಬ್ಬರ ಜೋಡಿಯ ಮಾರಕ ದಾಳಿಗೆ ಬೆಚ್ಚಿಬಿದ್ದ ಕ್ರಿಕೆಟ್ ನ ಶಿಶು ಎಂದೇ ಪ್ರಖ್ಯಾತಿ ಪಡೆದ ನಮೀಬಿಯಾ ತಂಡ ಬಹಳ ಹೀನಾಯ ಸೋಲನ್ನು ಕಂಡಿತು.

ಮತ್ತೆ ,ಮಳೆ ಹುಯ್ಯಲಿದೆ

0

ರಾಜ್ಯದ ವಿವಿದೆಡೆ ಗುಡುಗು ಸಿಡಿಲು ಸಹಿತ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವೆಂಬರ್ 1ರಿಂದ 4ರವರೆಗೆ ಶಿವಮೊಗ್ಗ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 2ರಿಂದ ಭಾರಿ ಮಳೆಯಾಗಲಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸೇರಿದಂತೆ ಸಾಧಾರಣ ಮಳೆಯಾಗಬಹುದು. ನವೆಂಬರ್ 5 ರಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕನ್ನಡದ ಸ್ಥಾನ ಅನನ್ಯ ಮತ್ತು ವಿಶ್ವಮಾನ್ಯ : ಸಚಿವ ಕೆ.ಎಸ್. ಈಶ್ವರಪ್ಪ

0

ಶಿವಮೊಗ್ಗದ ಡಿ.ಎ.ಆರ್ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನವರು ಕನ್ನಡ ಧ್ವಜಾರೋಹಣ ನೆರವೇರಿಸಿದರು.”ನವೆಂಬರ್ ತಿಂಗಳು ಬಂತೆಂದರೆ ಕನ್ನಡ ನಾಡಿನಾದ್ಯಂತ ಎಲ್ಲರ ಮನೆ ಮನಗಳಲ್ಲಿ ಸಂಭ್ರಮ ಪುಟಿದೇಳುತ್ತದೆ. ವಿಶ್ವದೆಲ್ಲೆಡೆ ಪಸರಿಸಿರುವ ಕನ್ನಡಿಗರು ಇಂದು ಸಂಭ್ರಮದಿಂದ ಕನ್ನಡದ ಹಬ್ಬವನ್ನು ಆಚರಿಸುತ್ತಿದ್ದಾರೆ. ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ, ಇಲ್ಲಿನ ಆಚರಣೆ ಎಲ್ಲವೂ ಅನನ್ಯವಾಗಿದ್ದು ವಿಶ್ವಮಾನ್ಯವಾಗಿದೆ” ಎಂದರು.


