Sunday, August 2, 2026
Sunday, August 2, 2026
Home Blog Page 4

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಬಳಿ ತಾತ್ಕಾಲಿಕವಿದ್ದ ಹೂವಿನ ಮಾರುಕಟ್ಟೆ.ಸೂಕ್ತವಾಗಿ ಸ್ಥಳಾಂತರ. ಸಾರ್ವಜನಿಕರಲ್ಲಿ ಸಹಕಾರಕ್ಕೆ ವಿನಂತಿ.

0

ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿದ್ದ ಹೂವಿನ ಮಾರುಕಟ್ಟೆಯನ್ನು, ಕಳೆದ 15 ದಿನಗಳಿಂದ ವಿಶೇಷ ಕಾರ್ಯಾಚರಣೆ ನಡೆಸಿ ಸೂಕ್ತ ಸ್ಥಳಾಂತರಮಾಡಲಾಗಿದೆ.
ಹೂವಿನ ವ್ಯಾಪಾರಸ್ಥರಿಗೆ ಒಂದು ವಾರದ ಕಾಲಾವಕಾಶ ನೀಡಿದ ನಂತರ, ಶಿವಪ್ಪನಾಯಕ ಸರ್ಕಲ್ ಸಮೀಪದ ಬಹುಮಹಡಿ ಕಟ್ಟಡಕ್ಕೆ ಸಂಪೂರ್ಣವಾಗಿ ಸ್ಥಳಾಂತರಿಸಲಾಯಿತು.

ಈ ಹಿನ್ನೆಲೆಯಲ್ಲಿ, ಖಾಲಿಯಾಗಿರುವ ಸದರಿ ಸ್ಥಳದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದ್ವಿಚಕ್ರ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಈ ದಿನದಿಂದ ಕಲ್ಪಿಸಲಾಗಿದೆ.

ಸಾರ್ವಜನಿಕರು ಈ ಪಾರ್ಕಿಂಗ್ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು, ಸಂಚಾರ ವ್ಯವಸ್ಥೆ ಸುಗಮವಾಗಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ಸಾರ್ವಜನಿಕರಲ್ಲಿ ವಿನಂತಿಸಿದೆ.

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

0

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣವನ್ನು ಬೆಳೆಸುವ ಒಂದು ಒಂದು ಸೇವಾ ಸಂಸ್ಥೆಯಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಅಧ್ಯಕ್ಷ ಶೇಷಗಿರಿ ಡಿ.ಕೆ. ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಹಾಗೂ ರೋಟರಿ ಶಿವಮೊಗ್ಗ ಪೂರ್ವ ಎಜುಕೆಷನ್ ಅಂಡ್ ಚಾರಿಟಬಲ್ ಟ್ರಸ್ಟ್ (ರಿ) ರೋಟರಿ ಪೂರ್ವ ಇಂಗ್ಲೀಷ್ ಹೈಸ್ಕೂಲ್, ರಾಜೇಂದ್ರ ನಗರ, ಶಿವಮೊಗ್ಗ ಇವರು ಏರ್ಪಡಿಸಿದ್ದ ರೋಟರಿ ಇಂಟರಾಕ್ಟ್ ಕ್ಲಬ್ 2026-27 ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣವನ್ನು ಬೆಳೆಸುವ ರೋಟರಿ ಇಂಟರಾಕ್ಟ್ ಕ್ಲಬ್ ಒಂದು ಸೇವಾ ಸಂಸ್ಥೆಯಾಗಿದ್ದು, ಇದು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶಗಳನ್ನು ಒದಗಿಸುತ್ತದೆ ಎಂದರು.

ಇಂಟರಾಕ್ಟ್ ಕ್ಲಬ್ ಮಹತ್ವದ ಬಗ್ಗೆ ವಿವರಿಸುತ್ತಾ ಇದರ ಮುಖಾಂತರ ನೀವುಗಳು ನಾಯಕತ್ವ ಕೌಶಲ್ಯಗಳನ್ನು ಬೆಳೆಸಬಹುದು, ಟೀಂ ವರ್ಕ್ ಕಲಿಯಬಹುದು. ಸಮಾಜದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬಹುದು, ಇದು ಕೇವಲ ಕ್ಲಬ್ ಅಲ್ಲ-ಇದು ವ್ಯಕ್ತಿತ್ವ ನಿರ್ಮಾಣದ ಮಾರ್ಗವಾಗಿದೆ ಎಂದು ತಿಳಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಉಪಾಧ್ಯಕ್ಷರಾದ ಜಿ.ವಿಜಯ್ ಕುಮಾರ್ ಮಾತನಾಡಿ, ಇಂಟರಾಕ್ಟ್ ಕ್ಲಬ್ ಎಂಬುದು 12 ರಿಂದ 18 ವರ್ಷ ವಯಸ್ಸಿನ ಯುವಕರಿಗಾಗಿ ಸ್ಥಳೀಯ ರೋಟರಿ ಕ್ಲಬ್ ಗಳಿಂದ ಪ್ರಾಯೋಜಿಸಲ್ಪಟ್ಟ ಒಂದು ಸೇವಾ ಮತ್ತು ನಾಯಕತ್ವ ಸಂಸ್ಥೆಯಾಗಿದೆ. ಈ ಕ್ಲಬ್ ಗಳು ಸ್ವ-ಆಡಳಿತ ನಡೆಸುತ್ತಿದ್ದು, ವಾರ್ಷಿಕವಾಗಿ ಕನಿಷ್ಠ ಎರಡು ಪ್ರಮುಖ ಸೇವಾ ಯೋಜನೆಗಳನ್ನು ಕಾರ್ಯಗತಗೊಳಿಸುತ್ತವೆ. ಒಂದು ಅವರ ಸ್ಥಳೀಯ ಸಮುದಾಯಕ್ಕೆ ಪ್ರಯೋಜನಕಾರಿ ಮತ್ತು ಇನ್ನೊಂದು ಅಂತರರಾಷ್ಟ್ರೀಯ ತಿಳುವಳಿಕೆಯನ್ನು ಉತ್ತೇಜಿಸುತ್ತದೆ. ಯೋಜನೆಗಳು ಸಾಮಾನ್ಯವಾಗಿ ಶಿಕ್ಷಣ, ಪರಿಸರ ಸುಸ್ಥಿರತೆ ಮತ್ತು ಸಾರ್ವಜನಿಕ ಆರೋಗ್ಯದಂತಹ ಸ್ಥಳೀಯ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುತ್ತವೆ ಎಂದು ಅಭಿಮತ ವ್ಯಕ್ತಪಡಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಕಾರ್ಯದರ್ಶಿಯಾದ ಆರ್.ಮನೋಹರ ಮಾತನಾಡಿ, ಈ ಕಾರ್ಯಕ್ರಮವು ರೋಟರಿಯ ಧ್ಯೇಯವಾಕ್ಯವಾದ “ಸ್ವಯಂ ಸೇವೆಗಿಂತ ಮೇಲ್ಪಟ್ಟು ಸೇವೆ”ಯನ್ನು ಆಧರಿಸಿದೆ. ಇದು ಶಾಲಾ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸಮಗ್ರತೆ, ವೈಯಕ್ತಿಕ ಜವಾಬ್ದಾರಿ ಮತ್ತು ಕಠಿಣ ಪರಿಶ್ರಮದ ಬಗ್ಗೆ ಕಲಿಸುತ್ತದೆ. ಈ ಇಂಟರಾಕ್ಟ್ ಕ್ಲಬ್ ವೇದಿಕೆಯನ್ನು ರೂಪಿಸಿರುವ ಶಾಲೆಯ ಎಲ್ಲಾ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಸಿಬ್ಬಂದಿಗೆ, ಹಾಗೂ ರೋಟರಿ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದರು.

