Tuesday, August 4, 2026
Tuesday, August 4, 2026
Home Blog Page 31

Vidyatheertha Kripa ಶೃಂಗೇರಿಯಲ್ಲಿ ಶ್ರೀಸನ್ನಿಧಾನದಿಂದ ” ವಿದ್ಯಾತೀರ್ಥ ಕೃಪಾ” ಉದ್ಘಾಟನೆ.

0

Vidyatheertha Kripa ಪರಾಭವ ಸಂವತ್ಸರ ಜ್ಯೇಷ್ಠ ಕೃಷ್ಣ ದಶಮಿಯಂದು (ಜುಲೈ 9, 2026), ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂ ಅವರು ದಕ್ಷಿಣಾmnaya ಶ್ರೀ ಶಾರದಾ ಪೀtha narasimha vanadaಲ್ಲಿ ನೂತನವಾಗಿ ನಿರ್ಮಿಸಲಾದ “ವಿದ್ಯಾತೀರ್ಥ ಕೃಪಾ”ವನ್ನು ಉದ್ಘಾಟಿಸಿದರು.

ಬೆಳಗ್ಗೆ 8:30ರ ಸುಮಾರಿಗೆ ಆಗಮಿಸಿದ ಜಗದ್ಗುರು ಶ್ರೀ ಮಹಾಸನ್ನಿಧಾನಕ್ಕೆ ಶೃಂಗೇರಿ ಮಠದ ಸಿಇಒ ಹಾಗೂ ಆಡಳಿತಾಧಿಕಾರಿ ಗುರು ಸೇವಾ ನಿರತ ಶ್ರೀ ಪಿ.ಎ.ಮುರಳಿ ಅವರು ಆಪ್ತ ಕಾರ್ಯದರ್ಶಿ ವೇದಬ್ರಹ್ಮಶ್ರೀ ಟಿ.ದಕ್ಷಿಣಾಮೂರ್ತಿಯವರೊಂದಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ ಕೋರಿದರು.

Vidyatheertha Kripa ಸಹಸ್ರ ಮೋದಕ ಗಣಪತಿ ಹೋಮದ ಪೂರ್ಣಾಹುತಿಯನ್ನು ಜಗದ್ಗುರು ಶ್ರೀ ಮಹಾಸನ್ನಿಧಾನಂ ಅವರ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಲಾಯಿತು. ನಂತರ ಜಗದ್ಗುರು ಶ್ರೀ ಮಹಾಸನ್ನಿಧಾನಂ ಅವರು ಖಾಸಗಿ ಕಾರ್ಯದರ್ಶಿ ಕಚೇರಿಯ ಮುಖ್ಯ ಆವರಣವನ್ನು ಪ್ರವೇಶಿಸಿ, ವೇದಘೋಷದೊಂದಿಗೆ ಸಾಂಪ್ರದಾಯಿಕ ದೀಪ ಬೆಳಗಿಸುವುದರೊಂದಿಗೆ ಕಟ್ಟಡವನ್ನು ಉದ್ಘಾಟಿಸಿದರು. ನಂತರ ಜಗದ್ಗುರು ಶ್ರೀ ಮಹಾಸನ್ನಿಧಾನಂ ಅವರು ಸೇವಾ ಕೌಂಟರ್‌ಗಳು ಸೇರಿದಂತೆ ಹೊಸದಾಗಿ ನಿರ್ಮಿಸಲಾದ ಖಾಸಗಿ ಕಾರ್ಯದರ್ಶಿ ಕಚೇರಿಗಳನ್ನು ಪರಿಶೀಲಿಸಿದರು. ಜಗದ್ಗುರು ಶ್ರೀ ಮಹಾಸನ್ನಿಧಾನಂ ಅವರು ಸ್ಮರಣಾರ್ಥ ಫಲಕವನ್ನು ಅನಾವರಣಗೊಳಿಸಿದರು, ಶೃಂಗೇರಿ ಮಠದ ಆಡಳಿತ ಮಂಡಳಿಯ ಸದಸ್ಯರು ಮತ್ತು ನೆರೆದಿದ್ದ ಭಕ್ತರನ್ನು ಆಶೀರ್ವದಿಸಿದರು.