ಕನ್ನಡನಾಡು ವಿವಿಧ ಧರ್ಮ ಸಂಸ್ಕೃತಿ ಗಳ ಸಮಾಗಮವಾಗಿದೆ. ಮೌರ್ಯರು, ಕದಂಬರು, ಗಂಗರು, ಹೊಯ್ಸಳರು, ವಿಜಯನಗರದ ಅರಸರು, ಚಾಲುಕ್ಯರು, ರಾಷ್ಟ್ರಕೂಟರು, ಮೈಸೂರಿನ ಒಡೆಯರು, ಕೊಡವರು ಮುಂತಾದ ಅನೇಕ ರಾಜ ಮನೆತನಗಳು ಈ ನಾಡಿಗೆ ನೀಡಿದ ಕೊಡುಗೆ ಅಪಾರವಾಗಿದೆ. ದಾಸಶ್ರೇಷ್ಠ ಕನಕದಾಸರು, ಪುರಂದರದಾಸರು, ಸರ್ವಜ್ಞ, ಶಿಶುನಾಳ ಷರೀಫ ಅವರಂಥ ಸಂತಕವಿಗಳು, ಸಾಮಾಜಿಕ ಕ್ರಾಂತಿಯ ಹರಿಕಾರರಾದ ಜಗಜ್ಯೋತಿ ಬಸವಣ್ಣನವರಂಥ ವಚನಕಾರರು ಮತ್ತು ಹಲವಾರು ದಾರ್ಶನಿಕರು ಬಾಳಿ ಬದುಕಿದ ನೆಲ ಹೆಮ್ಮೆಯ ಕನ್ನಡ ನಾಡು.
ಧರ್ಮ ಸಹಿಷ್ಣತೆ, ಸಮನ್ವಯತೆ, ಸೌಹಾರ್ದತೆಯಿಂದ ಬದುಕುತ್ತಿರುವ ನಾಡು ನಮ್ಮದು. ಕನ್ನಡ ಭಾಷೆ ಅತ್ಯಂತ ಶ್ರೀಮಂತ ಸಾಹಿತ್ಯ ಹೊಂದಿದ್ದು, ಕನ್ನಡದ 8 ಜನ ಸಾಹಿತ್ಯ ಪರಿಚಾರಕರು, ಸಾಹಿತ್ಯದ ಅತ್ಯುನ್ನತ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
     ಈ ವರ್ಷ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರ್ಣಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಈ ಅಮೃತ ಮಹೋತ್ಸವವನ್ನು ದೇಶಾದ್ಯಂತ ಒಂದು ವರ್ಷ ಕಾಲ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ವಿವಿಧ ಜನಪರ, ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರೂ ಕೂಡ ಇದಕ್ಕೆ  ಕೈಜೋಡಿಸಿರುವುದು ರಾಷ್ಟ್ರಪ್ರೇಮ ಮತ್ತು ಕಲ್ಯಾಣದ ದ್ಯೋತಕವಾಗಿದೆ.
   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮರ್ಥ ನಾಯಕತ್ವದಲ್ಲಿ ನಮ್ಮ ರಾಜ್ಯ ಅಭಿವೃದ್ಧಿಯ ಹೊಸ ಮನ್ವಂತರಕ್ಕೆ ತೆರೆದುಕೊಳ್ಳುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದು. ಸುಶಿಕ್ಷಿತ, ಸುಸಂಸ್ಕೃತ ಸಮಾಜವನ್ನು ಕಟ್ಟಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಸ್ವಾತಂತ್ರ್ಯದ ಅಮೃತೋತ್ಸವದ ಸವಿನೆನಪಿಗೆ ರಾಜ್ಯದ ಪ್ರತಿ ತಾಲೂಕಿನಲ್ಲಿ ಅಮೃತ ಗ್ರಾಮ ಪಂಚಾಯತ್ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಜಿಲ್ಲೆಯ 32  ಗ್ರಾಮ ಪಂಚಾಯತ್‍ಗಳನ್ನು ಆಯ್ಕೆ ಮಾಡಲಾಗಿದ್ದು, ಮೂಲಸೌಲಭ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಜಿಲ್ಲಾ ಪಂಚಾಯತ ಸಿಇಒ ವೈಶಾಲಿ , ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಣ್ಣ ಕತೆ : ಸುಂದರ ಸುಚೇತನ್

0

ವಿಜಯಾ ಶ್ರೀಧರ ಈವರೆಗೆ 20 ಕೃತಿಗಳನ್ನು ,ರಚಿಸಿದ್ದಾರೆ. ಸಾಹಿತ್ಯ ಪರಿಷತ್ ನ ಬಹುಮಾನಗಳನ್ನು ಪಡೆದಿದ್ದಾರೆ. ಶಿವಮೊಗ್ಗದ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯ ರಾಗಿದ್ದಾರೆ.ಪ್ರತಿಷ್ಠಿತ ಕರ್ನಾಟಕ ಸಂಘದ ಪ್ರಥಮ ಮಹಿಳಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಎರಡು ಬಾರಿ ಅಧ್ಯಕ್ಷ ಸ್ಥಾನದ ಹೊಣೆಗಾರಿಕೆ ನಿರ್ವಹಿಸಿದ್ದಾರೆ. ಹದಿನಾಲ್ಕನೇ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.ಭಾರತೀಯ ಕುಟುಂಬ ಯೋಜನಾ ಸಂಘದ ಅಧ್ಯಕ್ಷ ರಾಗಿ ಸಂಸ್ಥೆಯ ಬೆಳ್ಳಿಹಬ್ಬದ ಎರಡು ವರ್ಷ ಇವರ ಸಾಮಾಜಿಕ ಸೇವೆ ಗಣನೀಯ.