Rotary Club of Shivamogga ಈ ಸಂದಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಡಿಕ್ಷನರಿ, ಪೆನ್, ನೋಟ್ ಬುಕ್ ಅನ್ನು ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ನ ವತಿಯಿಂದ ಪದಾಧಿಕಾರಿಗಳು ವಿತರಿಸಿದರು.

ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ್, ಇಂಟರಾಕ್ಟ್ ಕ್ಲಬ್ ನ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಶಾಲಾ ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಸೌರ ವಿದ್ಯುತ್ ಗೆ ರಾಜ್ಯದ ರೈತರಿಂದ ಹೆಚ್ಚಿನ ಬೇಡಿಕೆ: ಕುಸುಮ್ ಬಿ ಯೋಜನೆಯಿಂದ ಮಹತ್ವದ ಬದಲಾವಣೆ: ಸಚಿವ ಕೆ.ಜೆ.ಜಾರ್ಜ್

0

ರಾಜ್ಯ ಸರ್ಕಾರ ಕೃಷಿಯಲ್ಲಿ ಸೌರ ವಿದ್ಯುತ್ ಬಳಕೆಗೆ ಉತ್ತೇಜನ ಹೆಚ್ಚಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ರೈತರು ಅರ್ಜಿ ಸಲ್ಲಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 27,700 ಕ್ಕೂ ಹೆಚ್ಚು ಸೌರ ಕೃಷಿ ಪಂಪ್‌ಸೆಟ್‌ಗಳು ಕಾರ್ಯಾರಂಭ ಮಾಡಿದ್ದು, ಈ ಸೌರ ಕೃಷಿ ಪಂಪ್‌ಸೆಟ್‌ಗಳಿಂದ ರಾಜ್ಯದಲ್ಲಿ ಸುಮಾರು 144 ಮೆಗಾವ್ಯಾಟ್ ಗ್ರಿಡ್ ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ.

ಆರಂಭಿಕ ವರ್ಷಗಳಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದ್ದ ಯೋಜನೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷ ಆಸಕ್ತಿ, ನಿರಂತರ ಮೇಲ್ವಿಚಾರಣೆ ಹಾಗೂ ಆಡಳಿತಾತ್ಮಕ ಹಸ್ತಕ್ಷೇಪದಿಂದ ಹೊಸ ಚೈತನ್ಯ ದೊರೆತಿದೆ. ಇಂಧನ ಇಲಾಖೆ, ಎಸ್ಕಾಂಗಳು, ಅನುಷ್ಠಾನ ಸಂಸ್ಥೆಗಳು ಹಾಗೂ ಪೂರೈಕೆದಾರರ ಸಮನ್ವಯದಿಂದ ಅನುಷ್ಠಾನದಲ್ಲಿದ್ದ ಸಮಸ್ಯೆಗಳನ್ನು ಪರಿಹರಿಸಿದ ಬಳಿಕ ರೈತರ ಸ್ಪಂದನೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಒಂದು ಲಕ್ಷಕ್ಕೂ ಹೆಚ್ಚು ರೈತರು ಅರ್ಜಿ ಸಲ್ಲಿಸಿದ್ದು, ಇದು ಸೌರ ಕೃಷಿ ಪಂಪ್‌ಸೆಟ್‌ಗಳತ್ತ ರೈತರ ವಿಶ್ವಾಸ ಹೆಚ್ಚುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 27,700 ಕ್ಕೂ ಹೆಚ್ಚು ಸೌರ ಕೃಷಿ ಪಂಪ್‌ಸೆಟ್‌ಗಳು ಅಳವಡಿಕೆಯಾಗಿ ಕಾರ್ಯಾರಂಭ ಮಾಡಿದ್ದು, 40 ಸಾವಿರ ಪಂಪ್‌ಸೆಟ್‌ಗಳ ಗುರಿಯನ್ನು ಮುಟ್ಟುವತ್ತ ವೇಗವಾಗಿ ಮುನ್ನಡೆಯುತ್ತಿದೆ.

ಸೌರ ಕೃಷಿ ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಳ್ಳಲು ರೈತರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವೇ ಶೇ.50ರಷ್ಟು ಆರ್ಥಿಕ ಸಹಾಯಧನ ನೀಡುತ್ತಿದೆ. ಇದರಿಂದ ಸಾವಿರಾರು ರೈತರು ಕಡಿಮೆ ವೆಚ್ಚದಲ್ಲಿ ಸೌರ ವಿದ್ಯುತ್ ಬಳಸಲು ಸಾಧ್ಯವಾಗಿದೆ. ಇದರಿಂದ ಸಾಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆಯೂ ಕಡಿಮೆಯಾಗಿದೆ.

ಕುಸುಮ್‌ ಬಿ ಯೋಜನೆ ಅಡಿಯಲ್ಲಿ ಅಳವಡಿಸಿರುವ ಸೌರ ಪಂಪ್‌ಸೆಟ್‌ಗಳು ರೈತರ ಬದುಕಿನಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರಾತ್ರಿ ವೇಳೆ ಹೊಲಗಳಿಗೆ ತೆರಳಿ ಪಂಪ್‌ಗಳನ್ನು ಚಾಲನೆ ಮಾಡುವುದು, ನೀರಾವರಿಗಾಗಿ ಇಡೀ ರಾತ್ರಿ ಜಾಗರಣೆ ಮಾಡುವುದು ಮೊದಲಾದ ಸಮಸ್ಯೆಗಳಿಂದ ರೈತರಿಗೆ ಮುಕ್ತಿ ದೊರಕುತ್ತಿದೆ. ಹಗಲಿನ ವೇಳೆಯಲ್ಲೇ ವಿಶ್ವಾಸಾರ್ಹ ವಿದ್ಯುತ್ ಲಭ್ಯವಾಗುತ್ತಿರುವುದರಿಂದ ರೈತರ ಸುರಕ್ಷತೆ, ಅನುಕೂಲತೆ ಹಾಗೂ ಉತ್ಪಾದಕತೆ ಹೆಚ್ಚುತ್ತಿದೆ.

ಕಾರ್ಯಾರಂಭ ಮಾಡಿರುವ ಈ ಸೌರ ಕೃಷಿ ಪಂಪ್‌ಸೆಟ್‌ಗಳಿಂದ ರಾಜ್ಯದಲ್ಲಿ ಸುಮಾರು 144 ಮೆಗಾವ್ಯಾಟ್ ಗ್ರಿಡ್ ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ. ಇದರೊಂದಿಗೆ ವರ್ಷಕ್ಕೆ 240 ಮಿಲಿಯನ್ ಯೂನಿಟ್ ವಿದ್ಯುತ್ ಖರೀದಿಯನ್ನು ತಪ್ಪಿಸುವ ಮೂಲಕ ಎಸ್ಕಾಂಗಳಿಗೆ ಸುಮಾರು ₹146 ಕೋಟಿ ವಿದ್ಯುತ್ ಖರೀದಿ ವೆಚ್ಚ ಉಳಿತಾಯವಾಗಲಿದೆ. ಜೊತೆಗೆ, ಕೃಷಿ ಪಂಪ್‌ಸೆಟ್‌ಗಳಿಗೆ ನೀಡುವ ವಿದ್ಯುತ್ ಸಹಾಯಧನದಲ್ಲಿ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ ಸುಮಾರು ₹200 ಕೋಟಿ ಉಳಿತಾಯ ಆಗಲಿದೆ.