ಸಾಗರದಲ್ಲಿ ಮುಂದುವರೆದ ಮಳೆಯಬ್ಬರ. ಹಾನಿ ಪ್ರದೇಶಗಳಿಗೆ ತಹಶೀಲ್ದಾರ್ ಪ್ರತಿಭಾ ಭೇಟಿ, ಪರಿಶೀಲನೆ

0

ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಲವು ಪ್ರದೇಶಗಳಲ್ಲಿ ಮನೆಗಳು ಸೇರಿದಂತೆ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪ್ರಕೃತಿ ವಿಕೋಪ ನಿರ್ವಹಣೆಗೆ 24 ಗಂಟೆಗಳ ಕಂಟ್ರೋಲ್ ರೂಂ ಆರಂಭಿಸಲಾಗಿದೆ.

ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಾಗರ ತಾಲೂಕಿನ ವಿವಿಧ ಭಾಗಗಳಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಅಧಿಕಾರಿಗಳೊಂದಿಗೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾಗರ ನಗರದ ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಅವರ ಮನೆಗೆ ಮಳೆಯಿಂದ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಪರಿಸ್ಥಿತಿಯನ್ನು ಅವಲೋಕಿಸಿದರು. ಸಂತ್ರಸ್ತ ಕುಟುಂಬಕ್ಕೆ ಸರ್ಕಾರದ ನಿಯಮಾನುಸಾರ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕ್ಷೇತ್ರದಲ್ಲೇ ಮೊಕ್ಕಾಂ ಹೂಡಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ್ ಸೂಚನೆ ನೀಡಿದರು. ಹಾನಿಗೊಳಗಾದ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಿ, ವರದಿ ಸಲ್ಲಿಸಿ ಪರಿಹಾರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಕೃತಿ ವಿಕೋಪ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ತಾಲ್ಲೂಕು ಆಡಳಿತದ ವತಿಯಿಂದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಅನ್ನು ಆರಂಭಿಸಲಾಗಿದೆ. ಸಾರ್ವಜನಿಕರು ತುರ್ತು ನೆರವಿನ ಅಗತ್ಯವಿದ್ದಲ್ಲಿ ಸಾಗರ ತಾಲ್ಲೂಕು ಕಚೇರಿಯ 08183-226074 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ರಾಜ್ಯಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಪ್ರಸ್ತಾಪ: ಸೀಎಂ ಡಿ.ಕೆ.ಶಿವಕುಮಾರ್ ಉನ್ನತ ಮಟ್ಟದ ಸಭೆಯಲ್ಲಿ ಭಾಗಿ

0

ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಸಿಎಂ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಚಿವ ಎಂ ಬಿ ಪಾಟೀಲ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಸಿಎಂ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್ ಮತ್ತಿತರರು ಭಾಗವಹಿಸಿದ್ದರು

ಕನಿಷ್ಟ ಬೆಂಬಲ ಬೆಲೆ ಅನುದಾನ ₹ 190 ಕೋಟಿ ಬಿಡುಗಡೆ: ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಸಿದ ಸಚಿವ ಮುನಿಯಪ್ಪ

0

ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ, ಕರ್ನಾಟಕದ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಗೆ ಸಂಬಂಧಿಸಿದ ಬಾಕಿ ಮರುಪಾವತಿ ಮೊತ್ತಗಳ ಬಿಡುಗಡೆ ಕುರಿತು ಚರ್ಚಿಸಿದರು.

ಸಭೆಯಲ್ಲಿ ಸಚಿವರು, ಕೆಎಂಎಸ್ 2025-26ರಲ್ಲಿ ರಾಜ್ಯವು 5.69 ಲಕ್ಷ ಮೆಟ್ರಿಕ್ ಟನ್ ರಾಗಿ, 2.21 ಲಕ್ಷ ಮೆಟ್ರಿಕ್ ಟನ್ ಜೋಳ ಹಾಗೂ 0.0567 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು ಖರೀದಿಸಿದ್ದು, ಇದರ ಒಟ್ಟು ಮೌಲ್ಯ ₹4,422.17 ಕೋಟಿ ಎಂದು ವಿವರಿಸಿದರು. ಈ ಪೈಕಿ ಭಾರತ ಸರ್ಕಾರವು ಇದುವರೆಗೆ ₹190.10 ಕೋಟಿ ಬಿಡುಗಡೆ ಮಾಡಿದ್ದು, ಉಳಿದ ₹4,232.07 ಕೋಟಿ ಮರುಪಾವತಿಯನ್ನು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಅಲ್ಲದೆ, ಕೆಎಂಎಸ್ 2022-23ಕ್ಕೆ ಸಂಬಂಧಿಸಿದ ₹375.99 ಕೋಟಿ ತಾತ್ಕಾಲಿಕ ಸಬ್ಸಿಡಿ ಹಕ್ಕುಪತ್ರವು ಕೇಂದ್ರ ಸರ್ಕಾರದ ಪರಿಶೀಲನೆಯಲ್ಲಿದ್ದು, ಅದನ್ನೂ ಶೀಘ್ರ ಮಂಜೂರು ಮಾಡುವಂತೆ ಕೋರಿದರು.

ಇದರ ಜೊತೆಗೆ, ಕೆಎಂಎಸ್ 2009-10 ರಿಂದ 2024-25ರವರೆಗಿನ ಅವಧಿಗೆ ಸಂಬಂಧಿಸಿದ ₹1,902.58 ಕೋಟಿ ಎಂಎಸ್‌ಪಿ ಬಾಕಿ ಮರುಪಾವತಿ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡುವಂತೆ ಸಚಿವರು ಮನವಿ ಮಾಡಿದರು.

ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ₹1,902.58 ಕೋಟಿ ಬಾಕಿ ಮರುಪಾವತಿ ಪ್ರಕರಣವನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಹಾಗೆಯೇ ಕೆಎಂಎಸ್ 2025-26ರ ಮರುಪಾವತಿ ಹಕ್ಕುಪತ್ರಗಳು ರಾಜ್ಯ ಸರ್ಕಾರದಿಂದ ಸಲ್ಲಿಕೆಯಾದ ತಕ್ಷಣ ನಿಯಮಾನುಸಾರ ಪರಿಶೀಲಿಸಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.

ಕೇಂದ್ರ ಸಚಿವರ ಸಕಾರಾತ್ಮಕ ಸ್ಪಂದನೆಗೆ ಹಾಗೂ ಪ್ರಸಕ್ತ ಹಣಕಾಸು ವರ್ಷದಲ್ಲಿ ₹190.10 ಕೋಟಿ ಬಿಡುಗಡೆ ಮಾಡಿರುವುದಕ್ಕೆ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಬಾಕಿ ಇರುವ ಎಲ್ಲ ಮರುಪಾವತಿ ಮೊತ್ತಗಳು ಶೀಘ್ರ ಬಿಡುಗಡೆಯಾಗಲಿದ್ದು, ಇದರಿಂದ ರಾಜ್ಯದಲ್ಲಿ ಎಂಎಸ್‌ಪಿ ಖರೀದಿ ಕಾರ್ಯಗಳು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಯಲಿದ್ದು, ರೈತರಿಗೆ ಸಕಾಲದಲ್ಲಿ ಪಾವತಿ ಮಾಡಲು ಅನುಕೂಲವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಶಿಕಾರಿಪುರ ಆಸ್ಪತ್ರೆಗೆ ನ್ಯಾ.ಎಂ.ಎಸ್. ಸಂತೋಷ್ ಭೇಟಿ: ಮಕ್ಕಳು,ತಾಯಂದಿರ ಚಿಕಿತ್ಸೆ ಕುರಿತು ಕುಂದುಕೊರತೆ ಪರಿಶೀಲನೆ