ಅಪ್ಪ-ಅಮ್ಮ ಮನೋವೈದ್ಯಕೀಯ ಸಮ್ಮೇಳನಕ್ಕೆ ಹೈದರಾಬಾದಿಗೆ ಹೊರಟಿದ್ದರು. “ನಾನು ನಿಮ್ಮ ಜೊತೆ ಬರುತ್ತೇನೆ” ಎಂದು ಪುಟ್ಟ ಮಗುವಿನಂತೆ ಹಟ ಮಾಡಿ ವಸಂತಿ ಅವರ ಜೊತೆ ಹೊರಟಿದ್ದಳು. “ನೀನು ಕಲಾವಿದೆ, ಅದು ಮನೋವೈದ್ಯರ ಸಮ್ಮೇಳನ, ಅಲ್ಲಿ ನಿನಗೇನು ಕೆಲಸ? ಬೇಡ” ಎಂದು ಗಂಡ-ಮಕ್ಕಳು ಹೇಳಿದ್ದರು. ಆದರೆ ಬಸಂತಿ “ಇಲ್ಲ , ನನಗೆ ಈ ಸಂಸಾರದಿಂದ ನಾಲ್ಕಾರು ದಿನ ರಜೆ ಬೇಕೇ ಬೇಕು. ಹೇಗೋ ಅತ್ತೆ ಮಾವ ಇದ್ದಾರೆ, ನಿನಗೂ ಮಕ್ಕಳಿಗೂ ರಜೆ ಇದೆ ಮನೆಯಲ್ಲೇ ಇರಿ” ಎಂದು ಒತ್ತಾಯ – ಪ್ರೀತಿಯಿಂದ ಗಂಡ ಮಕ್ಕಳನ್ನು ಒಪ್ಪಿಸಿ ಅಪ್ಪ – ಅಮ್ಮನ ಜೊತೆ ಹೈದರಾಬಾದಿಗೆ ಹಾರಿದ್ದಳು.
ಅಪ್ಪ ಮನೋವೈದ್ಯರು. ನಾನಾ ಗೋಷ್ಠಿಗಳಿಗೆ ಹಾಜರಾಗುತ್ತಿದ್ದರೆ ವಸಂತಿ, ಅಮ್ಮ ಪಾರ್ವತಿಯ ಜೊತೆ ಹೈದರಾಬಾದ್ ಸುತ್ತು ತೊಡಗಿದ್ದಳು. ಅಮ್ಮ ಮಗಳಿಗೆ ಹೈದರಾಬಾದ್ ಹೊಸದಲ್ಲ. ಹೈದರಾಬಾದ್ ನ ಚಾರ್ಮಿನಾರ್, ಅಲ್ಲಿಯ ಮುತ್ತಿನ ಆಭರಣಗಳು, ಗದ್ವಾಲ್ ಸೀರೆಗಳು, ಕರಾಚಿ ಬಿಸ್ಕೆಟ್ ಎಲ್ಲ ವಸಂತಿಗೆ ಬಹು ಪ್ರಿಯವಾಗಿದ್ದವು. ಅಪ್ಪ ಗೊತ್ತು ಮಾಡಿಕೊಟ್ಟ ಟ್ಯಾಕ್ಸಿಯ ಚಾಲಕ ಇನ್ನೂ ಎಳೆಯ ಯುವಕ! 22 ಅಥವಾ 23 ವರ್ಷಗಳಿರಬಹುದು. ಎತ್ತರದ ತೆಳು ದೇಹದ ಲಕ್ಷಣವಾದ ಹುಡುಗ.
ಹೈದರಾಬಾದಿನ ವಿಶಿಷ್ಟವಾದ ಪಾಯಿಜಾಮ – ಕುರ್ತಾ ಹಾಕಿರುತ್ತಿದ್ದ. ಇಂಗ್ಲಿಷ್- ಹಿಂದಿ ಮಾತನಾಡುತ್ತಿದ್ದ. ಇಡೀ ಹೈದರಾಬಾದನ್ನು ನಾಲ್ಕು ದಿನಗಳಲ್ಲಿ ಸುತ್ತಿಸಿದ್ದ, “ಹುಡುಗ ಸಭ್ಯ. ನನಗಿಂತ ಸಣ್ಣವನು, ಆದರೂ ಆಗಾಗ ನನ್ನನ್ನು ತುಂಬಾ ಆಸಕ್ತಿಯಿಂದ ಗಮನಿಸುತ್ತಿದ್ದಾನೆ” ಎಂದು ವಸಂತಿಗೆ ಅನಿಸುತ್ತಿತ್ತು. ನನಗೇನು? ನಾನು ಮದುವೆಯಾಗಿ ಎರಡು ಮಕ್ಕಳ ತಾಯಿ” ಎಂದು ಸಂಕೋಚ ಬಿಟ್ಟು ವಸಂತಿಯೂ ನಗುತ್ತಿದ್ದಳು, ಮಾತನಾಡುತ್ತಿದ್ದಳು.
ಪಾರ್ವತಿಗೂ ಈ ಹುಡುಗ ಇಷ್ಟವಾಗಿದ್ದ. ಆ ಸುಂದರ ಹುಡುಗನ ಹೆಸರು ಸುಚೇತನ್! ಎಂಥ ಚಂದದ ಹೆಸರು!! ಎಂದು ಉದ್ಗಾರ ತೆಗೆದಿದ್ದಳು.
“ಮೇಡಂ, ಚಾರ್ ಮಿನಾರ್ ನೋಡಿದ್ದೀರಿ. ಆದರೆ ಪಕ್ಕದ ಮಸೀದಿಯೇ ನೋಡಿಲ್ಲ ಅಲ್ಲವೇ? ಬನ್ನಿ”, ಎಂದು ಕರೆದೊಯ್ದಿದ್ದ. ಮಸೀದಿ ಮುಂದಿನ ಸಂಗಮರಿ ಕಲ್ಲು ಹಾಸಿಗೆ ತೋರಿಸುತ್ತ “ಇದರ ಮೇಲೆ ಒಂದು ಕ್ಷಣ ಕುಳಿತುಕೊಳ್ಳಿ, ಅಂದರೆ ಮತ್ತೆ ಹೈದರಾಬಾದಿಗೆ ಬರುವ ಹಾಗೆ ಆಗುತ್ತದೆ” ಎಂದಿದ್ದ. ವಸಂತಿ ನಗುತ್ತ ಅದರ ಮೇಲೆ ಕುಳಿತಿದ್ದಳು. ಸುಚೇತನ್ ಮುಖದಲ್ಲಿ ತೃಪ್ತಿಯ ನಗು. ಪಾರ್ವತಿ ಮಾತ್ರ ಎಲ್ಲಿಗೂ ತಿರುಗಲು ಸಾಧ್ಯವಿಲ್ಲ, ಮನೆಯೇ ಸಾಕು, ಎಲ್ಲೂ ಕೂಡ್ರುವುದು ಬೇಡ” ಎಂದು ನಕ್ಕಿದ್ದಳು.
ಅಲ್ಲಿಂದ ಹೊರಬಂದು ಚಾರ್ಮಿನಾರ್ ಸುತ್ತಲೂ ಮುತ್ತಿನ ಬಳೆ, ಹಾರ, ಹರಳುಗಳು ಕೂಡಿಸಿದ ಬಳೆಗಳು, ಚೂಡಿದಾರ್ ಸೆಟ್ ಗಳು ಕೊಳ್ಳುವಾಗಲೂ, ಸುಚೇತನ್ ತಾನೇ ಮುಂದಾಗಿ ಉರ್ದುವಿನಲ್ಲೇ ಮಾತನಾಡುತ್ತಾ, ಚೌಕಾಸಿ ಮಾಡುತ್ತಿದ್ದ. ಹಿಂದೊಮ್ಮೆ ಸಮ್ಮೇಳನಕ್ಕೆ ಬಂದ ಅತಿಥಿಗಳನ್ನು ತಾನು ಹೇಗೆ ಇಲ್ಲಿ ನಡೆದ ಗಲಾಟೆಯಲ್ಲಿ ರಕ್ಷಣೆ ಮಾಡಿದೆ ಎಂದು ವಿವರಿಸಿದ್ದ.