“ಕರ್ನಾಟಕದ ಸೌರ ಕೃಷಿ ಕ್ರಾಂತಿ ಸುಸ್ಥಿರ ಕೃಷಿ ಹಾಗೂ ಉತ್ತಮ ಆಡಳಿತಕ್ಕೆ ಹೊಸ ಮಾದರಿಯಾಗಿದೆ. ಯೋಜನೆಯ ಅನುಷ್ಠಾನದಲ್ಲಿದ್ದ ಅಡೆತಡೆಗಳನ್ನು ನಿವಾರಿಸಿ, ಪ್ರಕ್ರಿಯೆಯನ್ನು ಸರಳಗೊಳಿಸಿ ಹೊಸ ವೇಗ ನೀಡಿದ್ದೇವೆ. ಪ್ರತಿಯೊಂದು ಸೌರ ಕೃಷಿ ಪಂಪ್‌ಸೆಟ್ ಕರ್ನಾಟಕದ ಭವಿಷ್ಯಕ್ಕೆ ಮಾಡುವ ಶಾಶ್ವತ ಹೂಡಿಕೆಯಾಗಿದೆ. ಇದು ರಾಜ್ಯದ ವಿದ್ಯುತ್ ಖರೀದಿ ವೆಚ್ಚವನ್ನು ಕಡಿಮೆ ಮಾಡುತ್ತದೆ, ವಿದ್ಯುತ್ ಸಹಾಯಧನದ ಹೊರೆ ತಗ್ಗಿಸುತ್ತದೆ, ಇಂಧನ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುತ್ತದೆ. ಇದು ಕೇವಲ ನವೀಕರಿಸಬಹುದಾದ ಇಂಧನ ಯೋಜನೆಯಲ್ಲ; ರಾಜ್ಯದ ಆರ್ಥಿಕ ಹಾಗೂ ಸಾಮಾಜಿಕ ಪರಿವರ್ತನೆಗೆ ದಾರಿಯಾಗಿರುವ ಮಹತ್ವದ ಕಾರ್ಯಕ್ರಮವಾಗಿದೆ.” ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ ಜೆ ಜಾರ್ಜ್‌ ತಿಳಿಸಿದ್ದಾರೆ .

ಪ್ರಮುಖ ಅಂಶಗಳು:

  • 27,700 ಕ್ಕೂ ಹೆಚ್ಚು ಸೌರ ಕೃಷಿ ಪಂಪ್‌ಸೆಟ್‌ಗಳು ರಾಜ್ಯಾದ್ಯಂತ ಕಾರ್ಯಾರಂಭ.
  • ಸಚಿವ ಕೆಜೆ ಜಾರ್ಜ್‌ ಅವರ ಮುತುರ್ವಜಿಯಿಂದ 1 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಸ್ವೀಕಾರ.
  • ಸೌರ ಕೃಷಿ ಪಂಪ್‌ಸೆಟ್ ಅಳವಡಿಕೆಗೆ ಕರ್ನಾಟಕ ಸರ್ಕಾರದಿಂದ ಶೇ.50ರಷ್ಟು ಆರ್ಥಿಕ ಸಹಾಯಧನ.
  • 144 ಮೆಗಾವ್ಯಾಟ್ ಗ್ರಿಡ್ ವಿದ್ಯುತ್ ಬೇಡಿಕೆ ಕಡಿತ.
  • ವರ್ಷಕ್ಕೆ 240 ಮಿಲಿಯನ್ ಯೂನಿಟ್ ವಿದ್ಯುತ್ ಖರೀದಿ ತಪ್ಪಿಸುವ ಸಾಧನೆ.
  • ಎಸ್ಕಾಂಗಳಿಗೆ ವರ್ಷಕ್ಕೆ ಸುಮಾರು ₹146 ಕೋಟಿ ವಿದ್ಯುತ್ ಖರೀದಿ ವೆಚ್ಚ ಉಳಿತಾಯ.
  • ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ ಸುಮಾರು ₹200 ಕೋಟಿ ಗೂ ಹೆಚ್ಚು ಕೃಷಿ ವಿದ್ಯುತ್ ಸಹಾಯಧನ ಉಳಿತಾಯ.
  • ಹಗಲಿನ ವೇಳೆಯಲ್ಲೇ ವಿಶ್ವಾಸಾರ್ಹ ವಿದ್ಯುತ್ ಲಭ್ಯವಾಗುವುದರಿಂದ ರೈತರ ಸುರಕ್ಷತೆ, ಅನುಕೂಲತೆ ಹಾಗೂ ಉತ್ಪಾದಕತೆ ಹೆಚ್ಚಳ.

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

0

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಹವಾಮಾನಾಧಾರಿತ ಬೆಳೆ ವಿಮೆ (WBCIS) ಯೋಜನೆಯ ಪ್ರೀಮಿಯಂ ಪಾವತಿಸಲು ನಿಗದಿಪಡಿಸಿರುವ ಅಂತಿಮ ದಿನಾಂಕವನ್ನು ತಕ್ಷಣ ವಿಸ್ತರಿಸುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಜುಲೈ ಅಂತ್ಯದ ವೇಳೆಗೆ ಸಾಮಾನ್ಯವಾಗಿ 249 ಮಿ.ಮೀ. ಮಳೆಯಾಗಬೇಕಿದ್ದರೆ, ಕೇವಲ 165 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.34 ರಷ್ಟು ಮಳೆ ಕೊರತೆ ದಾಖಲಾಗಿದೆ. ಮಳೆಯ ಅಭಾವದಿಂದ ಬಿತ್ತನೆ ಕಾರ್ಯ ವಿಳಂಬವಾಗಿದ್ದು, ಅನೇಕ ಕಡೆಗಳಲ್ಲಿ ಬೆಳೆಗಳು ಸಮರ್ಪಕವಾಗಿ ಬೆಳೆಯದೇ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಶೇ.44 ರಷ್ಟು ಮಳೆ ಕೊರತೆ ದಾಖಲಾಗಿದ್ದು, ರೈತರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.
2026–27ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಕಾಳು ಮೆಣಸು, ಶುಂಠಿ ಹಾಗೂ ಮಾವು ಬೆಳೆಗಳಿಗೆ ವಿಮೆ ಮಾಡಿಸಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ ರೈತರಿಗೆ ನಿಗದಿತ ಅವಧಿಯೊಳಗೆ ಪ್ರೀಮಿಯಂ ಪಾವತಿಸುವುದು ಕಷ್ಟಕರವಾಗಿದೆ ಎಂದು ಸಂಸದರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಳೆಮಾಪನ ಕೇಂದ್ರಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಂಸದರು ಎರಡು ಬಾರಿ ಅಧಿಕಾರಿಗಳ ಸಭೆ ನಡೆಸಿದ್ದರು. ಜಿಲ್ಲೆಯ 280 ಮಳೆಮಾಪನ ಯಂತ್ರಗಳಲ್ಲಿ ಕೇವಲ 112 ಯಂತ್ರಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಪರಿಣಾಮ ಈಗಾಗಲೇ 205 ಯಂತ್ರಗಳು ಪುನಃ ಕಾರ್ಯನಿರ್ವಹಿಸುತ್ತಿವೆ. ಉಳಿದ 75 ಯಂತ್ರಗಳಲ್ಲಿ 34 ಯಂತ್ರಗಳನ್ನು ಹೊಸದಾಗಿ ಅಳವಡಿಸಲಾಗುತ್ತಿದ್ದು, ಉಳಿದ 41 ಯಂತ್ರಗಳನ್ನು ಆಗಸ್ಟ್ 5ರೊಳಗೆ ದುರಸ್ತಿಪಡಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ಸೂಚಿಸಿದ್ದಾರೆ.
ಈ ಹಿಂದೆ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಬೆಳೆ ವಿಮೆ ನೋಂದಣಿಗೆ ಅವಕಾಶವಿದ್ದರೂ, ಈ ಬಾರಿ ರೈತರು ಸಾಲ ಪಡೆದಿರುವ ಬ್ಯಾಂಕ್ ಅಥವಾ ಸಹಕಾರ ಸಂಘಗಳಲ್ಲಿಯೇ ಪ್ರೀಮಿಯಂ ಪಾವತಿಸಬೇಕಾದ ಕಾರಣ ಬ್ಯಾಂಕ್‌ಗಳಲ್ಲಿ ಒತ್ತಡ ಹೆಚ್ಚಾಗಿದೆ. ಸರ್ವರ್ ಸಮಸ್ಯೆ ಹಾಗೂ ತಾಂತ್ರಿಕ ಅಡಚಣೆಗಳಿಂದ ರೈತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಹಿತದೃಷ್ಟಿಯಿಂದ ಬೆಳೆ ವಿಮೆ ಪ್ರೀಮಿಯಂ ಪಾವತಿ ದಿನಾಂಕವನ್ನು ಕನಿಷ್ಠ ಕೆಲವು ವಾರಗಳವರೆಗೆ ವಿಸ್ತರಿಸಿ, ಯಾವುದೇ ರೈತ ವಿಮಾ ಸೌಲಭ್ಯದಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ಆಗ್ರಹಿಸಿದ್ದಾರೆ.