0

ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂತೋಷ್ ಎಂ ಎಸ್ ರವರು ಮಂಗಳವಾರದಂದು ಶಿಕಾರಿಪುರ ತಾಲೂಕಿಗೆ ಭೇಟಿ ನೀಡಿ ಅಲ್ಲಿನ ಸಾರ್ವಜನಿಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಹಠಾತ್ ಭೇಟಿ ನೀಡಿ ವೈದ್ಯಕೀಯ ಸೇವೆಗಳ ಬಗ್ಗೆ ಲ್ಯಾಬೋರೇಟರಿ ಸೇವೆಗಳ ಬಗ್ಗೆ ಔಷದ ವಿತರಣೆಯ ಬಗ್ಗೆ ಹಾಗೂ ಸ್ವಚ್ಛತೆಯ ಬಗ್ಗೆ ಪರಿಶೀಲಿಸಿ ಅಲ್ಲಿನ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿರುವಂತಹ ಮಕ್ಕಳು ಮತ್ತು ತಾಯಂದಿರೊಂದಿಗೆ ಮಾತನಾಡಿ ಕುಂದು ಕೊರತೆಗಳನ್ನು ಆಲಿಸಿದರು. ಈ ಸಮಯದಲ್ಲಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾದ ಮಕ್ಕಳು ಮತ್ತು ತಾಯಂದಿರಿಗೆ ನೀಡಲಾಗುತ್ತಿರುವ ಆಹಾರದ ತಪಾಸಣೆ ಮತ್ತು ಆರೈಕೆದಾರರಿಗೆ ವ್ಯವಸ್ಥೆ ಮಾಡಲಾದ ಭೋಜನಾಲಯದ ಸ್ಥಳವನ್ನು ಪರಿಶೀಲಿಸಿದರು.

ಇದೇ ವೇಳೆ ಅವರು ಶಿಕಾರಿಪುರ ನ್ಯಾಯಾಲಯದ ಆವರಣದಲ್ಲಿ ಕಂದಾಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ತಾಲೂಕ ಪಂಚಾಯತ್ ಹಾಗೂ ಪುರಸಭೆ ಅಧಿಕಾರಿಗಳೊಂದಿಗೆ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ ಬಿ ಎನ್ ರಮೇಶ್ ಬಾಬು ರವರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ಎಸ್ ರವರು ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀ ಧನಂಜಯ ಹೆಗಡೆ ರವರೊಂದಿಗೆ ಸಭೆಯನ್ನು ನಡೆಸಿ ಮುಂಬರುವ ಉಭಯ ಲೋಕ ಅದಾಲತ್ ತಯಾರಿಯ ಬಗ್ಗೆ ಹಾಗೂ ಕೆರೆಗಳ ಪುನರುಜ್ಜೀವನ ಮತ್ತು ಸಸಿ ನೆಡುವ ಅಭಿಯಾನದ ಕುರಿತು ಮಾಹಿತಿಯನ್ನು ನೀಡಿ ಪ್ರಗತಿಯನ್ನು ಪರಿಶೀಲನೆ ಮಾಡಿದರು.

ತದನಂತರದಲ್ಲಿ ಶಿಕಾರಿಪುರ ವಕೀಲರ ಸಂಘಕ್ಕೆ ಭೇಟಿ ನೀಡಿ ವಕೀಲರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರೊಂದಿಗೆ ವಕೀಲರ ಸಂಘದ ಎಲ್ಲಾ ಸದಸ್ಯರಿಗೆ ಮುಂಬರುವ ರಾಷ್ಟ್ರೀಯ ಲೋಕ ಅದಾಲತ್ ಹಾಗೂ ವಿಶೇಷ ಲೋಕ ಅದಾಲತ್ ವಿಚಾರವಾಗಿ ವಿಸ್ತೃತವಾದ ಮಾಹಿತಿಯನ್ನು ನೀಡಿ ಅದರ ಯಶಸ್ಸಿಗೆ ಸಹಕಾರ ನೀಡುವಂತೆ ಕೋರಿಕೊಂಡು ಕಾನೂನು ಸೇವೆಗಳ ಪ್ರಾಧಿಕಾರದಿಂದ ಹಮ್ಮಿಕೊಳ್ಳಲಾದ ಅಭಿಯಾನಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.