ಅಂತೂ ನಾಲ್ಕು ದಿನಗಳ ಪ್ರವಾಸ ಮುಗಿಯುವಾಗ ಈ ಸುಚೇತನ್ ಪಾರ್ವತಿ – ವಸಂತಿಗೆ ತುಂಬಾ ಪ್ರಿಯನಾಗಿದ್ದ. ತಿರುಗಿ ಬೆಂಗಳೂರಿಗೆ ಹೊರಡುವ ದಿನ ತಾಜ್ ಹೋಟೆಲ್ ನಿಂದ ವಿಮಾನ ನಿಲ್ದಾಣಕ್ಕೆ ಬಿಡಲು ಸುಚೇತನ್ ನೇ ಬಂದಿದ್ದ. ವಿಮಾನ ನಿಲ್ದಾಣದಲ್ಲಿ ಅವನನ್ನು ಬೀಳ್ಕೊಡುವಾಗ ಅವನಿಗೆ ಕೊಡಲು ಹಣ್ಣಿನ ದೊಡ್ಡ ಬುಟ್ಟಿ, ಸಮ್ಮೇಳನದಲ್ಲಿ ಸಿಕ್ಕ ಹಲವಾರು ಕಾಣಿಕೆಗಳನ್ನು ತೆಗೆದಿಟ್ಟಿದ್ದರು. ವಿಮಾನ ನಿಲ್ದಾಣಕ್ಕೆ ಬಿಟ್ಟು, ಹೊರಡುವ ವೇಳೆ ಬಂದಿತ್ತು. ಪಾರ್ವತಿ-ವಸಂತಿ ಸುಚೇತನ್ ಗೆ ವಿದಾಯ ಹೇಳಿ ಕಾಣಿಕೆ ನೀಡುವ ಮೊದಲೇ ಅನಿರೀಕ್ಷಿತವಾಗಿ ಆತ, ಒಂದು ಬಳೆಗಳ ರಟ್ಟಿನ ಪೆಟ್ಟಿಗೆ ವಸಂತಿಗೆ ನೀಡುತ್ತಾ ನುಡಿದಿದ್ದ. “ಹಿಂದಿನ ವರ್ಷ ಹಾರ್ಟ್ ಪ್ರಾಬ್ಲಮ್ ದಿಂದ ನನ್ನ ಒಬ್ಬಳೇ ದೀದಿ ತೀರಿಕೊಂಡಳು. ಹೀಗೆ, ನಿಮ್ಮ ಹಾಗೆ ಇದ್ದಳು. ಅವಳಿಗೆ ಬಳೆಗಳು ಅಂದರೆ ತುಂಬಾ ಇಷ್ಟ. ಚಾರ್ ಮಿನಾರ್ ಬಳಿ ಹೋದರೆ ಬಳೆ ತಾ ಅಂತ ಪೀಡಿಸುತ್ತಿದ್ದಳು”. ವಸಂತಿ ಹಾಗೂ ಪಾರ್ವತಿ ,ಶಂಕರ ಏನೂ ಮಾತನಾಡಲಾಗದೆ ಮೂಕರಂತೆ ನಿಂತಿದ್ದರು. ಹಣ್ಣುಗಳು ತುಂಬಿದ ಬುಟ್ಟಿ, ಉಳಿದ ಕಾಣಿಕೆಗಳನ್ನು ಸುಚೇತನ್ ನೀಡುವಾಗಲೂ ವಸಂತಿ -ಪಾರ್ವತಿಯರ ಕಣ್ಣಲ್ಲಿ ನೀರು! ಸುಚೇತನ್ ನೀಡಿದ್ದ ಬಹು ಅಮೂಲ್ಯವಾದ ವಾತ್ಸಲ್ಯದ ಬಳೆಗಳ ಮುಂದೆ ಎಲ್ಲವೂ ಕಡಿಮೆ ಅಂದೇ ಅನಿಸುತ್ತಿತ್ತು. “ಸುಚೇತನ್ – ಸುಂದರ ಸುಚೇತನ್ ಮತ್ತೆ ಸಿಗೋಣ!” ಎನ್ನುತ್ತಾ ವಸಂತಿ ಹಾಗೂ ಪಾರ್ವತಿ, ಶಂಕರನನ್ನು ಹಿಂಬಾಲಿಸಿ ವಿಮಾನವನ್ನೇರಿದ್ದರು.