ಬ್ರಾಹ್ಮಣ ಸಮುದಾಯದ ಆರ್ಥಿಕ ಹಿಂದುಳಿದ ಕುಟುಂಬಗಳ ಸಬಲೀಕರಣಕ್ಕೆ ಸರ್ಕಾರ ಬದ್ಧ- ಡಿಸಿಎಂ ಡಾ.ಜಿ.ಪರಮೇಶ್ವರ

0

ಬ್ರಾಹ್ಮಣ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.

ಈ ಉದ್ದೇಶದಿಂದಲೇ 2019ರಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದ್ದು, ಸಮುದಾಯದ ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗುವ ಉದ್ದೇಶದಿಂದ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಂಡಳಿಯ ಮೂಲಕ ಇದುವರೆಗೆ ಸುಮಾರು 87 ಕೋಟಿ ರೂಪಾಯಿ ನೆರವು ಫಲಾನುಭವಿಗಳಿಗೆ ತಲುಪಿದೆ. ಅರ್ಜಿಗಳನ್ನು ಆಹ್ವಾನಿಸಿ, ಅರ್ಹರನ್ನು ಗುರುತಿಸಿ ಅವರಿಗೆ ನೇರ ಸಾಲ ಸೌಲಭ್ಯ ಒದಗಿಸುವ ಕಾರ್ಯವನ್ನು ಮಂಡಳಿ ಸಮರ್ಥವಾಗಿ ನಿರ್ವಹಿಸುತ್ತಿದೆ ಎಂದು ಪರಮೇಶ್ವರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಲ್ಲಿಯವರೆಗೆ ಸುಮಾರು 1,333 ಅರ್ಜಿಗಳನ್ನು ಪರಿಶೀಲಿಸಿ ಫಲಾನುಭವಿಗಳಿಗೆ ನೇರ ಸಾಲ ಮಂಜೂರು ಮಾಡಲಾಗಿದೆ. ಸಾಲ ಪಡೆದವರು ಅದನ್ನು ಉದ್ದೇಶಿತ ಸ್ವ ಉದ್ಯೋಗ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಕಾರ್ಯವೈಖರಿಯನ್ನು ಶ್ಲಾಘಿಸಿದ ಡಾ.ಜಿ. ಪರಮೇಶ್ವರ, ಸರ್ಕಾರದ ಯೋಜನೆಗಳು ಅಗತ್ಯವಿರುವ ಕುಟುಂಬಗಳಿಗೆ ಪರಿಣಾಮಕಾರಿಯಾಗಿ ತಲುಪುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರು, ನಿರ್ದೇಶಕರು ಹಾಗೂ ಸಿಬ್ಬಂದಿಯ ಕಾರ್ಯವನ್ನು ಅಭಿನಂದಿಸಿದ್ದಾರೆ.

ಮುಂದಿನ ದಿನಗಳಲ್ಲಿಯೂ ಸಮುದಾಯದ ಅಭಿವೃದ್ಧಿಗೆ ಇನ್ನಷ್ಟು ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿರುವ ಅವರು, 2026–27ನೇ ಸಾಲಿನ ವಿವಿಧ ಯೋಜನೆಗಳಿಗೆ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದಿದ್ದಾರೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಿ ಸರ್ಕಾರದ ಈ ಸೌಲಭ್ಯದ ಪ್ರಯೋಜನ ಪಡೆಯುವಂತೆ ಡಾ.ಜಿ. ಪರಮೇಶ್ವರ ಮನವಿ ಮಾಡಿದ್ದಾರೆ.

ಎಸ್ಐ ಆರ್ ಪ್ರಕ್ರಿಯೆ ಅವಧಿಯನ್ನ ಆಗಸ್ಟ್ 8 ವರೆಗೆ ವಿಸ್ತರಿಸಲಾಗಿದೆ. ಮತದಾರರು ಸದುಪಯೋಗಿಸಿಕೊಳ್ಳಿ- ಗ್ರಾಮಾಂತರ ಕ್ಷೇತ್ರದ ಚುನಾವಣಾಧಿಕಾರಿ ಮಂಜುನಾಥ್