ತದನಂತರ ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾಪ್ತಕೋತರ ಅಧ್ಯಯನ ಕೇಂದ್ರದಲ್ಲಿ ತಾಲೂಕ ಕಾನೂನು ಸೇವೆಗಳ ಸಮಿತಿ ಹಾಗೂ ಕಾಲೇಜಿನಿಂದ ಜಂಟಿಯಾಗಿ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ, ಮಾದಕ ವಸ್ತುಗಳ ವ್ಯಸನದಿಂದ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ನೀಡಿ ವಿದ್ಯಾರ್ಥಿ ಜೀವನದಲ್ಲಿ ಇರುವಂತಹ ಸಮಯವನ್ನು ಮತ್ತು ಶಕ್ತಿಯನ್ನು ಕೇಂದ್ರೀಕರಿಸಿ ಎಲ್ಲರೂ ಉತ್ತಮ ಪ್ರಜೆಗಳಾಗುವಂತೆ ಮತ್ತು ದೇಶ ಸೇವೆಗಾಗಿ ಸದೃಢ ದೇಹ ಮತ್ತು ಮನಸ್ಸನ್ನು ಹೊಂದಿರುವ ಯುವಕರು ಮತ್ತು ಯುವತಿಯರು ಸದೃಢ ಭಾರತದ ಪ್ರಗತಿಗೆ ಕಂಕಣಬದ್ಧರಾಗಬೇಕು ಎಂದು ಕರೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರು ವಹಿಸಿದ್ದು ಮುಖ್ಯ ಅತಿಥಿಗಳಾಗಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