ಕನ್ನಡ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮ: ಸಂಸದ ಬಿ.ವೈ.ಆರ್

0

ಶಿಕಾರಿಪುರ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಆಡಳಿತ ತಾಲೂಕು, ಪಂಚಾಯತ್ ಪುರಸಭೆ, ವಿವಿಧ ಇಲಾಖೆಗಳು ಹಾಗೂ ಕನ್ನಡ ಯುವಕರ ಸಂಘ, ವಿವಿಧ ಸಂಘಟನೆಗಳು ಶಿಕಾರಿಪುರ ತಾಲೂಕು ಇವರುಗಳ ಸಂಯುಕ್ತಾಶ್ರಯದಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಮಾನ್ಯ ಸಂಸದ ಬಿವೈ ರಾಘವೇಂದ್ರ ಅವರು ಧ್ವಜಾರೋಹಣ ನೆರವೇರಿಸಿದರು.
” ನಮ್ಮ ಅನ್ನ ಕೊಡುವ ಭಾಷೆ ಕನ್ನಡ ಇಂತಹ ಪುಣ್ಯದ ಭೂಮಿ ಕನ್ನಡ ನಾಡು. ಭಾಷೆ, ನಾಡು,ನುಡಿಗೆ ಹೆಚ್ಚಿನ ಕೆಲಸವನ್ನು ಮಾಡೋಣ. ಕನ್ನಡ ನಾಡಿನಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಕ್ಕೆ ಮೊದಲ ಆದ್ಯತೆ ಕೊಡುತ್ತೇವೆ. ಜೊತೆಗೆ ಮುಂದಿನ ದಿನದಲ್ಲಿ ಶಿವಮೊಗ್ಗವು ಕನ್ನಡ ಸಾಹಿತ್ಯ ಕ್ಷೇತ್ರ ಮತ್ತು ಪ್ರವಾಸೋದ್ಯಮದಲ್ಲಿ ಅನೇಕ ಕೊಡುಗೆ ನೀಡಲಿದೆ. ನಮ್ಮ ಜಿಲ್ಲೆಯನ್ನು, ಇನ್ನೂ ಎತ್ತರಕ್ಕೆ ತೆಗೆದುಕೊಂಡು ಹೋಗುತ್ತೇವೆ” ಎಂದು ಮಾನ್ಯ ಸಂಸದ ಬಿವೈ ರಾಘವೇಂದ್ರ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕವಿರಾಜ್, ಎಂ. ಎ. ಡಿ. ಬಿ. ಅಧ್ಯಕ್ಷರಾದ ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚನ್ನವೀರಪ್ಪ. ಟಿ. ಮುಂತಾದ ಗಣ್ಯರು ಉಪಸ್ಥಿತರಿದ್ದರು.