0

ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿದ್ದು, ಅರ್ಹ ಮತದಾರರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸೂಡಾ ಆಯುಕ್ತ ಮಂಜುನಾಥ್ ಅವರು ಹೇಳಿದರು.
ಅವರು ಶಿವಮೊಗ್ಗ ನಗರದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಆಗಸ್ಟ್ 8ರ ಕೊನೆಯ ದಿನದವರೆಗೂ ಬಿಎಲ್‌ಒ (BLO) ಮನೆಮನೆ ಭೇಟಿಗೆ ನೀಡಿ ಮಾಹಿತಿ ಸಂಗ್ರಹಿಸುವರು. ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ನಂತರ ಸೆಪ್ಟೆಂಬರ್ 16 ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಧಿ ಇರುತ್ತದೆ. ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಅಕ್ಟೋಬರ್ 15ರೊಳಗಾಗಿ ವಿಲೇವಾರಿ ಮಾಡಲಾಗುವುದು. ಅಕ್ಟೋಬರ್ 19ರಂದು ಮತದಾರರ ಪಟ್ಟಿಯ ಅಂತಿಮ ಪಟ್ಟಿ ಪ್ರಕಟಗೊಳ್ಳಿದೆ ಎಂದವರು ನುಡಿದರು.
ಶಿವಮೊಗ್ಗ ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು 2,20,250 ಅರ್ಹ ಮತದಾರರಿದ್ದು, ಈ ಪೈಕಿ 2,17,015 ಮತದಾರರನ್ನು ಡಿಜಿಟಲೀಕರಿಸಿ ಶೇ.98.53ರಷ್ಟು ಪ್ರಗತಿ ಸಾಧಿಸಲಾಗಿದೆ. ಇನ್ನೂ 1283ಮಂದಿ ಮತದಾರರು ನೋಂದಣಿ ಕಾರ್ಯದಲ್ಲಿ ಭಾಗವಹಿಸಿರುವುದರಿಂದ ಹಿಂದುಳಿದಿದ್ದಾರೆ. ಅವರನ್ನು ಸದರಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿತರಾದ 249 ಮತಗಟ್ಟೆ ಅಧಿಕಾರಿಗಳು ಮತದಾರರ ಮನೆಮನೆಗೆ ತೆರಳಿ ಅವರಿಂದ ಮಾಹಿತಿ ಪಡೆದು ಅಪ್‌ಲೋಡ್‌ ಮಾಡಲಿದ್ದಾರೆ ಎಂದವರು ನುಡಿದರು.
ಮತದಾರರ ಪಟ್ಟಿಯಲ್ಲಿ ಗೈರಾಗಿರುವವರು, ಮರಣ ಹೊಂದಿದವರು, ಸ್ಥಳಾಂತರಗೊಂಡಿರುವ ಕುಟುಂಬಗಳು ಹಾಗೂ ಎರೆಡೆರೆಡು ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ಉಳಿಸಿಕೊಂಡಿರುವವರು ಸೇರಿದಂತೆ ಒಟ್ಟು 17147ಜನರನ್ನು ಗುರುತಿಸಲಾಗಿದೆ. ಆ ಪೈಕಿ 5517ಮತದಾರರು ಮರಣ ಹೊಂದಿರುವುದನ್ನು ಗುರುತಿಸಲಾಗಿದೆ. ಗುರುತಿಸಲಾಗದ ಅಥವಾ ಗೈರಾಗಿರುವ 1283ಮಂದಿಯನ್ನು ಗುರುತಿಸಲಾಗಿದೆ. ತಾಲೂಕಿನಲ್ಲಿ ಒಟ್ಟು ಮತದಾರರಲ್ಲಿ 8108ಮತದಾರರು ಸ್ಥಳಾಂತರಗೊಂಡಿರುವುದನ್ನು ಗುರುತಿಸಲಾಗಿದೆ. ಉಳಿದ ಹಾಗೂ ಈವರೆಗೆ ಮಾಹಿತಿಯನ್ನು ನೀಡದಿರುವವರ ಮನೆಮನೆಗೆ ಮತಗಟ್ಟೆ ಅಧಿಕಾರಿಗಳು ತೆರಳಿ ಮಾಹಿತಿ ಪಡೆಯುವ ಕಾರ್ಯವನ್ನು ಮುಂದುವರೆಸಲಿದ್ದಾರೆ ಎಂದರು.
ಈ ಎಲ್ಲಾ ಮಾಹಿತಿಯನ್ನು ರಾಷ್ಟ್ರೀಯ ಮತ್ತು ಸ್ಥಳೀಯ ರಾಜಕೀಯ ಪಕ್ಷಗಳ ಮುಖಂಡರಿಗೆ ಈ ಕುರಿತು ಕಾಲಕಾಲಕ್ಕೆ ಮಾಹಿತಿ ನೀಡಲಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಸಹಕರಿಸುವಂತೆ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಬಾರಿ ಸಭೆಗಳನ್ನು ನಡೆಸಿ, ಮಾಹಿತಿ ನೀಡಲಾಗಿದೆ ಎಂದವರು ನುಡಿದರು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾ ಅಧಿಕಾರಿ ಹಾಗೂ ತಹಶೀಲ್ದಾರ್‌ ರಾಜೀವ್‌ ಅವರು ಉಪಸ್ಥಿತರಿದ್ದರು.

District Consumer Disputes Redressal Commission ಕಾನೂನುಬಾಹಿರವಾಗಿ ಜೆಸಿಬಿ ಜಪ್ತಿ : ಫೈನಾನ್ಸ್ ಕಂಪನಿಗೆ ದಂಡ ವಿಧಿಸಿದ ಜಿಲ್ಲಾ ಗ್ರಾಹಕರ ಆಯೋಗ

0

District Consumer Disputes Redressal Commission ಯಾವುದೇ ಪೂರ್ವ ನೋಟೀಸ್ ನೀಡದೆ ಕಾನೂನುಬಾಹಿರವಾಗಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿ ಸೇವಾ ನ್ಯೂನ್ಯತೆ ಎಸಗಿದ್ದ ಎಚ್.ಡಿ.ಬಿ ಫೈನಾನ್ಸ್ ಸರ್ವೀಸಸ್ ಸಂಸ್ಥೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸೂಕ್ತ ಆದೇಶ ಹಾಗೂ ದಂಡ ವಿಧಿಸಿದೆ.
ಸೊರಬ ತಾಲೂಕಿನ ಬೆನ್ನೂರು ಗ್ರಾಮದ ಮಂಜಪ್ಪ ಕೆ. ಎಂಬುವರು ಎಚ್.ಡಿ.ಬಿ ಫೈನಾನ್ಸ್ ಸರ್ವೀಸಸ್‌ನಿಂದ ರೂ.31,67,455/- ಸಾಲ ಪಡೆದು ಜೆಸಿಬಿ ಖರೀದಿಸಿದ್ದರು. ಪ್ರತಿ ತಿಂಗಳು ರೂ.71,500/- ಕಂತು ಪಾವತಿಸಬೇಕಿದ್ದು, ಪ್ರತಿ ತಿಂಗಳೂ ಸರಿಯಾಗಿ ಪಾವತಿಸುತ್ತಿದ್ದರು. ಆದರೆ, ಅಧಿಕ ಮಳೆ ಹಾಗೂ ಜೆಸಿಬಿ ರಿಪೇರಿ ಕಾರಣದಿಂದ 3 ತಿಂಗಳ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ.
ಯಾವುದೇ ಮುನ್ಸೂಚನೆ ಅಥವಾ ನೋಟೀಸ್ ನೀಡದೆ, 2025ರ ಆಗಸ್ಟ್ 6ರಂದು ಫೈನಾನ್ಸ್ ಸಂಸ್ಥೆಯವರು ಬಲವಂತವಾಗಿ ಜೆಸಿಬಿ ಯನ್ನು ವಶಪಡಿಸಿಕೊಂಡಿದ್ದರು. ನಂತರ ದೂರುದಾರರು ರೂ.1,00,000/- ಹಣ ಪಾವತಿಸಿ ಯಂತ್ರವನ್ನು ಹಿಂತಿರುಗಿಸುವಂತೆ ಕೋರಿದರೂ ಫೈನಾನ್ಸ್‌ನವರು ಸಂಪೂರ್ಣ ಸಾಲದ ಮೊತ್ತ ಪಾವತಿಸುವಂತೆ ಪಟ್ಟು ಹಿಡಿದಿದ್ದರು. ಇದರಿಂದ ನೊಂದ ದೂರುದಾರರು ವಕೀಲರ ಮೂಲಕ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ತೀರ್ಪು:
District Consumer Disputes Redressal Commission ದೂರುದಾರರು ಮತ್ತು ಎದುರುದಾರರ ವಾದ-ವಿವಾದಗಳನ್ನು ಆಲಿಸಿದ ಜಿಲ್ಲಾ ಗ್ರಾಹಕರ ಆಯೋಗವು, ಆರ್‌ಬಿಐ ನಿಯಮಗಳು ಹಾಗೂ ಉಚ್ಚ ನ್ಯಾಯಾಲಯ/ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಫೈನಾನ್ಸ್ ಕಂಪನಿಯು ಸೇವಾ ನ್ಯೂನ್ಯತೆ ಎಸಗಿದೆ ಎಂದು ತೀರ್ಮಾನಿಸಿದೆ.
ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಹಾಗೂ ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯರವರನ್ನೊಳಗೊಂಡ ಪೀಠವು ಈ ಆದೇಶ ನೀಡಿದ್ದು, ಆದೇಶವಾದ 45 ದಿನಗಳ ಒಳಗೆ ಫೈನಾನ್ಸ್ ಕಂಪನಿಯು ದೂರುದಾರರಿಗೆ ಜೆಸಿಬಿ ಯನ್ನು ಹಿಂತಿರುಗಿಸಬೇಕು.
45 ದಿನಗಳ ನಂತರ ಜೆಸಿಬಿ ನೀಡುವವರೆಗೆ, ವಿಳಂಬವಾಗುವ ಪ್ರತಿದಿನಕ್ಕೆ ರೂ.2,000/- ಗಳಂತೆ ದೂರುದಾರರಿಗೆ ಪಾವತಿಸಬೇಕು.
ದೂರುದಾರರಿಗೆ ಆದ ನಷ್ಟಕ್ಕೆ ಪರಿಹಾರವಾಗಿ ರೂ.10,000/- ಹಾಗೂ ದೂರಿನ ವೆಚ್ಚವನ್ನು 45 ದಿನಗಳ ಒಳಗೆ ಪಾವತಿಸಬೇಕು. ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ನೀಡಬೇಕಾಗುತ್ತದೆ ಎಂದು ಆದೇಶಿಸಿದೆ.