ರೈತರ ಏಳಿಗೆಗಾಗಿ 23 ನೂತನ ತಳಿಗಳ ಅಭಿವೃದ್ಧಿ- ಡಾ.ಆರ್.ಸಿ.ಜಗದೀಶ್

0

ಸಂಶೋಧನೆಯಲ್ಲಿ ನಾವೀನ್ಯತೆಯನ್ನು ತರಲು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು, ಅತ್ಯಾಧುನಿಕ ಸಂಶೋಧನೆಗಳ ಮೂಲಕ ಕೃಷಿ ಕ್ಷೇತ್ರಕ್ಕೆ ಪುಷ್ಠಿ ನೀಡುವ ಕಾರ್ಯವನ್ನು ವಿಶ್ವವಿದ್ಯಾಲಯ ಮಾಡುತ್ತಿದೆ. ಇದರ ಫಲವಾಗಿ ಕಳೆದ ವರ್ಷ ರೈತರ ಏಳಿಗೆಗಾಗಿ ವಿವಿಧ ಬೆಳೆಗಳ ನೂತನ 23 ತಳಿಗಳು, 58 ತಂತ್ರಜ್ಞಾನಗಳು ಹಾಗೂ 3 ಪೇಟೆಂಟ್‌ಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಶಿವಮೊಗ್ಗದ ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್. ಸಿ. ಜಗದೀಶ ಅವರು ತಿಳಿಸಿದರು.
ಇರುವಕ್ಕಿಯ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ 10ನೇ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮದು ನೂತನ ವಿಶ್ವವಿದ್ಯಾಲಯವಾಗಿದ್ದರೂ, ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಹಾಗೂ ಪಿಹೆಚ್‌ಡಿ ಪದವಿಗಳನ್ನು ಪ್ರಾರಂಭಿಸಲಾಗಿದೆ. ಈಗಾಗಲೇ ಸುದೀರ್ಘ ಇತಿಹಾಸ ಹೊಂದಿರುವ ಇತರೆ ಕೃಷಿ ವಿಶ್ವವಿದ್ಯಾಲಯಗಳ ಮಟ್ಟಕ್ಕೆ ನಮ್ಮ ವಿಶ್ವವಿದ್ಯಾಲಯ ಶೈಕ್ಷಣಿಕ ಅಭಿವೃದ್ಧಿ ಸಾಧಿಸಿದೆ. ಇಲ್ಲಿನ ವಿದ್ಯಾರ್ಥಿಗಳು ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಹಾಗೂ ವಿದೇಶಗಳಲ್ಲಿ ಅಧ್ಯಯನ ಕೈಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ನಡೆಸುವ ಅತ್ಯಾಧುನಿಕ ಸಂಶೋಧನೆಗಳು ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುವ ನವೀನ ತಂತ್ರಜ್ಞಾನಗಳ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಕುಲಪತಿಗಳು ಆಶಾವಾದ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಶಿಕ್ಷಣ ನಿರ್ದೇಶಕರಾದ ಡಾ. ಬಿ. ಹೇಮ್ಲಾ ನಾಯ್ಕ ಅವರು ಮಾತನಾಡಿ, “ಕೃಷಿ ಕ್ಷೇತ್ರದ ಸಂಶೋಧನೆ ಎಂಬುದು ನಿರಂತರ ಪ್ರಕ್ರಿಯೆ. ರೈತರು ಅನುಭವಿಸುವ ಸಂಕಷ್ಟಗಳಿಗೆ ವಿವಿಧ ತಂತ್ರಜ್ಞಾನಗಳ ಮೂಲಕ ಸರಿಯಾದ ಸಮಯಕ್ಕೆ ಸೂಕ್ತ ಪರಿಹಾರ ನೀಡುವಲ್ಲಿ ಯುವ ವಿಜ್ಞಾನಿಗಳ ಪಾತ್ರ ಮಹತ್ತರವಾಗಿದೆ. ಬಹುಶಿಸ್ತೀಯ ವಿಜ್ಞಾನಿಗಳ ಪರಿಶ್ರಮ ಮತ್ತು ವಿದ್ಯಾರ್ಥಿಗಳ ಸಂಶೋಧನೆಯ ಫಲವಾಗಿ ಹೊರಹೊಮ್ಮುವ ನವೀನ ತಂತ್ರಜ್ಞಾನಗಳು ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನೆರವಾಗಲಿವೆ” ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದ ಡೀನ್ (ಸ್ನಾತಕೋತ್ತರ) ಹಾಗೂ ಸಂಘಟನಾ ಕಾರ್ಯದರ್ಶಿಗಳಾದ ಡಾ. ಟಿ. ಕೆ. ನಾಗರತ್ನ ಅವರು, “ಈ ಸಂಶೋಧನಾ ಸಮ್ಮೇಳನದಲ್ಲಿ 104 ಸ್ನಾತಕೋತ್ತರ ವಿದ್ಯಾರ್ಥಿಗಳು ಪೋಸ್ಟರ್ ಪ್ರಸ್ತುತಿ ಮೂಲಕ ಹಾಗೂ 11 ಡಾಕ್ಟರಲ್ (ಪಿಹೆಚ್‌ಡಿ) ವಿದ್ಯಾರ್ಥಿಗಳು ಮೌಖಿಕ ಪ್ರಸ್ತುತಿ ಮೂಲಕ ತಮ್ಮ ಸಂಶೋಧನಾ ಫಲಿತಾಂಶಗಳನ್ನು ಮಂಡಿಸಲಿದ್ದಾರೆ. ವಿವಿಧ ವಿಶ್ವವಿದ್ಯಾಲಯಗಳಿಂದ ಆಗಮಿಸಿರುವ ನುರಿತ ತಜ್ಞರ ತಂಡವು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆಗಳನ್ನು ನೀಡಲಿದೆ” ಎಂದು ಮಾಹಿತಿ ನೀಡಿದರು.
ಸಮ್ಮೇಳನದಲ್ಲಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರಾದ ಡಾ. ಎಸ್. ಶ್ರೀಧರ, ವಿಸ್ತರಣಾ ನಿರ್ದೇಶಕರಾದ ಡಾ. ರಾಘವೇಂದ್ರ ಮೇಸ್ತ, ವಿದ್ಯಾರ್ಥಿ ಕಲ್ಯಾಣ ಡೀನ್ ಡಾ. ನಾರಾಯಣ ಮಾವರಕರ ಹಾಗೂ ವಿಶ್ವವಿದ್ಯಾಲಯದ ವಿವಿಧ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಡಾ. ಹೆಚ್.ಕೆ. ವೀರಣ್ಣ ವಂದಿಸಿದರು.