ಶಿವಮೊಗ್ಗದಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆಯಿಂದ “ಮಾನ್ಸೂನ್ ಮಾರಾಟ ಮೇಳ”

0

ಶಿವಮೊಗ್ಗ ನಗರದ ಪಂಪನಗರ 2ನೇ ತಿರುವು ಗುತ್ತ್ಯಪ್ಪ ಕಾಲೋನಿ, ಇಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಮಾನ್ಸೂನ್ ಮಾರಾಟ ಮೇಳವನ್ನು ಆ.05 ರಂದು ಆಯೋಜಿಸಲಾಗಿದೆ.

ಸುಮಾರು 36 ವರ್ಷದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಕೊಡುತ್ತಾ ಬರುತ್ತಿರುವ ಈ ಸಂಘವು ಕಾಂಚಿಪುರಂನಿಂದ ಬರುತ್ತಿರುವ ರೇಷ್ಮೆ ಸೀರೆಗಳ ನೇರ ಮಾರಾಟ, ಕಾಶಿ ಇಂದ ಬನಾರಸ್ ಸೀರೆಗಳು, ಫ್ಯಾನ್ಸಿ ಸೀರೆಗಳು, ಡ್ರೆಸ್ ಗಳು, ಬೆಡ್ ಲೈನರ್, ಗೃಹಪಯೋಗಿ ವಸ್ತುಗಳು, ಅಲಂಕಾರಿಕ ಸಾಮಾಗ್ರಿಗಳು, ಮನೆಯಲ್ಲಿ ತಯಾರಿಸಿದ ರುಚಿಕರ ಸಸ್ಯಾಹಾರಿ ಹಾಗೂ ಮಾಂಸಾಹಾರಿ ತಿನಿಸುಗಳ ಪ್ರದರ್ಶನ ಹಾಗೂ ಮಾರಾಟವನ್ನು ನಡೆಸಲಿದೆ.

ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುತ್ತಿರುವ ಮಹಿಳಾ ಉದ್ಯಮಿಗಳನ್ನು ಕಾರ್ಯಕ್ರಮಕ್ಕೆ ಹುರಿದುಂಬಿಸಲು ಆಹ್ವಾನಿಸಲಾಗುತ್ತಿದೆ. ಮಲೆನಾಡಿನ ತಿಂಡಿ ತಿನಿಸುಗಳ ಸ್ಟಾಲ್ ಗಳನ್ನು ಹಳೆಯ ಝರಿ ಸೀರೆಯನ್ನು ಒಳ್ಳೆಯ ಬೆಲೆಯಲ್ಲಿ ತೆಗೆದುಕೊಳ್ಳಲಾಗುವುದು.

ಸಂಘದ ಅಧ್ಯಕ್ಷೆ ಸುಮಿತ್ರಾ ಕೇಶವ್ ಮೂರ್ತಿ,
ಕಾರ್ಯದರ್ಶಿ ನಳಿನಿ ಜಯರಾಮ್ ಹಾಗೂ ಖಜಾಂಜಿ ಸುಜಾತ ವೆಂಕಟೇಶ್, ಕಮಿಟಿ ಹಾಗೂ ಸಂಘದ ಸದಸ್ಯನಿಯರು ಉಪಸ್ಥಿತರಿರುವರು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9448912789, 9448792064, 7019750556 ನ್ನು ಸಂಪರ್ಕಿಸಬಹುದಾಗಿದೆ.

ಆಗಸ್ಟ್ 15, “ಸಂಭ್ರಮದ ಸ್ವಾತಂತ್ರ್ಯೋತ್ಸವ” ಆಚರಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

0

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಆಗಸ್ಟ್‌ 15ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಿಯಮಾನುಸಾರ ಅಂದು ಬೆಳಿಗ್ಗೆ 9ಗಂಟೆಗೆ ಧ್ವಜಾರೋಹಣ ಆಹ್ವಾನಿತ ಗಣ್ಯರಿಂದ ನಡೆಯಲಿದೆ. ಅಂತೆಯೇ ಗಣ್ಯರಿಂದ ಸಂದೇಶ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಎಲ್ಲಾ ಕಾರ್ಯಕ್ರಮಗಳು ಸುಗಮವಾಗಿ ನಡೆದುಕೊಂಡು ಹೋಗಲು ವಿವಿಧ ಇಲಾಖೆಗಳ ಜಿಲ್ಲಾ ಮಟ್ಡದ ಹಿರಿಯ ಅಧಿಕಾರಿಗಳ ಹಲವು ಸಮಿತಿಗಳನ್ನು ನೇಮಿಸಲಾಗಿದೆ ಎಂದವರು ತಿಳಿಸಿದರು.
ಸ್ವಾತಂತ್ರ ದಿನಾಚರಣೆಯ ಸಂಭ್ರಮವನ್ನು ಇಮ್ಮಡಿಗೊಳಿಸಲು ದಿನಾಚರಣೆಯ ಮುನ್ನಾ ದಿನದಂದು ನಗರದ ಎಲ್ಲಾ ಕಚೇರಿಗಳ ಮುಖ್ಯಸ್ಥರು ತಮ್ಮ ಕಚೇರಿ ಕಟ್ಟಡಗಳನ್ನು ಸರ್ಕಾರಿ ಕಚೇರಿ ಕಟ್ಟಡಗಳನ್ನು ಮತ್ತು ನಗರದ ಪ್ರಮುಖ ರಸ್ತೆ ಮತ್ತು ವರ್ತುಲಗಳನ್ನು ವಿದ್ಯುದ್ದೀಪ ಹಾಗೂ ತಳಿರು-ತೋರಣಗಳಿಂದ ಅಲಂಕರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಅವರು, ಸ್ಥಳೀಯ ಸರ್ಕಾರೇತರ ಸಂಘ-ಸAಸ್ಥೆಗಳು, ವಾಣಿಜ್ಯ ಸಂಸ್ಥೆಗಳೂ ಸಹ ಈ ಸಂಭ್ರಮಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಲಾಗುವುದು. ಸಮಾರಂಭ ನಡೆಯುವ ಪ್ರಧಾನ ವೇದಿಕೆ ಮತ್ತು ಕ್ರೀಡಾಂಗಣದ ಮುಂಭಾಗದಲ್ಲಿ ಸುಂದರವಾದ ಕಮಾನುಗಳನ್ನು ನಿರ್ಮಿಸಲಾಗುವುದು. ಅಂದು ಬೆಳಿಗ್ಗೆ ನೆಹರೂ ಕ್ರೀಡಾಂಗಣದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅದೇ ದಿನ ಸಂಜೆ ನಗರದ ಕುವೆಂಪು ರಂಗಮಂದಿರದಲ್ಲಿ ಪೊಲೀಸ್‌ ಬ್ಯಾಂಡ್‌ ಮತ್ತು ಶಾಲಾ ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದವರು ನುಡಿದರು.
ಸ್ವಾತಂತ್ರ್ಯೋತ್ಸವ ಭವ್ಯ ವೇದಿಕೆಯಲ್ಲಿ ವಿವಿವಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳನ್ನು ಗುರುತಿಸಿ ಗೌರವಿಸಲಾಗುವುದು. ಅಲ್ಲದೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಲಾಗುವುದು ಎಂದವರು ನುಡಿದರು.
ಸ್ವಾತಂತ್ರ‍್ಯೋತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸಲು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ನೀಡಲಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಲಾಗಿರುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆಯೂ ಸೂಚಿಸಲಾಗಿದೆ. ಈ ಅವಧಿಯಲ್ಲಿ ಸಂಭ್ರಮಾಚರಣೆಗೆ ಯಾವುದೇ ಚ್ಯುತಿಯಾಗದಂತೆ ಎಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಲಾಗಿದೆ ಎಂದವರು ನುಡಿದರು.
ಆಯೋಜನೆಯ ಜವಾಬ್ದಾರಿ ವಹಿಸಿಕೊಂಡಿರುವ ಅಧಿಕಾರಿಗಳು ವೇದಿಕೆ ಅಲಂಕಾರ, ರಾಷ್ಟ್ರಗೀತೆ, ನಾಡಗೀತೆ, ಪಥಸಂಚಲನ ಸಿದ್ಧತೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮುಂತಾದ ಎಲ್ಲಾ ಚಟುವಟಿಕೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಪೆರೇಡಿನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸಮರ್ಪಕ ತರಬೇತಿ ನೀಡಬೇಕು. ಮಕ್ಕಳು ಉತ್ತಮ ಶಾಲಾ ಸಮವಸ್ತ್ರದೊಂದಿಗೆ ಶಿಸ್ತುಬದ್ಧವಾಗಿ ಪೆರೇಡಿನಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸ್ವಾತಂತ್ರ‍್ಯ ಸೇನಾನಿಗಳನ್ನು ಆಹ್ವಾನಿಸಿ, ಕಾರ್ಯಕ್ರಮದ ನಂತರ ಅವರನ್ನು ಗೌರವಯುತವಾಗಿ ಬೀಳ್ಕೊಡುವ ಬಗ್ಗೆಯೂ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು.
ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಈ ಕಾರ್ಯಕ್ರಮಕ್ಕೆ ನಿಯಮಾನುಸಾರ ಗಣ್ಯರು, ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಆಹ್ವಾನಿಸಲಾಗುವುದು. ಅಂದು ನಡೆಯುವ ಆಕರ್ಷಕ ಪಥಸಂಚಲನದಲ್ಲಿ ಪೊಲೀಸ್‌, ಮೀಸಲು ಪಡೆ ಸಶಸ್ತ್ರ ಪೊಲೀಸ್‌, ಸೇವಾದಳ, ಸ್ಕೌಟ್ಸ್‌ ಅಂಡ್‌ ಗೈಡ್ಸ್‌, ಬಾಲಮಂದಿರ ಮಕ್ಕಳು ಸೇರಿದಂತೆ ನಗರದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುವರು. ವಿಶೇಷವಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಭಾರತ ಜೋಡೋ ಪರಿಕಲ್ಪನೆಯನ್ನು ಪ್ರತಿಬಿಂಬಿಸುವಂತೆ ಕಲಾ ಪ್ರದರ್ಶನ ನಡೆಸಲಾಗುವುದು. ಅಲ್ಲದೇ ಶಾಲಾ ಮಕ್ಕಳ ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ ವಿ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ತಹಶೀಲ್ದಾರ್‌ ರಾಜೀವ್‌ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Klive Special Article ವ್ಯಸನಮುಕ್ತ ಸಮಾಜದ ಕನಸು ಕಂಡ ಸಂತ. ಡಾ.ಮಹಾಂತ ಶಿವಯೋಗಿ.ವಿಶೇಷ ಬರಹ- ಬಿ.ವಿ.ತುಕಾರಾಂ. ಶಿವಮೊಗ್ಗ

0

Klive Special Article ದೇಶ ವಿದೇಶಗಳಲ್ಲಿ ಸಂಚರಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಅವಿರತವಾಗಿ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು. ಇಂತಹ ಮಹಾನ್ ಯೋಗಿಗಳ ಆಗಸ್ಟ್ 01 ರ ಜನ್ಮ ದಿನವನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಆಗಸ್ಟ್ 01, 1930 ರಲ್ಲಿ ಜನಿಸಿದ ಡಾ.ಮಹಾಂತ ಶಿವಯೋಗಿಗಳು ತಮ್ಮ 10ನೇ ವಯಸ್ಸಿಗೆ ಸವದಿಯ ವಿರಕ್ತಮಠದ ಕಿರಿಯ ಸ್ವಾಮೀಜಿಗಳಾದರು.

ಕಾಶಿಯಲ್ಲಿ ಸಂಸ್ಕøತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಪರಿಣಿತಿ ಸಾಧಿಸಿದರು. ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಬಂದ ಕಾರಣ ಕಾಶಿಯಿಂದ ಆಗಮಿಸಿ, ನೂರಾರು ಗ್ರಾಮಗಳಲ್ಲಿ ಗಂಜಿ ಕೇಂದ್ರ ಆರಂಭಿಸಿ ದಾಸೋಹ ಮಾಡಿದ್ದು ಮಾತ್ರವಲ್ಲದೇ ಗೋಶಾಲೆಗಳನ್ನು ಆರಂಭಿಸಿ ಮೇವು ಮತ್ತು ನೀರಿನ ವ್ಯವಸ್ಥೆ ಮಾಡಿದರು. 1970 ರಲ್ಲಿ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19ನೇ ಪೀಠಾಧಿಕಾರಿಯಾಗಿ ನಂತರ 2018 ರ ವರೆಗೆ ಅಖಂಡ 48 ವರ್ಷಗಳ ಕಾಲ ಅವರ ಸಾಧನೆ ಅಪಾರವಾದುದು.