ರಿಪ್ಪನ್ ಪೇಟೆಯ ಬಿಳಕಿ ಬಳಿ ಅನಾಥ ಹೆಣ್ಣು ಮಗು ಪತ್ತೆ. ಪ್ರಕರಣ ದಾಖಲು

0

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಿಳಕಿ ಹತ್ತಿರದ ಟೆಂಕೋಲ್ ಬಸ್ ನಿಲ್ದಾಣದ ಬಳಿ ದಿನಾಂಕ 05.07.2026 ರಂದು ಸುಮಾರು 10 ರಿಂದ 11 ದಿನದ ಅನಾಥ ಹೆಣ್ಣು ಮಗುವೊಂದು ಪತ್ತೆಯಾಗಿದೆ.
ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾಧಿಕಾರಿಗಳು ಮಗುವನ್ನು ರಕ್ಷಿಸಿ, ದಿನಾಂಕ 06.07.2026 ರಂದು ಪೋಷಕರ ಪತ್ತೆಗಾಗಿ ದೂರನ್ನು ದಾಖಲಿಸಿಕೊಂಡಿದ್ದಾರೆ. ಮಗುವಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಮಗುವಿನ ಮುಂದಿನ ಪುನರ್ವಸತಿ ಮತ್ತು ಹಿತದೃಷ್ಟಿಯಿಂದ ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ಪಡೆಯಲಾಗಿದೆ.
ಮಗುವಿನ ಮುಂದಿನ ಪುನರ್ವಸತಿ ಮತ್ತು ಹಿತದೃಷ್ಟಿಯಿಂದ, ಈ ಮಗುವಿನ ಪೋಷಕರು ಅಥವಾ ಸಂಬಂಧಿಕರು ಯಾರಾದರೂ ಇದ್ದಲ್ಲಿ, ಅಥವಾ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಅಧ್ಯಕ್ಷರು, ಸರ್ಕಾರಿ ಬಾಲಕರ ಬಾಲಮಂದಿರ, ಆಲ್ಕೊಳ, ಶಿವಮೊಗ್ಗ ಇವರ ಕಛೇರಿ.
ದೂರವಾಣಿ ಸಂಖ್ಯೆ: 0182-295511 ಇವರನ್ನು‌ ಸಂಪರ್ಕಿಸಬಹುದೆಂದು
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

Department of Social Welfare ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

0

Department of Social Welfare ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ವೃತ್ತಿ ನಿಷೇಧ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ 3 ವರ್ಷದ ಅವಧಿಗೆ ಇಬ್ಬರು ಮಹಿಳೆಯರನ್ನೊಳಗೊಂಡ 4 ಜನ ಸಾಮಾಜಿಕ ಕಾರ್ಯಕರ್ತರನ್ನು ನಾಮನಿರ್ದೇಶನ ಮಾಡಿಕೊಳ್ಳಲು ಸಾಮಾಜಿಕ ಆಸಕ್ತ ಕಾರ್ಯಕರ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ನಿಗದಿತ ನಮೂನೆಯ ಅರ್ಜಿಯನ್ನು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಮತ್ತು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಪೃಥ್ವಿ ಮ್ಯಾನ್ಷನ್, 1ನೇ ಮಹಡಿ, 100 ಅಡಿ ರಸ್ತೆ, ವಿನೋಬನಗರ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸ್ವವಿವರಗಳೊಂದಿಗೆ ಜು.24 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ದೂ.ಸಂ.08182-249241 ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗದ ಜಲಶುದ್ಧಿಕರಣ ಘಟಕದಲ್ಲಿ ಸೋರಿಕೆ: ದುರಸ್ತಿಯಾಗುವವರೆಗೂ ನಗರಕ್ಕೆ ದೈನಂದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