ನಿರಂತರ ಅನ್ನ ದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನಾ ಸಂಸ್ಥೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ, ನಿರುದ್ಯೋಗಿಗಳಿಗೆ ಮತ್ತು ವಿಧವೆಯರಿಗೆ ಕಾಯಕ ಸಂಜೀವಿನಿ ಸಂಸ್ಥೆ ಸ್ಥಾಪನೆ, ನಿಸರ್ಗ ಚಿಕಿತ್ಸೆ-ಯೋಗ ಕೇಂದ್ರ ಸ್ಥಾಪನೆ, ಶಾಖಾ ಮಠಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಯುವಕರಿಗೆ ಧರ್ಮ ಸಂಸ್ಕಾರ ನೀಡಿ ಪಟ್ಟಾಭಿಷೇಕ ಮಾಡಿದ್ದು, ಮಹಿಳಾ ಸಾಧಕಿಯರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿಕಾರಿಯನ್ನಾಗಿ ಮಾಡಿದ್ದು, ಮಠದ ನೂರಾರು ಎಕರೆ ಭೂಮಿಯನ್ನು ಆಯಾ ಗ್ರಾಮಗಳ ರೈತರಿಗೆ ಕೃಷಿ ಮಾಡಿ ಬದುಕಲು ನೀಡಿದ್ದು ಮುಂತಾದ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದರು.

ಪ್ರಮುಖವಾಗಿ ಸ್ವಾಮೀಜಿಯವರು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ 1975 ರಿಂದ ಕೈಗೊಂಡ ಮಹಾಂತ ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಟವಾದುದು, ಕುಡಿತದ ಚಟದಿಂದ ಪರಿಶಿಷ್ಟ ಜಾತಿಯ ಯುವಕನೊಬ್ಬ ನಿಧನದ ಸುದ್ದಿ ಕೇಳಿ ಅವನ ಕೇರಿಗೆ ಸಾಂತ್ವನ ಹೇಳಲು ತೆರಳಿದ್ದ ಸ್ವಾಮಿಗಳಿಗೆ ಆತನ ಪತ್ನಿ ಮತ್ತು ಮಕ್ಕಳು ಉಪವಾಸದಿಂದ ದು:ಖಿಸುವುದನ್ನು ಕಂಡರು. ಇಂತಹ ಸಾವಿರಾರು ಕುಟುಂಬಗಳ ಕುಡಿತ ಮತ್ತು ಇತರೇ ದುಶ್ಚಟಗಳಿಂದ ಹಾಳಾಗಿರುವುದನ್ನು ಅರಿತು, ಇಂತಹ ದುಶ್ಚಟಗಳಿಗೆ ಒಳಗಾಗಿರುವವನ್ನು ಮುಕ್ತಿಗೊಳಿಸುವ ಉದ್ದೇಶದಿಂದ ಮಹಾಂತ ಜೋಳಿಗೆ ಯೋಜನೆ ಆರಂಭಿಸಿದರು.

ಬಟ್ಟೆಯ ಚೀಲದ ಜೋಳಿಗೆ ಹಿಡಿದು, ಕುಡಿತದ ಚಟದಿಂದ ನಿಧನನಾದ ಪರಿಶಿಷ್ಟ ಜಾತಿಯ ಯುವಕನ ಕೇರಿಗೆ ಮೊದಲಿಗೆ ತೆರಳಿದ ಸ್ವಾಮೀಜಿಗಳು, ಅಲ್ಲಿನ ಗುಡಿಸಲು ಮನೆಗಳಿಗೆ ತೆರಳಿ ಮದ್ಯಪಾನ, ತಂಬಾಕು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳ ಬಗ್ಗೆ ಅಲ್ಲಿನ ಜನತೆಗೆ ಮನ ಮುಟ್ಟುವಂತೆ ತಿಳುವಳಿಕೆ ನೀಡಿ ಮನಪರಿವರ್ತನೆ ಮಾಡಿದರು.
ದುರ್ವಸನಿಗಳು ತಮ್ಮ ಎಲ್ಲಾ ದುಶ್ಚಟಗಳ ವಸ್ತುಗಳನ್ನು ಸ್ವಾಮೀಜಿ ಅವರ ಜೋಳಿಗೆಗೆ ಹಾಕಿ, ಇನ್ನೆಂದೂ ಅವುಗಳನ್ನು ಬಳಸುವುದಿಲ್ಲ ಎಂದು ಪ್ರಮಾಣ ಮಾಡಿದರು. ಜಾತಿ-ಮತ-ಪಂಗಡ-ಧರ್ಮ-ಭಾಷೆ-ದೇಶವೆನ್ನದೇ ಇಡೀ 42 ವರ್ಷಗಳ ಕಾಲ ದೇಶದಲ್ಲಿ ಮಾತ್ರವಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ತಮ್ಮ ಮಹಾಂತ ಜೋಳಿಗೆ ಹಿಡಿದು ಜನರಲ್ಲಿನ ದುಶ್ಚಟಗಳ ಭಿಕ್ಷೆ ಬೇಡಿದರು.

ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ವ್ಯಕ್ತಿ-ಕುಟುಂಬ-ಸಮಾಜ-ಗ್ರಾಮಗಳ ನಿರ್ಮಾಣ ಮಾಡುವ ಜೊತೆಗೆ ತಮ್ಮ ಜೋಳಿಗೆ ಕಾರ್ಯಕ್ರಮದಲ್ಲಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು, ಸಮಾಜ ಕಳಕಳಿಯ ಕವಿಗಳು, ಧರ್ಮ ಗುರುಗಳನ್ನು ಆಹ್ವಾನಿಸಿ ಅವರಿಂದ ಉಪನ್ಯಾಸಗಳನ್ನು ಮಾಡಿಸುವ ಮೂಲಕ ವ್ಯಸನಗಳ ಮನಪರಿವರ್ತನೆ ಮಾಡುವುದರ ಜೊತೆಗೆ ಮಕ್ಕಳು, ವಿದ್ಯಾರ್ಥಿಗಳು-ಯುವ ಜನಾಂಗ ಇಂತಹ ಚಟಗಳಿಗೆ ಬಲಿಯಾದಂತೆ ಅರಿವು ಮೂಡಿಸುತ್ತಿದ್ದರು. ಇದರಿಂದಾಗಿ ಲಕ್ಷಾಂತರ ಜನ ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತಿವೆ.

Klive Special Article ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನವಾದ ಆಗಸ್ಟ್ 01 ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ನಿರ್ಧರಿಸಿ ಆದೇಶಿಸಿದ್ದು, ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯವಾಗಿ ಮಾಡಲು ಸಾರ್ವಜನಿಕರು ಹಾಗೂ ಯುವಜನತೆ ವ್ಯಸನಗಳಿಂದ ಮುಕ್ತವಾಗಲು ಈ ದಿನಾಚರಣೆಯು ಪ್ರೇರಣೆಯಾಗಲಿದೆ.

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ‌ ಮಂಡಳಿ ವತಿಯಿಂದ ಆಗಸ್ಟ್ 1 ರಂದು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸುವ ವಚನ ಪ್ರಮಾಣ ಹಾಗೂ ಕಾರ್ಯಕ್ರಮ ಆಯೋಜಿಸಿ ಶ್ರೀಗಳ ಜಯಂತಿ ಆಚರಿಸಲಾಗುತ್ತಿದೆ.