0

ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

ನೇರ ಸಂದರ್ಶನಕ್ಕೆ ಕರೆ: ಸಕ್ರೆಬೈಲು ಆನೆಬಿಡಾರಕ್ಕೆ ಪಶುವೈದ್ಯರ ನೇಮಕಾತಿ ಪ್ರಕ್ರಿಯೆ

0

ಶಿವಮೊಗ್ಗ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಿಗೆ ಚಿಕಿತ್ಸೆ ನೀಡಲು ಹಾಗೂ ವನ್ಯಜೀವಿಗಳ ರಕ್ಷಣಾ ಕಾರ್ಯಕ್ಕಾಗಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರೊಬ್ಬರ ಸೇವೆಯ ಅಗತ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಿಸಿರುವಂತೆ, ಈ ಹುದ್ದೆಯು ತುರ್ತು ಸಂದರ್ಭಗಳಲ್ಲಿ ವನ್ಯಪ್ರಾಣಿಗಳಿಗೆ ಚಿಕಿತ್ಸೆ ನೀಡುವುದು, ಮರಣೋತ್ತರ ಪರೀಕ್ಷೆ ನಡೆಸುವುದು ಹಾಗೂ ಮಾನವ-ವನ್ಯಪ್ರಾಣಿ ಸಂಘರ್ಷದ ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ.
ವಿದ್ಯಾರ್ಹತೆ: ಬ್ಯಾಚಲರ್ ಆಫ್ ವೆಟರ್ನರಿ ಸೈನ್ಸ್ & ಅನಿಮಲ್ ಹಸ್ಬ್ಯಂಡರಿ (B.V.Sc & A.H) ಪದವಿ ಪಡೆದಿರಬೇಕು. ವನ್ಯಜೀವಿ ವಿಷಯದಲ್ಲಿ ಸ್ನಾತಕೋತ್ತರ ಪಶುವೈದ್ಯಕೀಯ ಪದವಿ (ಪೋಸ್ಟ್ ಗ್ರಾಜ್ಯುಯೇಷನ್) ಪಡೆದವರಿಗೆ ಹಾಗೂ ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ವನ್ಯಜೀವಿ ಕ್ಷೇತ್ರ ಅಥವಾ ಮೃಗಾಲಯಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಆಸಕ್ತರು ತಮ್ಮ ಸ್ವಯಂ ವಿವರಗಳ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ಜುಲೈ 27 ರಂದು ಬೆಳಿಗ್ಗೆ 10 ಗಂಟೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ,‌ವನ್ಯಜೀವಿ ವಿಭಾಗ ಶಿವಮೊಗ್ಗ ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಅರ್ಜಿ ನಮೂನೆಯನ್ನು ಶಿವಮೊಗ್ಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಿಂದ ಅಥವಾ https://sakrebailuelephantcamp.org/ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ
ಕಚೇರಿ ದೂರವಾಣಿ: 08182-222983,
ವಿಜಯ್‌ಕುಮಾರ್ ಕಾಳಪ್ಪನವರ್ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 9481461553.
ವಿನಯ್ ಜೆ ಆರ್, ವಲಯ ಅರಣ್ಯಾಧಿಕಾರಿ: 9663121406 ಇವರನ್ನು ಸಂಪರ್ಕಿಸಬಹುದೆಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.